ಬೆಂಗಳೂರು
ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಯನ್ನು ಜೂನ್ 15ರ ವರೆಗೆ ವಿಸ್ತರಿಸಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಆ ಮೂಲಕ ರೈಡ್-ಹೇಲಿಂಗ್ ಕಂಪನಿಗಳಿಗೆ ಬೈಕ್ ಟ್ಯಾಕ್ಸಿ ಸೇವೆಗಳನ್ನು ಒದಗಿಸಲು ಇನ್ನೂ ಒಂದು ತಿಂಗಳು ಕಾಲಾವಕಾಶ ಸಿಕ್ಕಂತಾಗಿದೆ. ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಯನ್ನು ಮುಂದುವರೆಸಲು ನಿರ್ದೇಶನ ಕೋರಿ ರೊಪ್ಪೆನ್ ಟ್ರಾನ್ಸ್ಪೋರ್ಟೇಶನ್ ಸರ್ವೀಸ್ ಲಿಮಿಟೆಡ್ ಸೇರಿದಂತೆ ಇತರೆ ಕಂಪನಿಗಳು ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಪರಿಗಣಿಸಿ ನ್ಯಾಯಮೂರ್ತಿ ಬಿ ಎಂ ಶ್ಯಾಮ್ ಪ್ರಸಾದ್ ಅವರಿದ್ದ ನ್ಯಾಯಪೀಠದಿಂದ ಆದೇಶ ಹೊರಡಿಸಲಾಗಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದ್ದು, ರೋಪೆನ್ ಟ್ರಾನ್ಸ್ಫರ್ಮೇಷನ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಪ್ರಕಾರ, ಕರ್ನಾಟಕದಲ್ಲಿ ಆರು ಲಕ್ಷಕ್ಕೂ ಹೆಚ್ಚು ನೋಂದಾಯಿತ ಬೈಕ್ ಟ್ಯಾಕ್ಸಿಗಳಿದ್ದು, ಆ ಮೂಲಕ ಸವಾರರು ತನ್ನ ಜೀವನ ನಡೆಸುತ್ತಿದ್ದಾರೆ. ಒಂದು ವೇಳೆ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಸ್ಥಗಿತಗೊಳಿಸಿದರೇ ಅವರು ತೀವ್ರ ಸಂಕಷ್ಟಕ್ಕೆ ಸಿಲುಕಬಹುದು ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರವು ಪ್ರಸ್ತುತ ಬೈಕ್ ಟ್ಯಾಕ್ಸಿಗಳಿಗಾಗಿ ಸಮಗ್ರ ನೀತಿಯನ್ನು ರೂಪಿಸುತ್ತಿದೆ. ಕೈಗೆಟುಕುವ ಬೆಲೆ ಮತ್ತು ಬೇಡಿಕೆ ಹಿನ್ನೆಲೆ ಬೈಕ್ ಟ್ಯಾಕ್ಸಿ ಸೇವೆಗಳು ನಗರ ಪ್ರದೇಶದಲ್ಲಿ ಹೆಚ್ಚುತ್ತಿವೆ. ವಾದ-ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟ್, ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಯನ್ನು ಜೂನ್ 15ರ ವರೆಗೆ ನಡೆಸಲು ವಿಸ್ತರಣೆ ಮಾಡಿ ವಿಚಾರಣೆ ಮುಂದೂಡಿದೆ.
ಇತ್ತೀಚೆಗೆ ಹೈಕೋರ್ಟ್ ಆರು ವಾರದೊಳಗೆ ಬೈಕ್ ಟ್ಯಾಕ್ಸಿ ನಿಲ್ಲಿಸುವಂತೆ ಆದೇಶ ನೀಡಿತ್ತು. 1988 ರ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 93 ರ ಅಡಿಯಲ್ಲಿ ಅಗತ್ಯ ನಿಯಮಗಳೊಂದಿಗೆ ಸಂಬಂಧಿತ ಮಾರ್ಗಸೂಚಿಗಳನ್ನು ತಿಳಿಸದ ಹೊರತು ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಹಾಗಾಗಿ ಆರು ವಾರಗಳ ಒಳಗೆ ಎಲ್ಲಾ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗಳು ಸ್ಥಗಿತಗೊಳ್ಳುವಂತೆ ನೋಡಿಕೊಳ್ಳಲು ನ್ಯಾಯಾಲಯ ರಾಜ್ಯ ಸರ್ಕಾರ ಮತ್ತು ಸಾರಿಗೆ ಇಲಾಖೆಗೆ ನಿರ್ದೇಶನ ನೀಡಿತ್ತು. ಅದರಂತೆ ಇತ್ತೀಚೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೈಕೋರ್ಟ್ ಆದೇಶದಂತೆ ರಾಜ್ಯದಲ್ಲಿ ರ್ಯಾಪಿಡೋ, ಉಬರ್ ಬೈಕ್ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸುವಂತೆ ಆದೇಶ ಹೊರಡಿಸಿದ್ದರು. ಈ ಕುರಿತಾಗಿ ಸಾರಿಗೆ ಇಲಾಖೆಯ ಕಾರ್ಯದರ್ಶಿ ಮತ್ತು ಸಾರಿಗೆ ಇಲಾಖೆಯ ಆಯುಕ್ತರಿಗೆ ಪತ್ರ ಕೂಡ ಬರೆದಿದ್ದರು.
