ನವದೆಹಲಿ
ಎಐಸಿಸಿ ಅಧ್ಯಕ್ಷರಾಗಿ ಕಾಂಗ್ರೆಸ್ ಕುಟುಂಬದ ಆಪ್ತ ಹಾಗೂ ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅಧಿಕಾರ ವಹಿಸಿಕೊಳ್ಳುವ ಸಂಭವವಿದೆ.
ರಾಹುಲ್ಗಾಂಧಿಯವರು ಎಐಸಿಸಿ ಅಧ್ಯಕ್ಷ ಸ್ಥಾನ ನಿರಾಕರಿಸಿದ್ದು ಈ ನಿಟ್ಟಿನಲ್ಲಿ ಗಟ್ಟಿ ನಿಲುವನ್ನು ಹೊಂದಿರುವ ಹಿನ್ನೆಲೆ, ಕಾಂಗ್ರೆಸ್ ಹಿರಿಯ ನಾಯಕ ಅಶೋಕ್ ಗೆಹ್ಲೋಟ್ ಅವರನ್ನು ಎಐಸಿಸಿ ಅಧ್ಯಕ್ಷರನ್ನಾಗಿಸುವ ಎಲ್ಲ ತೀರ್ಮಾನವನ್ನು ಕಾಂಗ್ರೆಸ್ ವರಿಷ್ಠರು ಕೈಗೊಂಡಿದ್ದಾರೆಂದು ಕೆಲ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಅಶೋಕ್ ಗೆಹ್ಲೋಟ್ ಅವರು ಎಐಸಿಸಿ ಅಧ್ಯಕ್ಷರಾಗಿ ಒಂದು ವೇಳೆ ಅಧಿಕಾರ ವಹಿಸಿಕೊಂಡರೂ ಸಹ ರಾಜಸ್ತಾನ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆನ್ನಲಾಗಿದ್ದು, ಈ ನಿಟ್ಟಿನಲ್ಲಿ ಕೆಲ ಕಾಂಗ್ರೆಸ್ ಮುಖಂಡರು ಗೆಹ್ಲೋಟ್ ಅವರು ಮುಖ್ಯಮಂತ್ರಿಯಾಗಿ ಮುಂದುವರೆಯುವುದನ್ನು ಬೆಂಬಲಿಸಲಿದ್ದಾರೆ.
ಹಲವು ಪಕ್ಷಗಳಲ್ಲಿ ಪಕ್ಷದ ವರಿಷ್ಠರಾಗಿರುವವರೇ ಆಯಾಯ ರಾಜ್ಯಗಳ ಮುಖ್ಯಮಂತ್ರಿಗಳಾಗಿ ಅಧಿಕಾರ ನಿರ್ವಹಿಸಿದ್ದಾರೆ. ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ, ಒರಿಸ್ಸಾದ ಸಿಎಂ ನವೀನ್ ಪಟ್ನಾಯಕ್, ಉತ್ತರ ಪ್ರದೇಶ
ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹಾಗೂ ಮಾಯಾವತಿ ಹಾಗೂ ತಮಿಳುನಾಡಿನ ದಿ. ಹಾಗೂ ಮಾಜಿ ಸಿಎಂ ಜಯಲಲಿತಾ ಅವರು ಪಕ್ಷದ ಅಧ್ಯಕ್ಷರಾಗಿದ್ದುಕೊಂಡೇ ಮುಖ್ಯಮಂತ್ರಿ ಸ್ಥಾನವನ್ನು ನಿಭಾಯಿಸಿದ್ದಾರೆ. ಈ ಹಿನ್ನಲೆ ಅಶೋಕ್ ಗೆಹ್ಲೋಟ್ ಅವರು ರಾಜಸ್ತಾನ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಕೆಲ ಕಾಂಗ್ರೆಸ್ ಬೆಂಬಲಿಗರು ಅಭಿಪ್ರಾಯಪಟ್ಟಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
