ನಿಗದಿತ ಸಮಯದೊಳಗೆ ನೀಲಿ ಮೆಟ್ರೋ ಮಾರ್ಗ ಪೂರ್ಣಗೊಳಿಸಿ: ಗುತ್ತಿಗೆದಾರರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚನೆ

ಬೆಂಗಳೂರು

      ನಿಗದಿತ ಸಮಯದೊಳಗೆ ನೀಲಿ ಮೆಟ್ರೋ ಮಾರ್ಗ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚಿಸಲಾಗಿದ್ದು, ಕೆ.ಆರ್. ಪುರದಿಂದ ಸಿಲ್ಕ್ ಬೋರ್ಡ್‌ವರೆಗೆ ಮಾರ್ಗವನ್ನು 2026 ಡಿಸೆಂಬರ್‌ಗೆ ಮುಗಿಸಲು ನಿರ್ಧರಿಸಿದ್ದೇವೆ. ಉಳಿದಂತೆ ಕೆ.ಆರ್. ಪುರದಿಂದ ಹೆಬ್ಬಾಳದವರೆಗಿನ ಮಾರ್ಗವನ್ನು 2027 ಡಿಸೆಂಬರ್ ವೇಳೆಗೆ ಹಾಗೂ ಹೆಬ್ಬಾಳದಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 2027 ಜೂನ್‌ಗೆ ಪೂರ್ಣಗೊಳಿಸುತ್ತೇವೆ ಎಂದು ಗುತ್ತಿಗೆದಾರರು ತಿಳಿಸಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್   ಮಾಹಿತಿ ನೀಡಿದರು. ಕೊಡಿಗೆಹಳ್ಳಿಯಲ್ಲಿ ನಡೆಯುತ್ತಿರುವ ಮೆಟ್ರೋ ಕಾಮಗಾರಿ ಪರಿಶೀಲಿಸಿದ ಬಳಿಕ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು.

     ವಿಮಾನ ನಿಲ್ದಾಣಕ್ಕೆ ಸಂಪರ್ಕ ಸಾಧಿಸುತ್ತಿರುವ ಮೆಟ್ರೋ ಮಾರ್ಗದ ಕಾಮಗಾರಿಯನ್ನು ನಾವು ನಿಗದಿತ ಸಮಯದೊಳಗೆ ಪೂರ್ಣಗೊಳಿಸಬೇಕಿದೆ. ಇದಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರರನ್ನು ಕರೆಸಿ ಚರ್ಚಿಸಿದ್ದೇವೆ. ಗುತ್ತಿಗೆದಾರ ಸಂಸ್ಥೆಯು ಕೆಲವು ಸಬೂಬು ಹೇಳುತ್ತಿದ್ದು, ಆದಷ್ಟು ಬೇಗ ಕಾಮಗಾರಿ ಮುಗಿಸಲು ಸೂಚಿಸಿದ್ದೇನೆ. ಈ ಭಾಗದಲ್ಲಿ ಕೆಲವು ಸಮಸ್ಯೆಗಳಿದ್ದ ಕಾರಣ ನಾನು ಸ್ಥಳಕ್ಕೆ ಬಂದು ಭೇಟಿ ನೀಡಿದ್ದೇನೆ. ಇಲ್ಲಿ ಕೆಲಸ ಪೂರ್ಣವಾಗುವವರೆಗೂ ಇಲ್ಲಿರುವ ಪ್ರಮುಖ ಯಂತ್ರವನ್ನು ಬೆಂಗಳೂರಿನಿಂದಾಚೆಗೆ ಸ್ಥಳಾಂತರಿಸಲು ಅವಕಾಶ ನೀಡುವುದಿಲ್ಲ. ಇದರ ಉಸ್ತುವಾರಿಯನ್ನು ತುಷಾರ್ ಗಿರಿನಾಥ್ ಅವರಿಗೆ ನೀಡಲಾಗಿದೆ. ಇದು 58 ಕಿ.ಮೀ ಉದ್ಧದ ಈ ಯೋಜನೆ 15 ಸಾವಿರ ಕೋಟಿ ಮೊತ್ತದ ಯೋಜನೆಯಾಗಿದೆ. ಸಿಲ್ಕ್ ಬೋರ್ಡ್‌ನಿಂದ ವಿಮಾನ ನಿಲ್ದಾಣದವೆರೆಗಿನ ಈ ಮಾರ್ಗದಲ್ಲಿ 30 ನಿಲ್ದಾಣಗಳು ಬರಲಿವೆ ಎಂದು ತಿಳಿಸಿದರು. 

