ಬೆಂಗಳೂರು:
ಬಿಬಿಎಂಪಿ ವ್ಯಾಪ್ತಿಯಲ್ಲಿ ಬಾಕಿ ಆಸ್ತಿ ತೆರಿಗೆ ಪಾವತಿಸುವವರಿಗಾಗಿ ಜಾರಿಗೊಳಿಸಿರುವ ಒಂದು ಬಾರಿ ಪರಿಹಾರ ಯೋಜನೆ (ಒಟಿಎಸ್)ಯು ಇದೇ ಜುಲೈ 31ಕ್ಕೆ ಮುಗಿಯಲಿದ್ದು, ಈ ಹಿನ್ನೆಲೆಯಲ್ಲಿ ಜನರ ಗೊಂದಲಗಳನ್ನು ದೂರಾಗಿಸಲು ಪಾಲಿಕೆಯು 1533 ಸಹಾಯವಾಣಿಯನ್ನು ಪ್ರಾರಂಭಿಸಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಚೇರಿಯ ಮುಖ್ಯ ಆಯುಕ್ತರ ಕಛೇರಿಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸೋಮವಾರ ಪರಿಶೀಲನಾ ಸಭೆ ನಡೆಸಿದರು. ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಒಂದು ಬಾರಿ ಪರಿಹಾರ ಯೋಜನೆಯಡಿ ಸುಮಾರು 4 ಲಕ್ಷ ಸುಸ್ತಿದಾರರಿದ್ದಾರೆ. ಈ ಪೈಕಿ ಇದುವರೆಗೆ 80 ಸಾವಿರ ಸುಸ್ತಿದಾರರು ಇದರ ಸದುಪಯೋಗ ಪಡೆದುಕೊಂಡು ಬಾಕಿ ಆಸ್ತಿ ತೆರಿಗೆ ಪಾವತಿಸಿದ್ದಾರೆ. ಉಳಿದ 3.20 ಲಕ್ಷ ಸುಸ್ತಿದಾರರಿಗೆ ಜುಲೈ 31ರವರೆಗೆ ಮಾತ್ರ ಅವಕಾಶವಿದೆ. ಕೂಡಲೆ ಇದರ ಸದುಪಯೋಗಪಡಿಸಿಕೊಳ್ಳಿ ಎಂದು ಹೇಳಿದರು.
ಒಂದು ಬಾರಿ ಪರಿಹಾರ ಯೋಜನೆಯಡಿ ಬಾಕಿ ಆಸ್ತಿ ತೆರಿಗೆ ಪಾವತಿಸುವವರು ಎಷ್ಟು ಪಾವತಿಸಬೇಕು, ಎಲ್ಲಿ ಪಾವತಿಸಬೇಕು ಎಂಬುದೂ ಸೇರಿದಂತೆ ಗೊಂದಲಗಳಿದ್ದರೆ ಪಾಲಿಕೆಯ ಉಚಿತ ಸಹಾಯವಾಣಿ ಸಂಖ್ಯೆ 1533ಗೆ ಕರೆ ಮಾಡಿ ಅಗತ್ಯ ಮಾಹಿತಿ ಪಡೆದುಕೊಳ್ಳಬಹುದು ಎಂದು ತಿಳಿಸಿದರು.
