ಬೆಂಗಳೂರು:
ಸರ್ಕಾರಿ ನೌಕರರು, ಅಧಿಕಾರಿಗಳಿಗೆ ಮಾತ್ರ ಪ್ರವಾಸ ಪ್ಯಾಕೇಜ್ ಆಯೋಜಿಸುತ್ತಿದ್ದ ಸರ್ಕಾರಿ ಸ್ವಾಮ್ಯದ ಎಂಎಸ್ಐಎಲ್ ಸಂಸ್ಥೆ ಇದೀಗ ಸಾರ್ವಜನಿಕರಿಗೂ ಕೈಗೆಟುಕುವ ದರದಲ್ಲಿ ದೇಶ ಹಾಗೂ ವಿದೇಶಗಳ ಆಕರ್ಷಕ ಪ್ರವಾಸ ಪ್ರಾಕೇಜ್ ಗಳನ್ನು ನೀಡಲು ಮುಂದಾಗಿದೆ.
ಮೊದಲ ಹಂತದಲ್ಲಿ ಸೆಪ್ಟೆಂಬರ್ ನಲ್ಲಿ 18 ದಿನಗಳ ಉತ್ತರ ಭಾರತದ ಧಾರ್ಮಿಕ ಸ್ಥಳಗಳಿಗೆ ಕೇವಲ 20 ಸಾವಿರ ರೂಪಾಯಿ ಪ್ಯಾಕೇಜನ್ನು ಘೋಷಿಸಿದೆ.ಬುಧವಾರ ಖನಿಜ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಎಂಎಸ್ಐಎಲ್’ನ ವಿವಿಧ ಆಕರ್ಷಕ ಪ್ರವಾಸಿ ಪ್ಯಾಕೇಜ್ ಗಳಿಗೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಎಂಎಸ್ಐಎಲ್ ಮೊದಲಿನಿಂದಲೂ ಗುಣಮಟ್ಟ ಮತ್ತು ವಿಶ್ವಾಸಾರ್ಹತೆಗೆ ಹೆಸರಾಗಿದೆ. ಈಗ ಟೂರ್ ಪ್ಯಾಕೇಜುಗಳ ಮೂಲಕ ಸಂಸ್ಥೆಯು ಜನರಿಗೆ ಮತ್ತಷ್ಟು ಹತ್ತಿರವಾಗುತ್ತಿದೆ. ಈ ಪ್ಯಾಕೇಜುಗಳ ಅಡಿಯಲ್ಲಿ ಈ ವರ್ಷದ ಸೆಪ್ಟೆಂಬರ್ ತಿಂಗಳಲ್ಲಿ ಆದಿ ಕೈಲಾಸ ಮತ್ತು ವಾರಣಾಸಿಗೆ ಪ್ರವಾಸ ಆಯೋಜಿಸಲಾಗುವುದು. ಮುಖ್ಯವಾಗಿ ನಾವು ಆಫ್-ಲೈನ್ ಪ್ರವಾಸಿಗರಿಗೆ ಆದ್ಯತೆ ಕೊಡುತ್ತಿದ್ದೇವೆ. ಈ ಪ್ಯಾಕೇಜುಗಳಲ್ಲಿ ಸುರಕ್ಷತೆ, ಶುಚಿರುಚಿಯಾದ ಆಹಾರ, ಮನೆ ಬಾಗಿಲಿನಿಂದಲೇ ಕರೆದುಕೊಂಡು ಹೋಗಿ ವಾಪಸ್ ಅಲ್ಲಿಗೇ ಬಿಡುವುದು, ಸಹಾಯಕರ ನೆರವು, ಮಾಸಿಕ ಕಂತುಗಳಲ್ಲಿ ಹಣ ಪಾವತಿ, ಲಕ್ಕಿ ಡ್ರಾ, ಕೈಗೆಟುಕುವ ವೆಚ್ಚದಲ್ಲಿ ಉತ್ತರ ಭಾರತ ಪ್ರವಾಸ ಮುಂತಾದ ಸೌಲಭ್ಯ ಮತ್ತು ಆಕರ್ಷಣೆಗಳಿವೆ. ಗುಂಪು ಪ್ರವಾಸ ಮಾಡಲು ಬಯಸುವವರಿಗೆ ಪ್ರತಿ ಬ್ಯಾಚಿನಲ್ಲಿ ಗರಿಷ್ಠ 100 ಮಂದಿಗೆ ಅವಕಾಶ ಇರಲಿದೆ ಎಂದು ಮಾಹಿತಿ ನೀಡಿದರು.