    ಈ ಕಾಮಗಾರಿಯಿಂದ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದ್ದು, ಪರಿಹಾರ ಯಾವಾಗ ಎಂದು ಕೇಳಿದಾಗ, ʼಇಲ್ಲಿ ಕೇವಲ ರಾತ್ರಿ ವೇಳೆ ಮಾತ್ರ ಕೆಲಸ ಮಾಡಲಾಗುತ್ತಿದೆ. ಕಾಮಗಾರಿ ನಡೆಯುವ ವೇಳೆ ಒಂದು ಸಾವು ಉಂಟಾದ ನಂತರ ಸಂಚಾರ ದಟ್ಟಣೆ ನೋಡಿಕೊಂಡು ಕೆಲಸ ಮಾಡಲಾಗುತ್ತಿದೆ. ಇದು ವಾಸ್ತವದ ಪರಿಸ್ಥಿತಿ. ಟೀಕೆ ಮಾಡುವವರು, ಮಾತನಾಡುವವರು ಏನೇ ಹೇಳಿದರೂ ಕೆಲಸ ನಡೆಯಲೇಬೇಕು. ಎನ್‌ಸಿಸಿ ಆಗಲಿ ಬೇರೆ ಗುತ್ತಿಗೆದಾರರೇ ಆಗಲಿ ನಿಗದಿತ ಸಮಯದ ಗಡುವಿನಲ್ಲಿ ಪೂರ್ಣಗೊಳಿಸದಿದ್ದರೆ ಮುಂದೆ ಯಾವುದೇ ಕಾಮಗಾರಿಯನ್ನು ಅವರಿಗೆ ನೀಡುವುದಿಲ್ಲ. ನಮಗೆ ಯೋಜನೆ ಜಾರಿ ಮುಖ್ಯ. ಉಳಿದ ಇಬ್ಬರು ಗುತ್ತಿಗೆದಾರರು ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಎನ್‌ಸಿಸಿ ಬಗ್ಗೆ ಕೆಲವು ದೂರುಗಳಿವೆ. ಇಲ್ಲಿ ಅಪಘಾತ ಸಂಭವಿಸಿದ ನಂತರ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆʼ ಎಂದು ತಿಳಿಸಿದರು. 

    ನಾನು ಬೆಳಗ್ಗೆಯಿಂದ ವಿವಿಧ ಕಾಮಗಾರಿಗಳ ಬಗ್ಗೆ ಪರಿಶೀಲನಾ ಸಭೆ ನಡೆಸಿದ್ದೇನೆ. ಮುಂದಿನ ಹದಿನೈದು ದಿನಗಳ ಕಾಲ ಚಳಿಗಾಲದ ಅಧಿವೇಶನಕ್ಕಾಗಿ ಬೆಳಗಾವಿಗೆ ತೆರಳಬೇಕಿದ್ದು, ಅದಕ್ಕೂ ಮುನ್ನ ಬಿಎಂಆರ್‌ಡಿಎ, ಬಿಡಿಎ, ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗಳಲ್ಲಿ ಏನೆಲ್ಲಾ ಆಗಬೇಕಿದೆ ಎಂದು ಅಧಿಕಾರಿಗಳ ಜತೆ ಚರ್ಚೆ ಮಾಡಿದ್ದೇನೆ. ಬೆಂಗಳೂರು ಬಿಸಿನೆಸ್ ಕಾರಿಡಾರ್ ವಿಚಾರದಲ್ಲಿ ಸರ್ಕಾರದ ಪರಿಹಾರಕ್ಕೆ ಒಪ್ಪಿ ಭೂಮಿ ನೀಡುವ ರೈತರಿಗೆ ತೀರ್ಮಾನ ಮಾಡಲಾಗಿರುವ ಪರಿಹಾರವನ್ನು ನೀಡುತ್ತೇವೆ. ಯಾರು ಒಪ್ಪುವುದಿಲ್ಲವೋ ಅವರಿಗೆ ನ್ಯಾಯಾಲಯದಲ್ಲಿ ಹಳೆಯ ದರದಲ್ಲಿ ಡೆಪಾಸಿಟ್ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.

