ಪಂಚಕುಲ
ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಹರ್ಯಾಣದ ಪಂಚಕುಲದಲ್ಲಿ ನಡೆದಿದೆ. ಡೆಹ್ರಾಡೂನ್ ಮೂಲದ ಕುಟುಂಬ ಮನೆಯ ಹೊರಗೆ ನಿಲ್ಲಿಸಿದ್ದ ಕಾರಿನೊಳಗೆ ಶವಗಳು ಲಾಕ್ ಆಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿವೆ.
ಮೂಲಗಳ ಪ್ರಕಾರ, ಕುಟುಂಬವು ಭಾರೀ ಸಾಲ ಮತ್ತು ಆರ್ಥಿಕ ಸಂಕಷ್ಟದಲ್ಲಿದ್ದರಿಂದ ಈ ಕಠಿಣ ಕ್ರಮ ಕೈಗೊಂಡಿದೆ. ಡೆಹ್ರಾಡೂನ್ನ ನಿವಾಸಿ ಪ್ರವೀಣ್ ಮಿತ್ತಲ್, ಪಂಚಕುಲದ ಬಾಗೇಶ್ವರ ಧಾಮದಲ್ಲಿ ತನ್ನ ಕುಟುಂಬದೊಂದಿಗೆ ಆಧ್ಯಾತ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬಂದಿದ್ದರು. ಕಾರ್ಯಕ್ರಮ ಮುಗಿಸಿಕೊಂಡು ಕುಟುಂಬವು ಡೆಹ್ರಾಡೂನ್ಗೆ ಹಿಂತಿರುಗಿದ ನಂತರ ಕಳೆದ ಭಾನುವಾರ ಈ ಘಟನೆ ನಡೆದಿದೆ.
ಕಾರಿನೊಳಗೆ ಕುಟುಂಬ ಸದಸ್ಯರು ಹೆಣಗಾಡುತ್ತಿರುವುದನ್ನು ನೋಡಿದ ಸ್ಥಳೀಯ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ಆಗಮಿಸುತ್ತಿದ್ದಂತೆಯೇ ಬಾಗಿಲು ಒಡೆದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದವರನ್ನು ಖಾಸಗಿ ಮತ್ತು ನಾಗರಿಕ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಮೃತಪಟ್ಟಿದ್ದಾರೆ. ಮೃತರನ್ನು ಪ್ರವೀಣ್ ಮಿತ್ತಲ್ (42ವ), ಅವರ ಪೋಷಕರು, ಪತ್ನಿ ಮತ್ತು ಮೂವರು ಮಕ್ಕಳೆಂದು ಗುರುತಿಸಲಾಗಿದೆ. ಆರಂಭಿಕ ತನಿಖೆಯ ನಂತರ, ಇದು ಆತ್ಮಹತ್ಯೆ ಪ್ರಕರಣದಂತೆ ತೋರುತ್ತಿದೆ. ವಿಧಿವಿಜ್ಞಾನ ತಂಡವು ಸ್ಥಳಕ್ಕೆ ಆಗಮಿಸಿ ಸ್ಥಳದಿಂದ ಎಲ್ಲಾ ಪುರಾವೆಗಳನ್ನು ಸಂಗ್ರಹಿಸಿ ವೈಜ್ಞಾನಿಕವಾಗಿ ವಿಶ್ಲೇಷಿಸುತ್ತೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹಿಮಾದ್ರಿ ಕೌಶಿಕ್ ಹೇಳಿದ್ದಾರೆ.
ಸ್ಥಳದಲ್ಲಿ ಆತ್ಮಹತ್ಯೆ ಪತ್ರ ಪತ್ತೆಯಾಗಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಪಂಚಕುಲದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
