ಮೈಸೂರು ಕುಶಾಲನಗರ ಹೆದ್ದಾರಿ ನಿರ್ಮಾಣ: ಕೇಂದ್ರದಿಂದ ಗುಡ್ ನ್ಯೂಸ್

ಬೆಂಗಳೂರು

     ಮೈಸೂರು ಕುಶಾಲನಗರ ಹೆದ್ದಾರಿ ಯೋಜನೆ  ಸಂಬಂಧ ದೀರ್ಘ ಕಾಲದಿಂದ ಬಾಕಿ ಉಳಿದಿದ್ದ ಪ್ಯಾಕೇಜ್ 3 ರ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ಅಂತಿಮವಾಗಿ ಅನುಮೋದನೆ ದೊರೆತಿದೆ. ಮೈಸೂರು ಕುಶಾಲನಗರ ಹೈವೇಗೆ 2023ರ ಮಾರ್ಚ್​​ನಲ್ಲಿ ಪ್ರಧಾನಿ ನರೇಂದ್ರ ಮೋದಿ  ಶಂಕುಸ್ಥಾಪನೆ ನೆರವೇರಿಸಿದ್ದರು. ಇದೀಗ ಮೂರನೇ ಹಂತದ ಪ್ಯಾಕೇಜ್​​ಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿ ಮಾಹಿತಿ ಹಂಚಿಕೊಂಡಿರುವ ಸಂಸದ ಯದುವೀರ್ ಒಡೆಯರ್  ಕೇಂದ್ರ ಸರ್ಕಾರಕ್ಕೆ ಕೃತಜ್ಙತೆ ಸಲ್ಲಿಸಿದ್ದಾರೆ.

    ಮೈಸೂರು-ಕುಶಾಲನಗರ ಹೆದ್ದಾರಿ ಯೋಜನೆಯ ದೀರ್ಘಕಾಲದಿಂದ ಬಾಕಿ ಉಳಿದಿದ್ದ ಪ್ಯಾಕೇಜ್ 3 ನಿರ್ಮಾಣಕ್ಕೆ ಅಂತಿಮವಾಗಿ ಅನುಮೋದನೆ ದೊರೆತಿದೆ ಎಂದು ನಿಮ್ಮೊಂದಿಗೆ ಹಂಚಿಕೊಳ್ಳಲು ಹರ್ಷಿಸುತ್ತೇನೆ. ಇದು ನಮ್ಮ ಪ್ರದೇಶಕ್ಕೆ ಒಂದು ಪ್ರಮುಖ ಮೈಲಿಗಲ್ಲು, ವಿಶೇಷವಾಗಿ ಯೋಜನೆಯು ವರ್ಷಗಳಲ್ಲಿ ಎದುರಿಸಿದ ಹಲವು ವಿಳಂಬಗಳ ನಂತರ. ಇದು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸ್ಥಿರವಾದ ಅನುಸರಣೆ ಮತ್ತು ದೃಢನಿಶ್ಚಯದ ಪ್ರಯತ್ನಗಳ ಫಲಿತಾಂಶವಾಗಿದೆ ಎಂದು ಯದುವೀರ್ ಹೇಳಿದ್ದಾರೆ.

    ಗೌರವಾನ್ವಿತ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವನಿತಿನ್ ಗಡ್ಕರಿ ಅವರೊಂದಿಗಿನ ನನ್ನ ಇತ್ತೀಚಿನ ಸಭೆಯಲ್ಲಿ, ಈ ಯೋಜನೆಯ ಸುತ್ತಲಿನ ಸವಾಲುಗಳು ಮತ್ತು ಸಮಸ್ಯೆಗಳನ್ನು ವೈಯಕ್ತಿಕವಾಗಿ ಪ್ರಸ್ತುತಪಡಿಸಲು ನನಗೆ ಅವಕಾಶ ಸಿಕ್ಕಿತು. ಅವರು ತ್ವರಿತ ಕ್ರಮ ಕೈಗೊಳ್ಳುವುದಾಗಿ ನನಗೆ ಭರವಸೆ ನೀಡಿದ್ದರು ಮತ್ತು ಭರವಸೆ ನೀಡಿದಂತೆ ಈಗ ಅಗತ್ಯ ಅನುಮತಿಗಳನ್ನು ನೀಡಿದ್ದಾರೆ. ಈ ಹೆದ್ದಾರಿ ಯೋಜನೆಯು ಸಂಪರ್ಕವನ್ನು ಹೆಚ್ಚಿಸುವಲ್ಲಿ, ಪ್ರಯಾಣವನ್ನು ಸುಗಮಗೊಳಿಸುವಲ್ಲಿ ಮತ್ತು ಮೈಸೂರು ಮತ್ತು ಕೊಡಗಿನ ಆರ್ಥಿಕ ಮತ್ತು ಒಟ್ಟಾರೆ ಅಭಿವೃದ್ಧಿಗೆ ಕೊಡುಗೆ ನೀಡುವಲ್ಲಿ ಬಹಳ ಮಹತ್ವದ್ದಾಗಿದೆ. ನಮ್ಮ ಜನರ ಪ್ರಯೋಜನಕ್ಕಾಗಿ ಇಂತಹ ಪ್ರಗತಿ ಮುಂದುವರಿಯುವುದನ್ನು ಖಚಿತಪಡಿಸಿಕೊಳ್ಳಲು ನಾನು ಸಂಪೂರ್ಣವಾಗಿ ಬದ್ಧನಾಗಿರುತ್ತೇನೆ ಎಂದು ಅವರು ಹೇಳಿದ್ದಾರೆ.

    ಮೈಸೂರು ಕುಶಾಲನಗರ ರಾಷ್ಟ್ರೀಯ ಹೆದ್ದಾರಿ ಯೋಜನೆ 2027 ರ ಜೂನ್ ತಿಂಗಳ ಮೊದಲು ಪೂರ್ಣಗೊಳ್ಳಲಿದೆ ಎಂದು ಇತ್ತೀಚೆಗೆ ಯದುವೀರ್ ಹೇಳಿದ್ದರು. ಕಾಮಗಾರಿಯೂ ಪ್ರಗತಿಯಲ್ಲಿದೆ ಎಂದು ಅವರು ಹೇಳಿದ್ದರು. ಇದೀಗ ಮೂರನೇ ಹಂತದ ಪ್ಯಾಕೇಜ್​ಗೆ ಅನುಮೋದನೆ ದೊರೆತಿರುವುದು ಕಾಮಗಾರಿಯ ವೇಗವನ್ನು ಹೆಚ್ಚಿಸುವ ನಿರೀಕ್ಷೆ ಇದೆ. 

   ಕೆಲವು ತಿಂಗಳುಗಳ ಹಿಂದೆ ದೆಹಲಿಯ ನಿತಿನ್ ಗಡ್ಕರಿ ಅವರನ್ನು ಕಚೇರಿಯಲ್ಲಿ ಭೇಟಿಯಾಗಿದ್ದ ಸಂಸದ ಯದುವೀರ್, ಮೈಸೂರಿನ ಅಭಿವೃದ್ಧಿ ವಿಚಾರವಾಗಿ ಚರ್ಚೆ ನಡೆಸಿದ್ದರು. ಯೋಜನೆಗಳ ಪ್ರಗತಿಯ ಬಗ್ಗೆ ಚರ್ಚಸಿದ್ದರು. ಜತೆಗೆ, ಮೈಸೂರು ಕುಶಾಲನಗರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅಡೆತಡೆಗಳ ಬಗ್ಗೆ ವಿವರಿಸಿದ್ದರು.

Recent Articles

spot_img

Related Stories

Share via
Copy link