ಬೆಂಗಳೂರು:
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ರಾಮಣ್ಣ ಲಮಾಣಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್. ಚಂದ್ರಪ್ಪ, ಸಚಿವರಾದ ಹೆಚ್ ಕೆ ಪಾಟೀಲ್, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ಮಾಜಿ ಸಚಿವರಾದ ವಿನಯ್ ಕುಲಕರ್ಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಈ ವೇಳೆ ಮಾತನಾಡಿದ ರಾಮಪ್ಪ ಲಮಾಣಿ, ‘ಯಾವುದೇ ಷರತ್ತು ಇಲ್ಲದೇ ನಾನು ಕಾಂಗ್ರೆಸ್ ಸೇರುತ್ತಿದ್ದೇನೆ. ಬಿಜೆಪಿಯಲ್ಲಿ ಆಗಿರುವ ನೋವಿನಿಂದ ಆ ಪಕ್ಷ ತೊರೆದಿದ್ದೇನೆ. ಕಾಂಗ್ರೆಸ್ ಪಕ್ಷದ ನಾಯಕರು ಯಾರನ್ನು ಅಭ್ಯರ್ಥಿಯನ್ನಾಗಿ ಮಾಡುತ್ತಾರೋ ಅವರನ್ನು ಗೆಲ್ಲಿಸಲು ನಾನು ಶ್ರಮಿಸುತ್ತೇನೆ’ ಎಂದರು.
‘ಜಗದೀಶ ಶೆಟ್ಟರ್ ಹಾಗೂ ಡಿ.ಕೆ. ಶಿವಕುಮಾರ್ ಅವರು ಉತ್ತರ ಕರ್ನಾಟಕ ಭಾಗದ ಅನೇಕ ನಾಯಕರಿಗೆ ಗಾಳ ಹಾಕಿದ್ದಾರೆ. ಮುಂದಿನ ದಿನಗಳಲ್ಲಿ ಅನೇಕರು ಕಾಂಗ್ರೆಸ್ ಸೇರಲಿದ್ದಾರೆ. ಮುಂದಿನ 10 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಮಾಡಲಿದೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಅನೇಕ ಶಾಸಕರು ಕೇವಲ 1,500ಕ್ಕಿಂತ ಕಡಿಮೆ ಮತಗಳ ಅಂತರದಿಂದ ಗೆದ್ದಿದ್ದಾರೆ. ಇಲ್ಲದಿದ್ದರೆ, ಬಿಜೆಪಿ 40 ಸ್ಥಾನಗಳಿಗೆ ನಿಲ್ಲುತ್ತಿತ್ತು. ಮುಂದಿನ ದಿನಗಳಲ್ಲಿ ಬಿಜೆಪಿ ಇನ್ನಷ್ಟು ದೂಳೀಪಟ ಆಗಲಿದೆ’ ಎಂದರು.
‘ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ಜನರಿಗೆ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದಾರೆ. ಜನರು ಕೂಡ ಕಾಂಗ್ರೆಸ್ ಸರ್ಕಾರದ ಮೇಲೆ ಹೆಚ್ಚಿನ ವಿಶ್ವಾಸ ಇಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿ ಕಾರ್ಯಕರ್ತರೂ ಕೂಡ ಪಕ್ಷ ತೊರೆದು ಕಾಂಗ್ರೆಸ್ ಸೇರುವುದಾಗಿ ಮಾತು ನೀಡಿದ್ದಾರೆ. ಅದಕ್ಕಾಗಿ ಪ್ರತ್ಯೇಕ ಕಾರ್ಯಕ್ರಮ ಮಾಡುತ್ತೇವೆ’ ಎಂದರು.
ಈ ಹಿಂದೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ರಾಮಣ್ಣ ಲಮಾಣಿ, ಬಿಜೆಪಿಯಲ್ಲಿ ಎರಡು ಬಾರಿ ಶಾಸಕನಾಗಿ ಶಿರಹಟ್ಟಿ, ಮುಂಡರಗಿ ಹಾಗೂ ಲಕ್ಷ್ಮೇಶ್ವರ ತಾಲೂಕುಗಳಲ್ಲಿ ಹೆಚ್ಚಿನ ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಮೂರನೇ ಬಾರಿಗೆ ಕೊನೆಯ ಹಂತವರೆಗೂ ಎಲ್ಲಾ ಕಡೆ ಅಭಿವೃದ್ಧಿಗೆ ಖರ್ಚು ಮಾಡಿದ್ದೇನೆ. ಆದರೆ, ಕೊನೆಯ ಹಂತದಲ್ಲಿ ಬಿಜೆಪಿಯಿಂದ ನನಗೆ ಟಿಕೆಟ್ ಕೊಡಲಿಲ್ಲ. ಆದರೂ ನಿಷ್ಠಾವಂತನಾಗಿ ಬಿಜೆಪಿಯಲ್ಲಿ ದುಡಿದಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದ್ದರು. ಆ ಮೂಲಕ ನೇರವಾಗಿಯೇ ಕಾಂಗ್ರೆಸ್ ಸೇರುವ ಕುರಿತು ಮಾಹಿತಿ ನೀಡಿದ್ದರು.