ಅನುದಾನ ರಹಿತರ ವಿಶೇಷ ಪ್ಯಾಕೇಜ್ : ಒತ್ತಾಯ

 ಮಧುಗಿರಿ :

      ಅನುದಾನರಹಿತ ಖಾಸಗಿ ಶಾಲೆಗಳ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಮುಖ್ಯಮಂತ್ರಿಯವರನ್ನು ಒತ್ತಾಯಿಸುವುದಾಗಿ ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣ ಸ್ವಾಮಿ ತಿಳಿಸಿದರು.

        ಪಟ್ಟಣದ ನಿರೀಕ್ಷಣಾ ಮಂದಿರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಖಾಸಗಿ ಶಾಲೆಗಳಿಗೆ ಶಿಕ್ಷಣ ಹಕ್ಕು ಕಾಯ್ದೆಯಡಿ ಬಾಕಿ ಉಳಿಸಿಕೊಂಡಿರುವ ಹಣವನ್ನು ಸರ್ಕಾರ ಕೂಡಲೆ ಬಿಡುಗಡೆಗೊಳಿಸಿದರೆ ಅಲ್ಲಿನ ಶಿಕ್ಷಕರಿಗೂ, ಸಿಬ್ಬಂದಿಗೂ ವೇತನ ನೀಡಲು ಅನುಕೂಲವಾಗುತ್ತದೆ. ಗ್ರಾಮೀಣ ಪತ್ರಕರ್ತರೂ ಸಂಕಷ್ಟ ಅನುಭವಿಸುತ್ತಿದ್ದು, ಕುಟುಂಬ ಪೋಷಣೆ ಮಾಡುವುದು ಕಷ್ಟಕರವಾಗಿದೆ. ಅವರಿಗೂ ಪ್ಯಾಕೇಜ್ ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಒತ್ತಾಯಿಸುವುದಾಗಿ ತಿಳಿಸಿದರು.

      ಕೊರೋನಾ ಮಹಾಮಾರಿಯಿಂದ ಬಳಲುತ್ತಿದ್ದ ದೇಶದ ಶ್ರಮಿಕರಿಗೆ, ಕೂಲಿ ಕಾರ್ಮಿಕರಿಗೆ ಹಾಗೂ ಇನ್ನಿತರೆ ವಲಯದವರಿಗೆ 20 ಲಕ್ಷ ಕೋಟಿ ರೂ.ಗಳ ಪ್ಯಾಕೇಜ್ ಘೋಷಿಸುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸ್ವಾವಲಂಬಿ ಭಾರತ ನಿರ್ಮಾಣಕ್ಕೆ ಮುಂದಾಗಿರುವುದು ಶ್ಲಾಘನೀಯ ಎಂದ ಅವರು, ಕೊರೋನಾ ಸಾಂಕ್ರಾಮಿಕ ರೋಗದ ವಿರುದ್ದ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್ ಅಭಿನಂದನೆಗೆ ಅರ್ಹರು ಎಂದರು.

      ಆಗ್ನೇಯ ಪದವೀಧರ ಕ್ಷೇತ್ರ ಬಿಜೆಪಿ ಭದ್ರಕೋಟೆಯಾಗಿದ್ದು, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ 5 ಜಿಲ್ಲೆಗಳ ಅಧ್ಯಕ್ಷರ ಸಹಮತದೊಂದಿಗೆ ಸಿ.ಚಿದಾನಂದ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದ್ದು, ಮುಂಬರುವ ಚುನಾವಣೆಯಲ್ಲಿ ಪ್ರಥಮ ಪ್ರಾಶಸ್ತ್ಯ ಮತ ನೀಡುವ ಮೂಲಕ ಅವರ ಗೆಲುವಿಗೆ ಸಹಕರಿಸಬೇಕೆಂದು ತಿಳಿಸಿದರು.

      ಆಗ್ನೇಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿ.ಚಿದಾನಂದ ಮಾತನಾಡಿ, ಪದವೀಧರ ಕ್ಷೇತ್ರದ ಸಮಸ್ಯೆಗಳಿಗೆ ತಕ್ಕ ಪರಿಹಾರ ನೀಡುವ ನಿಟ್ಟಿನಲ್ಲಿ ಕಾರ್ಯ ಮಾಡಲು ಸಿದ್ದನಿದ್ದು, ಅವರ ಪ್ರತಿನಿಧಿಯಾಗಿ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ ಎಂದರು.

      ತಾಲ್ಲೂಕು ಬಿ.ಜೆ.ಪಿ ಅಧ್ಯಕ್ಷ ಪಿ.ಎಲ್.ನರಸಿಂಹಮೂರ್ತಿ, ಪ್ರೌ.ಶಾ.ಸ.ಶಿ.ಸಂಘದ ಜಿಲ್ಲಾಧ್ಯಕ್ಷ ಎಂ.ವೆಂಕಟರಾಮು, ತಾಲ್ಲೂಕು ಅಧ್ಯಕ್ಷ ಮಲ್ಲಿಕಾರ್ಜುನ, ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಎನ್.ಮಹಾಲಿಂಗೇಶ್, ಶಿಕ್ಷಕರಾದ ಮುಜುಂದಾರ್, ಸಿದ್ದೇಶ್, ಕಾಮರಾಜು, ಅಶ್ವತ್ಥ್ ನಾರಾಯಣ್, ಎಂ.ಶಿವಲಿಂಗಪ್ಪ ಹಾಗೂ ಇನ್ನಿತರರು ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

  

Recent Articles

spot_img

Related Stories

Share via
Copy link