ಕೋಲಾರದಲ್ಲಿ ಮಾವು ಸಂಸ್ಕರಣಾ ಘಟಕಕ್ಕೆ ಸಿದ್ಧತೆ: ಸಚಿವ ಮುನಿರತ್ನ

 

ಬೆಂಗಳೂರು: 

ಮಾವು ಮತ್ತು ಮಾರುಕಟ್ಟೆ ಅಭಿವೃದ್ಧಿ ಮಂಡಳಿಗೆ ನಾಲ್ಕು ಕೋಟಿ ರೂ. ಅನುದಾನ ಒದಗಿಸಲು ಹಾಗೂ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯ ಮಾವು ಬೆಳೆಗಾರರಿಗೆ ಅನುಕೂಲವಾಗುವಂತೆ ಮಾವು ಸಂಸ್ಕರಣಾ ಘಟಕ ಸ್ಥಾಪನೆಗೆ ಕ್ರಮ ವಹಿಸಲಾಗಿದೆ ಎಂದು ತೋಟಗಾರಿಕೆ ಸಚಿವ ಎನ್. ಮುನಿರತ್ನ ಹೇಳಿದರು.
ಕರ್ನಾಟಕ ಪಶು ವೈದ್ಯಕೀಯ ಪರಿಷತ್ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಾವು ಖರೀದಿದಾರರು ಮತ್ತು ಮಾರಾಟಗಾರರ ಸಮಾವೇಶ ಉದ್ಘಾಟಿಸಿದ ಅವರು, ಹಾನಗಲ್‌ನಲ್ಲಿ ಮಾವು ಸಂಸ್ಕರಣಾ ಘಟಕ ಸ್ಥಾಪನೆ ಕುರಿತು ಆಯವ್ಯಯದಲ್ಲಿ ಘೋಷಣೆ ಮಾಡಲಾಗಿದೆ. ಘಟಕವನ್ನು ಮಾವು ಹೆಚ್ಚು ಬೆಳೆಯುವ ಕೋಲಾರ ಜಿಲ್ಲೆಯಲ್ಲಿ ಸ್ಥಾಪನೆ ಮಾಡಬೇಕಿದೆ. ಆಂಧ್ರಪ್ರದೇಶದ ಚಿತ್ತೂರಿನಲ್ಲಿರುವ ಘಟಕ ವೀಕ್ಷಣೆ ಮಾಡಿದ್ದೇನೆ. ಅದರಂತೆ ಕೋಲಾರ-ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗೆ ಅನುಕೂಲವಾಗುವಂತೆ ಘಟಕ ಆರಂಭಕ್ಕೆ ಸಿದ್ಧತೆ ನಡೆದಿದೆ ಎಂದರು.

ಮಾವು ರಫ್ತಿನಲ್ಲಿ ಮಹಾರಾಷ್ಟ್ರ ಹಾಗೂ ಆಂಧ್ರಪ್ರದೇಶ ಮುಂಚೂಣಿಯಲ್ಲಿದೆ. ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ಮಾವು ಉತ್ಪಾದನೆ ಸೇರಿದಂತೆ ಎಲ್ಲ ವಿಷಯದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕವನ್ನು ರಫ್ತಿನಲ್ಲಿ ಪ್ರಥಮ ಸ್ಥಾನಕ್ಕೇರುವಂತೆ ಮಾಡಬೇಕಿದೆ ಎಂದು ತಿಳಿಸಿದರು.
ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾತನಾಡಿ, ಮಾವು ಅಭಿವೃದ್ಧಿ ಮಂಡಳಿಗೆ ಸರ್ಕಾರದಿಂದ ನೀಡುತ್ತಿರುವ ಅನುದಾನ ಏನೇನು ಸಾಲದು. ಈ ಬಾರಿಯಾದರೂ 4ಕೋಟಿ ರೂ. ಅನುದಾನವನ್ನು ಸರ್ಕಾರ ಒದಗಿಸಬೇಕು. ಜಿಲ್ಲಾ ಮಟ್ಟದಲ್ಲಿ ಸಂಸ್ಕರಣಾ ಘಟಕ ಸ್ಥಾಪಿಸಬೇಕು. ರೈತರೇ ಅದಕ್ಕೆ ಮಾಲೀಕರಾಗಿರಬೇಕು. ಖರೀದಿದಾರರ ಹಿಡಿತಕ್ಕೆ ಸಿಲುಕದಂತೆ ಕ್ರಮ ವಹಿಸಬೇಕು. ನ್ಯಾಯಯುತ ಬೆಲೆ ದೊರಕುವಂತಾಗಬೇಕು. ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಬೆಲೆ ನಿಗದಿಗೆ ವ್ಯವಸ್ಥೆ ಮಾಡಬೇಕು ಎಂದು ತೋಟಗಾರಿಕಾ ಸಚಿವರ ಗಮನಕ್ಕೆ ತಂದರು.

ಮಾವು ಮತ್ತು ಮಾರುಕಟ್ಟೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ವಿ. ನಾಗರಾಜ್ ಮಾತನಾಡಿ, ಕೋವಿಡ್ ಕಾರಣದಿಂದಾಗಿ ಮಾವು ಬೆಳೆಗಾರರು ಎರಡು ವರ್ಷದಿಂದ ಕಷ್ಟದಲ್ಲಿದ್ದಾರೆ. ಸರ್ಕಾರ ಅವರ ನೆರವಿಗೆ ಬರಬೇಕು ಎಂದರು.
ಅನೇಕ ಮಾಹಿತಿಯನ್ನು ಒಳಗೊಂಡ ಪುಸ್ತಕ, ಡೈರೆಕ್ಟರಿ ಬಿಡುಗಡೆ ಮಾಡಲಾಯಿತು. ಮಾಜಿ ಶಾಸಕ ಎಂ.ರಾಜಣ್ಣ, ನಬಾರ್ಡ್ನ ಎಜಿಎಂ ಅನಿಲ್‌ಕುಮಾರ್ ರಾವತ್, ಕೆಪೆಕ್ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ಪರವೇಜ್ ಹ ಬಂಥನಾಳ, ಅಪೆಡಾ ಉಪ ಪ್ರಧಾನ ವ್ಯವಸ್ಥಾಪಕ ಆರ್.ರವೀಂದ್ರ ಇದ್ದರು.

 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link