ತುಮಕೂರು :
ಇಲ್ಲಿನ ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಹಾಗೂ ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ನಾಗರಾಜರಾವ್ (60) ಅವರು ಹೃದಯಾಘಾತದಿಂದ ನಿಧನರಾದರು.
ದೊಡ್ಡಬಳ್ಳಾಪುರದ ಸಂಬಂಧಿಕರ ಮನೆಗೆ ತೆರಳಿ ನಂತರ ದೇವಾಲಯಕ್ಕೆ ಹೋಗಿದ್ದ ಸಂದರ್ಭದಲ್ಲಿ ಕುಸಿದು ಬಿದ್ದಿರುವ ನಾಗರಾಜರಾವ್ ಅವರನ್ನು ತಕ್ಷಣ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಶ್ರೀಯುತರು ತಂದೆ ರಂಗರಾವ್, ಪತ್ನಿ ಶೈಲಜಾ, ಪುತ್ರಿ ವೈಷ್ಣವಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮಹಾನಗರ ಪಾಲಿಕೆಯ 30ನೇ ವಾರ್ಡ್ನ ಮಾಜಿ ಸದಸ್ಯರಾಗಿದ್ದ ನಾಗರಾಜರಾವ್ ಅವರು ಸಮಾಜ ಸೇವೆ, ವಾರ್ಡ್ ಅಭಿವೃದ್ಧಿ ಕಾರ್ಯಗಳಲ್ಲೂ ಮುಂಚೂಣಿಯಲ್ಲಿದ್ದರು. ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.
ನಗರದ ಜಿಲ್ಲಾ ಬ್ರಾಹ್ಮಣ ಸಮಾಜದಲ್ಲಿ ನಾಗರಾಜರಾವ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಂತರ ದೇವನೂರಿನಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ದು ಅಲ್ಲೂ ಸಹ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.
ಸಂತಾಪ
ಮಹಾನಗರ ಪಾಲಿಕೆ ಮಾಜಿ ಸದಸ್ಯ ನಾಗರಾಜರಾವ್ ಅವರ ನಿಧನಕ್ಕೆ ಸಂಸದ ಜಿ.ಎಸ್. ಬಸವರಾಜು, ಶಾಸಕ ಜ್ಯೋತಿಗಣೇಶ್, ಮಾಜಿ ಶಾಸಕ ಡಾ. ರಫೀಕ್ಅಹಮದ್ ಹಾಗೂ ಮಹಾನಗರ ಪಾಲಿಕೆಯ ಸದಸ್ಯರುಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಂಜೆ ನಗರದ ಗಾರ್ಡನ್ ರಸ್ತೆಯಲ್ಲಿರುವ 6 ಚಿತಾಗಾರದಲ್ಲಿ ನಾಗರಾಜರಾವ್ ಅವರ ಅಂತ್ಯಕ್ರಿಯೆ ನಡೆಯಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
