ಬೆಂಗಳೂರು
ಕಳೆದ ಹಾಸನ ಲೋಕಸಭಾ ಕ್ಷೇತ್ರ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ಆಯ್ಕೆಯಾಗಲು ಅಕ್ರಮ ಎಸಗಿದ ಆರೋಪದ ಮೇಲೆ ಜನಪ್ರತಿನಿಧಿ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಲು ಮಾಜಿ ಸಚಿವ ಹಾಗೂ ಹೊಳೆನರಸೀಪುರ ಶಾಸಕ ಎಚ್.ಡಿ. ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣಗೆ ನೋಟಿಸ್ ಜಾರಿಯಾದ ಹಿನ್ನೆಲೆಯಲ್ಲಿ ಅವರ ಪರ ವಕೀಲರು ಹೈಕೋರ್ಟ್ಗೆ ಹಾಜರಾಗಿ ವಕಾಲತ್ತು ಸಲ್ಲಿಸಿದರು.
ಅಲ್ಲದೆ, ಸುಪ್ರೀಂಕೋರ್ಟ್ ಆದೇಶವನ್ನು ಮನವರಿಕೆ ಮಾಡಿಕೊಟ್ಟರು, ಆ ಹಿನ್ನೆಲೆಯಲ್ಲಿ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿದೆ. ಅವರ ಪರ ವಕೀಲರ ಮೆಮೋ ದಾಖಲಿಸಿಕೊಂಡ ನ್ಯಾಯಮೂರ್ತಿ ಕೆ. ನಟರಾಜನ್ ಅವರ ಪೀಠ, ಸುಪ್ರಿಂ ಕೋರ್ಟ್ನಿಂದ ಯಾವುದಾದರೂ ಆದೇಶ ಪ್ರಕಟವಾದ ನಂತರ ಪ್ರಕರಣವನ್ನು ವಿಚಾರಣೆಗೆ ನಿಗದಿಪಡಿಸಬೇಕು ಎಂದು ಕೋರ್ಟ್ ರಿಜಿಸ್ಟ್ರಿಗೆ ಸೂಚಿಸಿ ವಿಚಾರಣೆ ಮುಂದೂಡಿತು.
ಏನಿದು ಪ್ರಕರಣ? ಚುನಾವಣಾ ಅಕ್ರಮ ಎಸಗಿದ ಹಿನ್ನೆಲೆಯಲ್ಲಿ ಹಾಸನ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಿ ಹೈಕೋರ್ಟ್ 2023ರ ಸೆ.1ರಂದು ತೀರ್ಪು ನೀಡಿತ್ತು.
ಹಾವೇರಿಯಲ್ಲಿ ಜೆಪಿ ನಡ್ಡಾ ವಿರುದ್ಧ ಕೇಸ್, ಹೈಕೋರ್ಟ್ ತಡೆ ಅಲ್ಲದೆ, ಚುನಾವಣೆಯಲ್ಲಿ ಪ್ರಜ್ವಲ್ ಗೆಲುವು ಸಾಧಿಸಲು ಅಕ್ರಮ ಎಸಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಮತ್ತು ಎಚ್.ಡಿ.ರೇವಣ್ಣ ಅವರ ವಿರುದ್ಧ ಜನ ಪ್ರತಿನಿಧಿಗಳ ಕಾಯ್ದೆ ಸೆಕ್ಷನ್ 99(1)(ಎ)(2) ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲು ಹೈಕೋರ್ಟ್ ಶೋಕಾಸ್ ನೋಟಿಸ್ ಜಾರಿಗೊಳಿಸಲು ಆದೇಶಿಸಿತ್ತು. ಅದರಂತೆ ಅವರಿಬ್ಬರಿಗೂ 2023ರ ಸೆ.13ರಂದು ಹೈಕೋರ್ಟ್ನಿಂದ ನೋಟಿಸ್ ಜಾರಿಯಾಗಿತ್ತು.
ಈ ಹಿನ್ನೆಲೆಯಲ್ಲಿ ಶುಕ್ರವಾರ ಎಚ್.ಡಿ. ರೇವಣ್ಣ ಮತ್ತು ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರ ಪರ ವಕೀಲರು ಹಾಜರಾಗಿ ವಕಾಲತ್ತು ಜೊತೆಗೆ ಮೆಮೊ ಸಲ್ಲಿಸಿದರು. ಆಗ ನೋಟಿಸ್ ಪಡೆದವರು ಎಲ್ಲಿದ್ದಾರೆಂದು ನ್ಯಾಯಪೀಠ ಪ್ರಶ್ನಿಸಿತು. ಅದಕ್ಕೆ ಉತ್ತರಿಸಿದ ವಕೀಲರು, ನೋಟಿಸ್ ಪಡೆದವರ ಪರ ತಾವು ವಕಾಲತ್ತು ಸಲ್ಲಿಸುತ್ತಿದ್ದೇವೆ. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರಿಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿದೆ. ಪಜ್ವಲ್ ಮತ್ತು ಎಚ್.ಡಿ. ರೇವಣ್ಣ ಅವರ ವಿರುದ್ಧದ ಹೈಕೋರ್ಟ್ ಆದೇಶಕ್ಕೆ ಸುಪ್ರಿಂ ಕೋರ್ಟ್ 2023ರ ಸೆ.18ರಂದು ತಡೆಯಾಜ್ಜೆ ನೀಡಿದೆ ಎಂದು ತಿಳಿಸಿ ಮೊಮೊ ಸಲ್ಲಿಸಿದರು. ಜತೆಗೆ, ಸುಪ್ರಿಂ ಕೋರ್ಟ್ನ ಮಧ್ಯಂತರ ಆದೇಶದ ವಿವರಗಳನ್ನು ಓದಿ ನ್ಯಾಯಾಲಯಕ್ಕೆ ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2023/10/revanna-.jpg)