ನಾಳೆ ಬೆಂಗಳೂರಿಗೆ ಪಿಎಂ ನರೇಂದ್ರ ಮೋದಿ

ಬೆಂಗಳೂರು :

     ಪ್ರಧಾನಿ ನರೇಂದ್ರ ಮೋದಿ  ಅವರು ಭಾನುವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ. ನಮ್ಮ ಮೆಟ್ರೋ a Metro) 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ, ಹಳದಿ ಮಾರ್ಗ ಮೆಟ್ರೋ (Yellow line) ಮಾರ್ಗ ಉದ್ಘಾಟನೆ ಹಾಗೂ ಮೂರು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ. ಈ ನಡುವೆ, ಬಿಜೆಪಿ ನಡೆಸಲು ಉದ್ದೇಶಿಸಿದ್ದ ರೋಡ್‌ ಶೋ ಕಾರ್ಯಕ್ರಮವನ್ನು ಸಮಯದ ಅಭಾವದಿಂದಾಗಿ ಕೈಬಿಡಲಾಗಿದೆ.

   ಬೆಳಗ್ಗೆ 10.55ಕ್ಕೆ ದೆಹಲಿಯಿಂದ ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಎಚ್‌ಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮೋದಿ ಅವರು ಅಲ್ಲಿಂದ ಹೆಲಿಕಾಪ್ಟರ್‌ ಮೂಲಕ ಮೇಖ್ರಿ ವೃತ್ತದ ಬಳಿಯಿರುವ ಎಚ್‌ಕ್ಯುಟಿಸಿ ಕೇಂದ್ರಕ್ಕೆ ಬರಲಿದ್ದಾರೆ. ಬಳಿಕ ರಸ್ತೆ ಮಾರ್ಗವಾಗಿ 11.15ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೇಲ್ವೆ ನಿಲ್ದಾಣಕ್ಕೆ ಆಗಮಿಸಿ ಬೆಂಗಳೂರು-ಬೆಳಗಾವಿ ಮಾರ್ಗದ್ದೂ ಸೇರಿ ಒಟ್ಟು ದೇಶದಲ್ಲಿ ಹೊಸ ಮೂರು ವಂದೇ ಭಾರತ್ ರೈಲುಗಳ ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ.

   ನಂತರ 11.30ಕ್ಕೆ ರೇಲ್ವೆ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ನಿರ್ಗಮಿಸಲಿರುವ ಮೋದಿ ಅವರು 11.45ಕ್ಕೆ ಆರ್.ವಿ.ರಸ್ತೆಯ ರಾಗೀಗುಡ್ಡ ಮೆಟ್ರೋ ನಿಲ್ದಾಣದಲ್ಲಿ ನೂತನ ಹಳದಿ ಮಾರ್ಗಕ್ಕೆ ಚಾಲನೆ ನೀಡಿ ಅದೇ ರೈಲಿನಲ್ಲಿ ಎಲೆಕ್ಟ್ರಾನಿಕ್‌ ಸಿಟಿಗೆ ಪ್ರಯಾಣಿಸಲಿದ್ದಾರೆ. 12.55ಕ್ಕೆ ಎಲೆಕ್ಟ್ರಾನಿಕ್‌ ಸಿಟಿಯ ಐಐಐಟಿ ಕೇಂದ್ರದ ಸಭಾಂಗಣಕ್ಕೆ ಆಗಮಿಸಿ ಸುಮಾರು ಒಂದು ಗಂಟೆ ಕಾಲ ನಡೆಯಲಿರುವ ಕಾರ್ಯಕ್ರಮದಲ್ಲಿ ಮೆಟ್ರೋ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ ಅಲ್ಲಿಂದ ಹೆಲಿಕಾಪ್ಟರ್‌ ಮೂಲಕ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ತಲುಪಿ ನಂತರ ದೆಹಲಿಗೆ ವಾಪಸಾಗಲಿದ್ದಾರೆ.

   ಈ ನಡುವೆ ಕೇಂದ್ರ ರೇಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಶುಕ್ರವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೇಲ್ವೆ ನಿಲ್ದಾಣಕ್ಕೆ ಆಗಮಿಸಿ ಪ್ರಧಾನಿ ಮೋದಿ ಅವರು ಭಾಗವಹಿಸುವ ಕಾರ್ಯಕ್ರಮದ ಪೂರ್ವಸಿದ್ಧತೆಯನ್ನು ಪರಿಶೀಲಿಸಿದರು.

Recent Articles

spot_img

Related Stories

Share via
Copy link