ಇದಲ್ಲದೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆಂದು ʻಸ್ಟಡಿ-ಕಂ-ಪ್ಲೆಷರ್ ಟೂರ್, ಇಕೋ ಟೂರಿಸಂ ಮತ್ತು ಕರಾವಳಿ ಪ್ರದೇಶಗಳ ವೀಕ್ಷಣೆ ಇರುವ ಕೋಸ್ಟಲ್ ಟೂರಿಸಂ ಮುಂತಾದ ಪ್ಯಾಕೇಜುಗಳನ್ನು ರೂಪಿಸಲು ಎಂಎಸ್ಐಎಲ್ ಚಿಂತಿಸುತ್ತಿದೆ. ಸಂಸ್ಥೆಯು ಸದ್ಯಕ್ಕೆ ರೂಪಿಸಿರುವ ಪ್ಯಾಕೇಜಿನಲ್ಲಿ ಕೇವಲ 20 ಸಾವಿರ ರೂ. ವೆಚ್ಚದಲ್ಲಿ 15ರಿಂದ 18 ದಿನಗಳ ಉತ್ತರ ಭಾರತ ಪ್ರವಾಸ ಮಾಡಿಕೊಂಡು ಬರಬಹುದು ಎಂದು ವಿವರಿಸಿದರು.
ಸರ್ಕಾರಿ ಉದ್ಯೋಗಿಗಳನ್ನು ಗಮನದಲ್ಲಿ ಇಟ್ಟುಕೊಂಡು ಮಾಡಿರುವ ಪ್ಯಾಕೇಜಿನಲ್ಲಿ ಮೊದಲು ಶೇ.50ರಷ್ಟು ಹಣ ಪಾವತಿಸಿ, ಪ್ರವಾಸ ಕೈಗೊಳ್ಳಬಹುದು. ಪ್ರವಾಸ ಮುಗಿಸಿಕೊಂಡು ಬಂದ ಬಳಿಕ ಉಳಿದ ಶೇ.50 ರಷ್ಟು ಹಣವನ್ನು ಮಾಸಿಕ ಕಂತುಗಳಲ್ಲಿ ಕಟ್ಟಬಹುದು. ಹಾಗೆಯೇ ಲಕ್ಕಿ ಡ್ರಾದಲ್ಲಿ ವಿಜೇತರಾಗುವ ಅದೃಷ್ಟಶಾಲಿಗಳು ಡ್ರಾ ನಂತರದ ಹಣವನ್ನು ಪಾವತಿಸಬೇಕಾಗಿಲ್ಲ. ಈ ಎಲ್ಲಾ ಪ್ಯಾಕೇಜುಗಳಲ್ಲೂ ಎಂಎಸ್ಐಎಲ್ ವತಿಯಿಂದ ಟೂರ್ ಮ್ಯಾನೇಜರ್ ಅಥವಾ ಸಹಾಯಕರೊಬ್ಬರು ಜೊತೆಗಿರಲಿದ್ದು, ಪ್ರವಾಸಿಗರ ಬೇಕು-ಬೇಡಗಳನ್ನು ಆಲಿಸಿ, ನೆರವು ನೀಡಲಿದ್ದಾರೆ ಎಂದು ತಿಳಿಸಿದರು.
