ಬೆಳಗಾವಿ
ಸುವರ್ಣಸೌಧದಲ್ಲಿ ಡಿ.೮ ರಿಂದ ೧೯ರ ರವರೆಗೆ ನಡೆಯಲಿರುವ ಚಳಿಗಾಲ ಅಧಿವೇಶನ ವೇಳೆ ಸಾಲು, ಸಾಲು ಪ್ರತಿಭಟನೆಗಳು ನಡೆಯಲಿವೆ. ಈಗಾಗಲೇ ಸುಮಾರು 50ಕ್ಕೂ ಅಧಿಕ ಸಂಘಟನೆ ಗಳು ಪ್ರತಿಭಟನೆಗೆ ಅನುಮತಿ ಕೋರಿ ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಹೆಸರು ನೊಂದಾಯಿಸಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕಟ್ಟೆಚ್ಚರ ವಹಿಸಿದೆ.
ಕಳೆದ ಚಳಿಗಾಲ ಅಧಿವೇಶನ ಸಂದರ್ಭದಲ್ಲಿ ಪಂಚಮಸಾಲಿ ಸಮುದಾಯಕ್ಕೆ ೨ಎ ಮೀಸಲಾತಿಗೆ ಆಗ್ರಹಿಸಿ ನಡೆದ ಪ್ರತಿಭಟನೆ ವೇಳೆ ಉಂಟಾದ ಘರ್ಷಣೆಯಲ್ಲಿ ಲಾಠಿಚಾರ್ಜ್ ಮಾಡುವ ಅನಿವಾ ರ್ಯತೆ ಸೃಷ್ಟಿಯಾಗಿತ್ತು. ಈ ರೀತಿಯ ಘಟನೆ ಮರುಕಳಿಸದಂತೆ ಪೊಲೀಸ್ ಇಲಾಖೆ ಮುತುವರ್ಜಿ ವಹಿಸಿದ್ದು ಪ್ರತಿಭಟನೆ ನಡೆಸುವ ಸಂಘಟನೆಗಳಿಗೆ ಕಡಿಮೆ ಜನರನ್ನು ಕರೆದುಕೊಂಡು ಬರುವಂತೆ ಮೊದಲೇ ನಿರ್ದೇಶನ ನೀಡಲಾಗುತ್ತಿದೆ.
ಅಧಿವೇಶನ ಸಂದರ್ಭದಲ್ಲಿ ರೈತರ ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬಿಜೆಪಿ ನೇತೃತ್ವ ದಲ್ಲಿ ಬೃಹತ್ ಪ್ರತಿಭಟನೆಗೆ ಮುಂದಾಗಿದೆ. ಇನ್ನೂ ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ರಾಜ್ಯ ರೈತ ಸಂಘ ಹೋರಾಟಕ್ಕೆ ಕರೆ ನೀಡಿದೆ. ಅಷ್ಟೇ ಅಲ್ಲದೆ ರಾಜ್ಯದ ವಿವಿಧ ಭಾಗಗಳಿಂದ ಜನ ಪ್ರತಿಭಟನೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಭದ್ರತೆ ದೃಷ್ಟಿಯಿಂದ ಈ ಬಾರಿ ೬ ಸಾವಿರಕ್ಕೂ ಅಧಿಕ ಪೊಲೀಸ ರನ್ನು ನಿಯೋಜನೆ ಮಾಡಲಾಗುತ್ತಿದೆ.
ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಸುಮಾರು ೨೦ ಸಾವಿರಕ್ಕೂ ಅಧಿಕ ರೈತರನ್ನು ಸೇರಿಸಿ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲು ಬಿಜೆಪಿ ಸಜ್ಜಾಗಿದೆ. ಡಿ.೯ರಂದು ಪ್ರತಿಭಟನೆ ದಿನಾಂಕ ನಿಗದಿಯಾಗಿದ್ದು, ಈ ಸಂದರ್ಭದಲ್ಲಿ ಬಿಜೆಪಿ ನಾಯಕರು ಉಪಸ್ಥಿತರಿರುವರು. ಅಷ್ಟೇ ಅಲ್ಲದೆ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ನಾಯಕರು ಗ್ರಾಮ ವಾಸ್ತವ್ಯಕ್ಕೆ ಸಿದ್ಧತೆ ನಡೆಸಿದ್ದಾರೆ.
