ತುರುವೇಕೆರೆ
ಬೆಂಗಳೂರಿನ ಮಿಂಟೋ ಕಣ್ಣಿನ ಆಸ್ಪತ್ರೆಯ ವೈದ್ಯರ ನಿರ್ಲಕ್ಷö್ಯದಿಂದಾಗಿ ಅಮಾಯಕರು ತಮ್ಮ ಕಣ್ಣುಗಳನ್ನೆ ಕಳೆದುಕೊಂಡಿದ್ದಾರೆ. ಇಂತಹ ಪ್ರಮಾದವೆಸಗಿರುವ ವೈದ್ಯರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಹಾಗೂ ಕಣ್ಣು ಕಳೆದುಕೊಂಡವರಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ತಾಲ್ಲೂಕು ದಂಡಾಧಿಕಾರಿ ನಯೀಮ್ ಉನ್ನಿಸ್ಸಾರವರಿಗೆ ಮಂಗಳವಾರ ಮನವಿ ಪತ್ರ ನೀಡಿದ ಪದಾಧಿಕಾರಿಗಳು ವೈದ್ಯರ ನಿರ್ಲಕ್ಷö್ಯಕ್ಕೆ 22 ಮಂದಿ ಬಲಿಯಾಗಿದ್ದಾರೆ. ಇವರಲ್ಲಿ ಬಹುಪಾಲು ಮಂದಿ ಬಡವರೆ ಆಗಿದ್ದಾರೆ. ಪ್ರತಿದಿನ ಕೂಲಿ ಕೆಲಸ ಮಾಡಿ ತಮ್ಮ ಜೀವನ ನಿರ್ವಹಣೆ ಮಾಡುತ್ತಿದ್ದ ಅವರಿಗೆ ಈಗ ಬದುಕುವುದು ದುಸ್ತರವಾಗಿದೆ. ಆದ್ದರಿಂದ ತಪ್ಪು ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಅಮಾಯಕರಿಗಾದ ಅನ್ಯಾಯದ ವಿರುದ್ಧ ದನಿ ಎತ್ತಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳೊಂದಿಗೆ ಮಿಂಟೋ ಆಸ್ಪತ್ರೆಯ ಆಡಳಿತ ಮಂಡಳಿಯ ಮುಖ್ಯಸ್ಥರು ಬಹಳ ಉದ್ಧಟತನದಿಂದ ವರ್ತಿಸಿದರು. ಅಲ್ಲದೇ ಕನ್ನಡ ಗೊತ್ತಿದರೂ ಸಹ ಕನ್ನಡ ಭಾಷೆಯ ಬಗ್ಗೆ ಬಹಳ ಲಘುವಾಗಿ ಮಾತನಾಡಿದ್ದರಿಂದ ಕುಪಿತರಾದ ಕರವೇ ಕಾರ್ಯಕರ್ತರು ಆಸ್ಪತ್ರೆಯ ದೌರ್ಜನ್ಯದ ವಿರುದ್ಧ ದನಿ ಮಾಡಿದರು. ಇದನ್ನೇ ನೆವ ಮಾಡಿಕೊಂಡಿರುವ ಮಿಂಟೋ ಆಸ್ಪತ್ರೆಯ ಸಿಬ್ಬಂದಿ ಕರವೇ ಕಾರ್ಯಕರ್ತರ ವಿರುದ್ಧ ದೂರು ದಾಖಲಿಸಿದ್ದಾರೆ. ಇದು ಸರಿಯಲ್ಲ. ಕೂಡಲೆ ಕರವೇ ಕಾರ್ಯಕರ್ತರ ವಿರುದ್ಧ ದಾಖಲಿಸಿರುವ ದೂರನ್ನು ಹಿಂಪಡೆಯಬೇಕು ಎಂದು ಕರವೇ ಪದಾಧಿಕಾರಿಗಳು ಸರ್ಕಾರವನ್ನು ಆಗ್ರಹಿಸಿದ್ದಾರೆ. ತಾಲ್ಲೂಕು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಪಿ.ಸಿ.ಕೃಷ್ಣೇಗೌಡ ಹಾಗೂ ಇತರೆ ಪದಾಧಿಕಾರಿಗಳು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
