ನವದೆಹಲಿ:
ಸಿಎಎ ವಿರುದ್ಧ ದೇಶಾದ್ಯಂತ ಪ್ರತಿಭಟನೆ ಜೋರಾಗುತ್ತಿದ್ದಂತೆ ಜನರ ಧ್ವನಿಯನ್ನು ಹತ್ತಿಕ್ಕಲು ಕೇಂದ್ರ ಬಿಜೆಪಿ ಸರ್ಕಾರ ಬಲ ಪ್ರಯೋಗ ಮಾಡುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಆರೋಪ ಮಾಡಿದ್ದಾರೆ.
ಜನರ ಆಕ್ರೋಶ ಹತ್ತಿಕ್ಕಲು ವಿವೇಚನಾರಹಿತವಾಗಿ ಶಕ್ತಿಯನ್ನು ಬಳಸುವುದು ಪ್ರಜಾಪ್ರಭುತ್ವದಲ್ಲಿ ಅಸಹನೀಯವಾಗಿದೆ ಎಂದು ಟೀಕಿಸಿದ್ದಾರೆ. ಸರ್ಕಾರದ ಬಲಪ್ರಯೋಗವನ್ನು ಖಂಡಿಸಿದ ಅವರು, ನಾಗರಿಕರು, ವಿದ್ಯಾರ್ಥಿಗಳ ಹೋರಾಟದಲ್ಲಿ ಕಾಂಗ್ರೆಸ್ ಒಗ್ಗಟ್ಟು ಪ್ರದರ್ಶಿಸಲಿದೆ ಎಂದಿದ್ದಾರೆ.
ಕಾಂಗ್ರೆಸ್ ಪಕ್ಷ ಯೋಜಿಸಿದ್ದ ಆನ್ ಲೈನ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಪ್ಪು ನಿರ್ಧಾರಗಳು ಮತ್ತು ಸರ್ಕಾರದ ನೀತಿಗಳ ವಿರುದ್ಧ ಧ್ವನಿ ಎತ್ತಲು ಜನರು ಹಕ್ಕು ಹೊಂದಿದ್ದಾರೆ. ನನ್ನ ಸಂವಿಧಾನದ ಮೂಲಭೂತ ತತ್ವಗಳನ್ನು ಎತ್ತಿಹಿಡಿಯಲು ಹಾಗೂ ಜನರ ಮೂಲಭೂತ ಹಕ್ಕುಗಳನ್ನು ಸಂರಕ್ಷಿಸಲು ಕಾಂಗ್ರೆಸ್ ಪಕ್ಷ ಸಂಪೂರ್ಣ ಬದ್ಧವಾಗಿರುವುದಾಗಿ ಅವರು ತಿಳಿಸಿದರು.
ರಾಷ್ಟ್ರವ್ಯಾಪಿ ಉದ್ದೇಶಿತ ಎನ್ಆರ್ಸಿಯಿಂದ ವಿಶೇಷವಾಗಿ ಬಡವರಿಗೆ ಮತ್ತು ದುರ್ಬಲರಿಗೆ ತೊಂದರೆಯಾಗಲಿದೆ ಎಂದು ಸೋನಿಯಾ ಗಾಂಧಿ ಕಳವಳ ವ್ಯಕ್ತಪಡಿಸಿದ್ದಾರೆ.