ಪ್ರವಾಸಿಗರಿಗೆ ಆದಷ್ಟು ಕಡಿಮೆ ವೆಚ್ಚದಲ್ಲಿ ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆ ಸಾಧ್ಯವಾಗಬೇಕು ಎನ್ನುವ ಆಶಯದೊಂದಿಗೆ ಎಂಎಸ್ ಐಎಲ್ ಮೂಲಕ ಈ ಹೆಜ್ಜೆ ಇಡಲಾಗುತ್ತಿದೆ. ಖಾಸಗಿ ಸಂಸ್ಥೆಗಳ ದರಕ್ಕೆ ಹೋಲಿಸಿದರೆ ನಾವು ನಿಗದಿ ಪಡಿಸಿರುವ ದರ ತುಂಬಾ ಕಡಿಮೆ ಇದೆ. ಹಾಗೆಯೇ ಪ್ರತಿಯೊಂದು ಸೇವೆಯನ್ನೂ ಗುಣಮಟ್ಟದೊಂದಿಗೆ ಒದಗಿಸಲಾಗುವುದು ಎಂದರು.
ಈಗಿನ ಸರಕಾರವು ಎಂಎಸ್ಐಎಲ್, ಮೈಸೂರು ಪೇಂಟ್ಸ್ & ವಾರ್ನಿಶ್, ಎನ್.ಜಿ.ಇ.ಎಫ್ ಮುಂತಾದವುಗಳನ್ನು ಲಾಭದಾಯಕವನ್ನಾಗಿ ಮಾಡುತ್ತಿದೆ. ಎಂಎಸ್ಐಎಲ್ ಸದ್ಯಕ್ಕೆ ವಾರ್ಷಿಕ 250 ಕೋಟಿ ರೂ.ಗಳ ಚಿಟ್ ಫಂಡ್ ನಡೆಸುತ್ತಿದೆ. ಇದನ್ನು ಮುಂದಿನ 5 ವರ್ಷಗಳಲ್ಲಿ ವರ್ಷಕ್ಕೆ 5,000 ಕೋಟಿ ರೂ. ಮಟ್ಟಕ್ಕೆ ಕೊಂಡೊಯ್ಯುವ ಯೋಜನೆ ರೂಪಿಸಲಾಗಿದೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಸದ್ಯದಲ್ಲೇ ಚಾಲನೆ ನೀಡಲಿದ್ದಾರೆ.
ಹಾಗೆಯೇ, ಸಂಸ್ಥೆಯ 200 ಮದ್ಯದ ಅಂಗಡಿಗಳನ್ನು ಮೇಲ್ದರ್ಜೆಗೆ ಏರಿಸುವ ಯೋಜನೆಯಡಿ 63 ಮಳಿಗೆಗಳ ಕೆಲಸ ಮುಗಿದಿದ್ದು, ಇಲ್ಲೆಲ್ಲಾ ವಹಿವಾಟು ಮೂರು ಪಟ್ಟು ಹೆಚ್ಚಾಗಿದೆ ಎಂದು ಹೇಳಿದರು.ಎಂಎಸ್ಐಎಲ್ ಹಿರಿಯ ಅಧಿಕಾರಿಯೊಬ್ಬರು ಮಾತನಾಡಿ ಇಷ್ಟು ದಿನ ಸರ್ಕಾರಿ ಅಧಿಕಾರಿಗಳಿಗೆ ಮತ್ತು ಸರ್ಕಾರ ಸಂಸ್ಥೆಗಳಿಗೆ ಮಾತ್ರ ಪ್ರವಾಸಿ ಪ್ಯಾಕೇಜ್ ಗಳನ್ನು ನೀಡಲಾಗುತ್ತಿತ್ತು. ಇದರಿಂದ ಹಣವನ್ನು ಮರು ಪಡೆಯುವುದು ಸಮಸ್ಯೆಯಾಗಿ ಪರಿಣಮಿಸಿತ್ತು. ಇದರಿಂದ ನಷ್ಟ ಅನುಭವಿಸುತ್ತಿದ್ದೆವು. ಇದೀಗ ಸಾರ್ವಜನಿಕರಿಗೂ ಪ್ಯಾಕೇಜ್ ಗಳನ್ನು ನೀಡುತ್ತಿದ್ದೇವೆಂದು ಹೇಳಿದರು.
