ಬೆಂಗಳೂರು:
ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ರಾಜ್ಯ ಸರ್ಕಾರದ ಪ್ರಸ್ತಾಪವನ್ನು ಕೇಂದ್ರ ತಿರಸ್ಕರಿಸಿದೆ ಎಂದು ವರದಿಯಾಗಿದ್ದರೂ, ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಅವರು ಇದು ರಾಜ್ಯ ವಿಷಯವಾಗಿದ್ದು, ನಿರ್ಧಾರದಿಂದ ಹಿಂದೆ ಸರಿಯಲ್ಲ ಎಂದು ಬುಧವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಗಳ ಮರುನಾಮಕರಣವು ರಾಜ್ಯ ವಿಷಯವಾಗಿದೆ. ಆದರೆ. ಇಲ್ಲಿನ ಕೇಂದ್ರ ಸಚಿವರು (ಎಚ್ಡಿ ಕುಮಾರಸ್ವಾಮಿ) ಕೇಂದ್ರ ಗೃಹ ಸಚಿವರಿಗೆ ಹೇಳಿ ಹೆಸರು ಬದಲಾವಣೆ ಬೇಡ ಎಂದು ಬರೆಸಿದ್ದಾರೆ, ನಮ್ಮ ಕಾನೂನು ಇಲಾಖೆ ನಮ್ಮ ಪರವಾಗಿ ಬರೆದಿದೆ. ನಾವು ಮತ್ತೆ ಕೇಂದ್ರವನ್ನು ಸಂಪರ್ಕಿಸುವ ಅಗತ್ಯವಿಲ್ಲ. ನಮ್ಮ ನಿರ್ಧಾರದಲ್ಲಿ ಬದಲಾವಣೆಗಳಿಲ್ಲ. ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವುದು ನಿಶ್ಚಿತ ಎಂದು ಹೇಳಿದರು.
ಹೆಸರು ಬದಲಾವಣೆ ಮಾಡಿಕೊಳ್ಳುವಾಗ ಒಂದು ಅಫಿಡವಿಟ್ ಮಾಡಿಕೊಂಡು ಬದಲಾವಣೆ ಮಾಡಿಕೊಳ್ಳಬಹುದಂತೆ. ಇದು ರಾಜ್ಯದ ವಿಷಯ. ದ್ವೇಷದ ರಾಜಕಾರಣ ಹೇಗೆ ನಡೆಯುತ್ತಿದೆ ಹಾಗೂ ರಾಮನಗರ ಜನತೆಯ ಮೇಲೆ ನಡೆಸುತ್ತಿರುವ ಗದಾಪ್ರಹಾರಕ್ಕೆ ಇದೆಲ್ಲಾ ಸಾಕ್ಷಿ ಎಂದು ವ್ಯಂಗ್ಯವಾಡಿದರು.
ಕುಮಾರಸ್ವಾಮಿ ರಾಮನಗರದ ಬೆಳವಣಿಗೆಗೆ ವಿರುದ್ಧವಾಗಿದ್ದಾರೆ. ಆದ್ದರಿಂದ, ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವುದನ್ನು ವಿರೋಧಿಸುತ್ತಿದ್ದಾರೆಂದು ಆರೋಪಿಸಿದರು.ರಾಮನಗರ 1986ರಲ್ಲಿ ಬೆಂಗಳೂರು ಗ್ರಾಮಾಂತರ ಪ್ರತ್ಯೇಕ ಜಿಲ್ಲೆಯಾಗಿ ರಚನೆಯಾಯಿತು. ನಂತರ 2007ರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಭಾಗವಾಗಿದ್ದ ರಾಮನಗರ ಪ್ರತ್ಯೇಕ ಜಿಲ್ಲೆಯಾಯಿತು. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ರಾಮನಗರ ರಚನೆಯಾಯಿತು.
ರಾಮನಗರ ಜಿಲ್ಲೆಯ ಹೆಸರನ್ನು ‘ಬೆಂಗಳೂರು ದಕ್ಷಿಣ’ ಎಂದು ಬದಲಾವಣೆ ಮಾಡುವುದು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಕನಸು. ಈ ಕುರಿತು ಅವರು ಘೋಷಣೆಯನ್ನು ಮಾಡಿದ್ದರು. 2024ರ ಜುಲೈನಲ್ಲಿ ಕರ್ನಾಟಕ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆಯನ್ನು ನೀಡಿತ್ತು. ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿತ್ತು.
ರಾಮ’ನ ಹೆಸರಿನಲ್ಲಿರುವ ರಾಮನಗರ ಜಿಲ್ಲೆಯ ಹೆಸರನ್ನು ರಾಜಕೀಯ ಕಾರಣಕ್ಕಾಗಿ ‘ಬೆಂಗಳೂರು ದಕ್ಷಿಣ’ ಎಂದು ಬದಲಾವಣೆ ಮಾಡಲಾಗುತ್ತಿದೆ ಎಂದು ಬಿಜೆಪಿ, ಜೆಡಿಎಸ್ ಆರೋಪಿಸಿದ್ದವು.
ರಾಮನಗರ ಜಿಲ್ಲೆಯ ಶಾಸಕರು, ಕಾಂಗ್ರೆಸ್ ನಾಯಕರ ನಿಯೋಗ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾವಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಸಲ್ಲಿಕೆ ಮಾಡಿತ್ತು. ಚನ್ನಪಟ್ಟಣ, ರಾಮನಗರ, ಮಾಗಡಿ, ಕನಕಪುರ ಮತ್ತು ಹಾರೋಹಳ್ಳಿ ಸೇರಿಸಿ ‘ಬೆಂಗಳೂರು ದಕ್ಷಿಣ’ ಜಿಲ್ಲೆ ಮಾಡಬೇಕೆಂಬ ಮನವಿಯನ್ನು ಸಲ್ಲಿಸಲಾಗಿತ್ತು. ಅಂತಿಮವಾಗಿ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ ಈಗ ಕೇಂದ್ರದ ಒಪ್ಪಿಗೆ ಸಿಕ್ಕಿಲ್ಲ.
