ಬೆಂಗಳೂರು:
ರಾಜ್ಯದಲ್ಲಿ ಓಲಾ , ಉಬರ್ , ರ್ಯಾಪಿಡೊ ಬೈಕ್ ಟ್ಯಾಕ್ಸಿ ಸೇವೆಗಳು ಇಂದಿನಿಂದ ಸ್ಥಗಿತಗೊಳ್ಳಲಿವೆ. ಬೈಕ್ ಟ್ಯಾಕ್ಸಿ ಸೇವೆ ಮುಂದುವರಿಕೆಗೆ ಪೂರಕವಾದ ಮಧ್ಯಂತರ ಪರಿಹಾರ ನೀಡಲು ಹೈಕೋರ್ಟ್ ನ್ಯಾಯಪೀಠ ನಿರಾಕರಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದ ಬೈಕ್ ಟ್ಯಾಕ್ಸಿ ಸೇವೆ ಬಂದ್ ಆಗಲಿದೆ. ಈ ಕುರಿತು ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ಜೂನ್ 24ಕ್ಕೆ ನಿಗದಿ ಪಡಿಸಿದೆ.
ರಾಜ್ಯದಲ್ಲಿ ಸೂಕ್ತ ನಿಯಮಗಳ ರಚನೆಯಾಗದ ಹಿನ್ನೆಲೆಯಲ್ಲಿ ಬೈಕ್ ಟ್ಯಾಕ್ಸಿಗಳ ಸೇವೆ ಸ್ಥಗಿತಗೊಳಿಸಲು ನಿರ್ದೇಶನ ನೀಡಿರುವ ಏಕ ಸದಸ್ಯಪೀಠ ಆದೇಶ ಪ್ರಶ್ನಿಸಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಎಎನ್ಐ ಟಕ್ನಾಲಜಿ ಪ್ರೈವೇಟ್ ಲಿಮಿಟೆಡ್ (ಓಲಾ), ವರ್ಕುಟಿ ಮಹೇಂದ್ರ ರೆಡ್ಡಿ (ಬೈಕ್ ಟ್ಯಾಕ್ಸಿಗಳ ಮಾಲೀಕರು) ಮತ್ತಿತರರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿ.ಎಂ.ಜೋಶಿ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿದೆ.
ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದಿಸಿ, ನಾಲ್ಕು ಚಕ್ರದ ವಾಹನಗಳು ಮತ್ತು ಮೂರು ಚಕ್ರದ ವಾಹನಗಳು ಅನುಮತಿ ಪಡೆದು ತೆರಿಗೆ ಪಾವತಿಸಿ ಬಾಡಿಗೆ ವಾಹನಗಳಾಗಿ ಕಾರ್ಯ ನಿರ್ವಹಿಸುತ್ತಿವೆ. ದ್ವಿಚಕ್ರವಾಹನಗಳು ಬಾಡಿಗೆ ವಾಹನಗಳಾಗಿ ಕಾರ್ಯಾಚರಿಸಲು ಸಾಧ್ಯವಿಲ್ಲ. ದ್ವಿಚಕ್ರ ವಾಹನಗಳು ಬಾಡಿಗೆ ವಾಹನಗಳಾಗಿ ಕಾರ್ಯಾಚರಣೆ ನಡೆಸಲು 8 ರಾಜ್ಯಗಳಲ್ಲಿ ಮಾತ್ರ ಅನುಮತಿ ನೀಡಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ವಾದ ಆಲಿಸಿದ ನ್ಯಾಯಪೀಠ, ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ಮುಂದಿನ ವಿಚಾರಣೆಯನ್ನು ಜೂನ್ 24ಕ್ಕೆ ಮುಂದೂಡಿತು.
ಮೋಟಾರು ವಾಹನ ಕಾಯ್ದೆಯ ನಿಯಮಗಳ ಪ್ರಕಾರವಾಗಿ ಹಳದಿ ನೋಂದಣಿ ಫಲಕ ಹೊಂದಿರುವ ಸಾರಿಗೆ ವಾಹನಗಳಂತೆ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಬೇಕು ಎಂಬುದಾಗಿ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ರೊಪ್ಪೆನ್ ಟ್ರಾನ್ಸ್ಪೊರ್ಟೇಶನ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಮತ್ತು ಎಎನ್ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದವು. ಈ ಅರ್ಜಿಗಳ ವಿಚಾರಣೆ ನಡೆಸಿದ್ದ ನ್ಯಾಯಪೀಠ, ಬೈಕ್ ಸೇವೆಯನ್ನು ಸ್ಥಗಿತಗೊಳಿಸಲು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಅಗ್ರಿಗೇಟರ್ ಸಂಸ್ಥೆಗಳು ಹೈಕೋರ್ಟ್ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.