ಆನ್ಲೈನ್ ಬುಕಿಂಗ್ ಸೇವೆಗಳನ್ನು ಪ್ರಾರಂಭಿಸಲು ಟೆಂಡರ್ಗಳನ್ನು ಕರೆಯಲಾಗಿದೆ. ಪ್ರವಾಸಿಗರ ಅನುಕೂಲಕ್ಕೆ 24/7 ಸಹಾಯವಾಣಿ ಮತ್ತು ವಾಟ್ಸ್ಯಾಪ್ ಸೌಲಭ್ಯವನ್ನೂ (080-45888882, 9353645921) ಹೊಂದಲಾಗಿದೆ. ಇದರ ನಿರ್ವಹಣೆಗಾಗಿ ಪ್ರತ್ಯೇಕ ತಂಡವೇ ಇರಲಿದೆ. ಒಂದು ನಂಬರಿನಲ್ಲಿ ಯಾರಾದರೂ ಮಾತನಾಡುತ್ತಿದ್ದರೆ, ಅದು ತಾನಾಗಿಯೇ ಮತ್ತೊಂದು ಸಂಖ್ಯೆಗೆ ಸಂಪರ್ಕ ಕಲ್ಪಿಸುವ ಕ್ಲೌಡ್ ಬೇಸ್ಡ್ ಟೆಲಿಕಾಂ ಸಿಸ್ಟಮ್ ಅನ್ನು ಅಳವಡಿಸಿಕೊಳ್ಳಲಾಗಿದೆ. ಚೆನ್ನೈ, ಮುಂಬೈ ಮತ್ತು ದೆಹಲಿಯಲ್ಲಿ ಅಸ್ತಿತ್ವದಲ್ಲಿರುವ ಕಚೇರಿಗಳನ್ನು ಪುನರಾರಂಭಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಎಂಎಸ್ಐಎಲ್ ಸಂಸ್ಥೆಯ ಟೂರ್ಸ್ ಅಂಡ್ ಟ್ರಾವೆಲ್ಸ್ ವಿಭಾಗವು ಈ ಟೂರ್ ಪ್ಯಾಕೇಜುಗಳನ್ನು ನಿರ್ವಹಿಸಲಿದೆ. ಇದರಡಿಯಲ್ಲಿ ಕಾಶಿ, ಅಯೋಧ್ಯೆ, ಪುರಿ, ಆದಿ ಕೈಲಾಸ ಮುಂತಾದ ಧಾರ್ಮಿಕ ಮತ್ತು ಐತಿಹಾಸಿಕ ತಾಣಗಳಿಗೆ ಪ್ರವಾಸಿಗರನ್ನು ಅದು ಕರೆದೊಯ್ಯಲಿದೆ. ಜೊತೆಗೆ ದುಬೈ, ಸಿಂಗಪುರ್, ವಿಯಟ್ನಾಂ, ಶ್ರೀಲಂಕಾ, ನೇಪಾಳ, ಥಾಯ್ಲೆಂಡ್ ಮತ್ತು ಯೂರೋಪಿನ ಹಲವು ದೇಶಗಳಿಗೂ ಎಂಎಸ್ಐಎಲ್ ಟೂರ್ ಪ್ಯಾಕೇಜುಗಳನ್ನೂ ರೂಪಿಸಿದೆ. ಕೆಳ ಮಧ್ಯಮ ವರ್ಗದವರಿಗಾಗಿ, ಎಂಎಸ್ಐಎಲ್ ರೈಲು ಮತ್ತು ಸ್ಥಳೀಯ ಬಸ್ ಪ್ರಯಾಣವನ್ನು ಊಟದೊಂದಿಗೆ ಸಂಯೋಜಿಸುವ ಪ್ಯಾಕೇಜ್ಗಳನ್ನು ಪ್ರಾರಂಭಿಸುತ್ತಿದೆ.
