ಬೆಂಗಳೂರು:
ಕರ್ನಾಟಕ ಸೇರಿದಂತೆ ದೇಶದ ಬಹುತೇಕ ಭಾಗಗಳಲ್ಲಿ ಮುಂದಿನ ಎಂಟು ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದರೂ ಈ ಮಳೆ ರಾಜ್ಯದ ಸಂಕಷ್ಟವನ್ನು ದೂರಾಗಿಸುವುದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕರ್ನಾಟಕದಲ್ಲಿ ಸೆಪ್ಟೆಂಬರ್ ವರೆಗೆ ಶೇ.20 ಮಳೆ ಕೊರತೆ ಎದುರಾಗಿದ್ದು, ಕಾವೇರಿ ಜಲಾನಯನ ಪ್ರದೇಶದಲ್ಲಿ ಶೇ.33 ಹಾಗೂ ಕೊಡಗಿನಲ್ಲಿ ಶೇ.43ರಷ್ಟು ಕಡಿಮೆ ಮಳೆ ದಾಖಲಾಗಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.
ಕರ್ನಾಟಕದಾದ್ಯಂತ ಮಾನ್ಸೂನ್ ಸಕ್ರಿಯವಾಗಿದ್ದು, ಮಳೆ ಕೊರತೆ ಸೆಪ್ಟೆಂಬರ್ ಅಂತ್ಯದ ವೇಳೆಗೆ ನೀಗಲಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಸಾಮಾನ್ಯ ಮಳೆಯಾಗಲಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಐಎಂಡಿ ವಿಜ್ಞಾನಿ ಎ ಪ್ರಸಾದ್ ಅವರು ಹೇಳಿದ್ದಾರೆ.
ಈ 8 ದಿನಗಳ ಮಳೆಯು ಪ್ರಸ್ತುತ ಎದುರಾಗಿರುವ ಮಳೆಯ ಕೊರತೆಯನ್ನು ಕಡಿಮೆ ಮಾಡಲು ಸಾಧ್ಯವಿಲ್ಲ ಎಂದು ಮತ್ತೊಬ್ಬ ಅಧಿಕಾರಿಗಳು ತಿಳಿಸಿದ್ದಾರೆ.
ಅತಿ ಹೆಚ್ಚು ಮಳೆಯಾದರೆ ಮಾತ್ರ ಪರಿಸ್ಥಿತಿ ಸುಧಾರಿಸಬಹುದು. ಆದರೆ, ಅದು ಸಾಧ್ಯವಿಲ್ಲ. ಈಶಾನ್ಯ ಮಾನ್ಸೂನ್ ಸಮಯದಲ್ಲಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಹವಾಮಾನ ವ್ಯವಸ್ಥೆಗಳು ರೂಪುಗೊಂಡಾಗ ಮಾತ್ರ ಮಳೆ ಸಾಧ್ಯವಾಗುತ್ತದೆ. ಹಾಗಾಗಿ ಕರ್ನಾಟಕದ ಕಾವೇರಿ ಜಲಾನಯನ ಪ್ರದೇಶದಲ್ಲಿ ಅಕ್ಟೋಬರ್ನಲ್ಲಿಯೂ ನೀರಿನ ಕೊರತೆ ಮುಂದುವರಿಯುವ ಸಾಧ್ಯತೆಗಳಿವೆ. ತಮಿಳುನಾಡಿನಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆಗಳಿವೆ. ಎಂದು ಅಧಿಕಾರಿ ಹೇಳಿದರು.