    ಟಿಡಿಆರ್, ಎಫ್ಎಆರ್ ಸೇರಿದಂತೆ ನಾನು ಭೂ ಸಂತ್ರಸ್ತ ರೈತರಿಗೆ ಐದು ಆಯ್ಕೆಗಳ ಪರಿಹಾರವನ್ನು ನೀಡಿದ್ದೇನೆ. ಇಡೀ ದೇಶದಲ್ಲಿ ಯಾರೂ ಇಷ್ಟು ಅವಕಾಶ ನೀಡಿರಲಿಲ್ಲ. ಯಾರು ಏನೇ ಹೇಳಿದರೂ ನಾನಂತೂ ಡಿನೋಟಿಫಿಕೇಶನ್ ಮಾಡುವುದಿಲ್ಲ. ನನಗೆ ಬೆದರಿಸಲು ಕೋರ್ಟ್ ಮೆಟ್ಟಿಲೇರಿದರೆ ಹೋಗಲಿ, ಈಗಾಗಲೇ ನ್ಯಾಯಾಲಯದಲ್ಲಿ ಇಂತಹ ಪ್ರಕರಣಗಳು ವಿಫಲವಾಗಿವೆ. ನಾವು ರಸ್ತೆ ಮಾಡಲೇ ಬೇಕು. ರಸ್ತೆ ಬದಿಯಲ್ಲೇ 35% ವಾಣಿಜ್ಯ ಭೂಮಿಯನ್ನು ಪರಿಹಾರವಾಗಿ ನೀಡಲಾಗುವುದು ಎಂದು ಹೇಳಿದ್ದೇನೆ. ಇಡೀ ದೇಶದಲ್ಲಿ ಯಾರೂ ವಾಣಿಜ್ಯ ಭೂಮಿಯನ್ನು ಪರಿಹಾರವಾಗಿ ನೀಡುವುದಿಲ್ಲ. ಈ ಅವಕಾಶವನ್ನು ರೈತರು ಉಪಯೋಗಿಸಿಕೊಳ್ಳಬೇಕು. ಇದರಿಂದ ಅವರಿಗೆ ಒಳ್ಳೆಯದಾಗುತ್ತದೆ. ಇಲ್ಲದಿದ್ದರೆ ಅದು ಅವರಿಗೆ ಬಿಟ್ಟ ವಿಚಾರ ಎಂದು ಅವರು ಹೇಳಿದರು. 

    ಸ್ವಾಮೀಜಿಗಳ ನಿಯೋಗ ಭೇಟಿ ಬಗ್ಗೆ ಕೇಳಿದಾಗ, ʼಅವರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಅವರು ಬೆಂಗಳೂರಿಗೆ ಬಂದಾಗ ಉಳಿದುಕೊಳ್ಳಲು ಜಾಗ ಇಲ್ಲ. ನಮಗೆ ಏನಾದರೂ ಮಾಡಿ ಜಾಗ ಕೊಡಿ ಎಂದು ಕೇಳಿದ್ದಾರೆ. ಸಿಎ ನಿವೇಶನ ಪರಿಶೀಲಿಸಿ ಅವರಿಗೆ ಜಾಗ ಕಲ್ಪಿಸುವ ಕೆಲಸ ಮಾಡುತ್ತೇನೆ. ಅವರ ಬೇಡಿಕೆ ನ್ಯಾಯಬದ್ಧವಾಗಿದೆ. ಹಿಂದುಳಿದ ವರ್ಗದ ಸ್ವಾಮೀಜಿಗಳ ಬೇಡಿಕೆ ಪರಿಗಣಿಸಲಾಗಿದೆʼ ಎಂದು ತಿಳಿಸಿದರು.‌

    ನಿಮ್ಮನ್ನು ಸಿಎಂ ಸ್ಥಾನದಲ್ಲಿ ನೋಡಬೇಕು ಎಂಬ ಆಸೆ ವ್ಯಕ್ತಪಡಿಸಿದ್ದಾರೆ ಎಂದು ಕೇಳಿದಾಗ, ʼನಾನು ಅವರ ಪ್ರೀತಿ ಬಗ್ಗೆ ಏನು ಪ್ರತಿಕ್ರಿಯೆ ನೀಡಲು ಆಗುವುದಿಲ್ಲ. ಅವರ ಆಸೆ ಅವರು ವ್ಯಕ್ತಪಡಿಸಬಹುದು. ಆದರೆ ಏನೇ ತೀರ್ಮಾನ ಇದ್ದರೂ ಪಕ್ಷ ಕೈಗೊಳ್ಳುತ್ತದೆ ಎಂದು ನಾನು ಹಾಗೂ ಸಿಎಂ ಇಬ್ಬರೂ ಹೇಳಿದ್ದು, ನಾವು ಅದಕ್ಕೆ ಬದ್ಧವಾಗಿದ್ದೇವೆʼ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದರು.

Recent Articles

spot_img

Related Stories

Share via
Copy link