ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ಬಹಿರಂಗ ಹೇಳಿಕೆಗಳು ರಾಜ್ಯ ಸರ್ಕಾರವನ್ನು ಮುಜುಗೊರಕ್ಕೊಳಗಾಗುವಂತೆ ಮಾಡುತ್ತಿದ್ದು, ಇದರ ನಡುವಲ್ಲೇ ಸಚಿವ ಕೆ.ಎನ್.ರಾಜಣ್ಣ ಅವರು ನೀಡಿರುವ ಹೇಳಿಕೆಯೊಂದು ಕೈ ಪಾಳಯದಲ್ಲಿ ಸಂಚಲನವನ್ನು ಸೃಷ್ಟಿಸಿದೆ.
ಡಿ.ಕೆ. ಶಿವಕುಮಾರ್ ಜತೆಗೆ ಇನ್ನೂ ಮೂರು ಮಂದಿ ಉಪಮುಖ್ಯಮಂತ್ರಿಗಳನ್ನು ನೇಮಿಸುವಂತೆ ಹೈಕಮಾಂಡ್ಗೆ ಮನವಿ ಮಾಡುತ್ತೇನೆಂದು ಸಚಿವ ರಾಜಣ್ಣ ಅವರು ಹೇಳಿದ್ದಾರೆ.
ನಿನ್ನೆಯಷ್ಟೇ ಸುದ್ದಿಗಾರರೊಂದಿಗೆ ಮಾತನಾಡಿದ ರಾಜಣ್ಣ ಅವರು, ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹಿತದೃಷ್ಟಿಯಿಂದ ಇನ್ನೂ ಮೂರು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸಲು ಸಲಹೆ ನೀಡಲು ನಿರ್ಧರಿಸಿದ್ದೇನೆ. ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನ ಬರಲು ಎಸ್ಸಿ-ಎಸ್ಟಿ ಹಾಗೂ ಅಲ್ಪಸಂಖ್ಯಾತರು, ಲಿಂಗಾಯತರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಬೆಂಬಲಿಸಿರುವುದು ಸಹ ಕಾರಣ. ಹೀಗಾಗಿ ಆ ಸಮುದಾಯಗಳಿಗೂ ಆದ್ಯತೆ ನೀಡಿದರೆ ಪಕ್ಷಕ್ಕೆ ಅನುಕೂಲವಾಗಲಿದೆ ಎಂಬುದು ನನ್ನ ಅಭಿಪ್ರಾಯ ಎಂದು ಹೇಳಿದರು.