ಅಧಿವೇಶನ ವೇಳೆ ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕಿನ ಆಯ್ದ ಗ್ರಾಮಗಳಲ್ಲಿ ಬಿಜೆಪಿಯಿಂದ ತಲಾ ಒಬ್ಬ ನಾಯಕ ಗ್ರಾಮ ವಾಸ್ತವ್ಯ ಮಾಡಲಿದ್ದು ಜನರ ಸಮಸ್ಯೆಗೆ ಧ್ವನಿಯಾಗುವ ನಿಟ್ಟಿನಲ್ಲಿ ಕಾರ್ಯ ಕ್ರಮ ಆಯೋಜಿಸುವ ಚಿಂತನೆ ನಡೆಸಿದೆ. ೬ ಸಾವಿರ ಪೊಲೀಸ್ ಸಿಬ್ಬಂದಿ ನಿಯೋಜನೆ:
ಬೆಳಗಾವಿ ಚಳಿಗಾಲ ಅಧಿವೇಶನ ವೇಳೆ ನಡೆಯುವ ಸಾಲು, ಸಾಲು ಪ್ರತಿಭಟನೆಗೆಂದು ಸಾವಿರಾರು ಸಂಖ್ಯೆಯಲ್ಲಿ ಜನ ಸೇರುತ್ತಾರೆ. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಠಿಣ ಕ್ರಮ ಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಈ ವರ್ಷ ೬ ಸಾವಿರಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಗಳನ್ನು ಭದ್ರತೆ ಗೆಂದು ನಿಯೋಜಿಸಲಾಗಿದೆ. ೬ ಐಪಿಎಸ್ ಅಧಿಕಾರಿಗಳು ಸೇರಿ ೧೬ ಅಧಿಕಾರಿಗಳು ಭದ್ರತೆ ಮೇಲುಸ್ತು ವಾರಿ ವಹಿಸಲಿದ್ದಾರೆ. ಜತೆಗೆ ಸೂಕ್ಷ್ಮ ಪ್ರದೇಶಗಳಲ್ಲಿ ಡ್ರೋಣ್ ಕಣ್ಗಾವಲು ಇರಲಿದೆ.
ಸುವರ್ಣಸೌಧದಲ್ಲಿ ಈವರೆಗೆ ೧೧ ಬಾರಿ ಅಧಿವೇಶನ ನಡೆದಿವೆ. ಈವರೆಗೆ ನಡೆದಿರುವ ಹಿಂಸಾತ್ಮಕ ಪ್ರತಿಭಟನೆ ಸೇರಿ ೨೭ ಪ್ರಕರಣಗಳು ದಾಖಲಾಗಿವೆ. ೨೧ ಸಾರ್ವಜನಿಕರು ಹಾಗೆಯೇ ೭೧ ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ. ಕಳೆದ ವರ್ಷ ನಡೆದ ಪಂಚಮಸಾಲಿ ಪ್ರತಿಭಟನೆ ಪ್ರಕರಣ ಸಧ್ಯ ನ್ಯಾಯಾಲಯದಲ್ಲಿದೆ. ಇನ್ನೂ ಅಧಿವೇಶನ ವೇಳೆ ಎಂಇಎಸ್ ಮಹಾಮೇಳಾವ್ ನಡೆಸುವ ಸಾಧ್ಯತೆ ಇದ್ದು ಇದಕ್ಕೆ ಜಿಲ್ಲಾಡಳಿತ ಅನುಮತಿ ನಿರಾಕರಣೆ ಮಾಡಿದೆ.








