ಮಧುಗಿರಿ :
ತಾಲ್ಲೂಕಿನ ಕೆಲವು ಗ್ರಾಮಗಳು ಸೇರಿದಂತೆ ಪುರವರ ಹೋಬಳಿಯ ಹಂದ್ರಾಳು ಗ್ರಾಮದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಬಡ ಮಕ್ಕಳ ಮನೆಗಳಿಗೆ ವಿದ್ಯಾರ್ಥಿ ಜ್ಯೋತಿ ಯೋಜನೆಯಡಿಯಲ್ಲಿ ಕಲ್ಪಿಸಿದ್ದ ಉಚಿತ ವಿದ್ಯುತ್ ಸಂಪರ್ಕವನ್ನು ಬ್ಯಾಲ್ಯ ಬೆಸ್ಕಾಂ ನೌಕರರು ಕಡಿತಗೊಳಿಸಿದ್ದಾರೆಂಬ ಆರೋಪ ಗ್ರಾಮಸ್ಥರಿಂದ ಕೇಳಿ ಬಂದಿದೆ.
ಸುಮಾರು ಎರಡು ವರ್ಷಗಳ ಹಿಂದೆ ಬಡ ಕುಟುಂಬದ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ವಿದ್ಯುತ್ ಸಂಪರ್ಕವಿಲ್ಲವೆಂದು ಅಂದಿನ ಮಧುಗಿರಿ ಶಾಸಕರಾಗಿದ್ದ ಕೆ.ಎನ್.ರಾಜಣ್ಣನವರಿಗೆ ಪತ್ರ ಬರೆದಿದ್ದರ ಹಿನ್ನೆಲೆಯಲ್ಲಿ ತಾಲ್ಲೂಕಿನ ಎಲ್ಲಾ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ವಿದ್ಯಾರ್ಥಿ ಜ್ಯೋತಿ ಯೋಜನೆಯನ್ನು ಆರಂಭಿಸಲಾಗಿತ್ತು.
ತಾಲ್ಲೂಕಿನ ಬೆಸ್ಕಾಂ ಇಲಾಖೆಯ ವತಿಯಿಂದ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ತಮ್ಮ ವ್ಯಾಪ್ತಿಯ ಹಲವು ಗ್ರಾಮಗಳ ವಿದ್ಯಾರ್ಥಿಗಳ ಮನೆಗಳಿಗೆ ಇಂತಿಷ್ಟು ಯೂನಿಟ್ಗಳ ಉಚಿತವಾಗಿ ನಂತರ ಕಡಿಮೆ ದರದಲ್ಲಿ ವಿದ್ಯುತ್ ಸಂಪರ್ಕ ಕಲ್ಪ್ಪಿಸಿಕೊಡಲಾಗಿತ್ತು. ಆ ಯೋಜನ್ನೇ ನಂಬಿಕೊಂಡಿದ್ದ ವಿದ್ಯಾರ್ಥಿಗಳ ಗೋಳು ಈಗ ಹೇಳತೀರದ್ದಾಗಿದೆ.
ಹಂದ್ರಾಳು ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ಕಡಿತ ಗೊಳಿಸಿರುವ ಕಾರಣ ವಿದ್ಯಾರ್ಥಿಗಳು ಕತ್ತಲಲ್ಲೆ ಕುಳಿತು ಕೊಂಡು ಓದಬೇಕಾದ ಅನಿವಾರ್ಯತೆ ಎದುರಾಗಿದ್ದು, ರಾತ್ರಿ ವೇಳೆಯಲ್ಲಿ ಓದಲು, ಬರೆಯಲು ತುಂಬಾ ತೊಂದರೆಯುಂಟಾಗಿದೆ ಎಂದು ವಿದ್ಯಾರ್ಥಿನಿಯರಾದ ಗಗನ, ರಂಜಿತ, ಅಮೂಲ್ಯ ಮತ್ತು ಪೋಷಕರು ಅಲವತ್ತುಕೊಂಡಿದ್ದಾರೆ.
ವಿದ್ಯಾರ್ಥಿಜ್ಯೋತಿ ಯೋಜನೆಯಡಿಯಲ್ಲಿ ತಾಲ್ಲೂಕಿನಲ್ಲಿ ಹಲವು ಗ್ರಾಮಗಳಲ್ಲಿ ಈ ಸಮಸ್ಯೆ ಕಂಡು ಬರುತ್ತಿದೆ. ವಿದ್ಯಾರ್ಥಿಗಳಿಗಾಗಿ ಕಲ್ಪಿಸಿರುವ ಉಚಿತ ವಿದ್ಯುತ್ ಸಂಪರ್ಕ ಯೋಜನೆಯಡಿಯಲ್ಲಿ ತೊಂದರೆಯಾಗದಂತೆ ಸಂಬಂಧಿಸಿದ ಅಧಿಕಾರಿಗಳು, ಜನಪ್ರತಿನಿಧಿಗಳು ಸಮಸ್ಯೆಯ ಬಗ್ಗೆ ಗಮನ ಹರಿಸಿ ಮತ್ತೆ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಬೇಕೆಂದು ಹಂದ್ರಾಳು ನಾಗಭೂಷಣ್ ಆಗ್ರಹಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
