ಮತಗಳ್ಳತನ ಬಗ್ಗೆ ಕಾನೂನು ಇಲಾಖೆಯಿಂದ ಪರಿಶೀಲಿಸಿ, ಕ್ರಮ: ಸಿಎಂ ಸಿದ್ದರಾಮಯ್ಯ

ಮೈಸೂರು

    ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ (Voter Fraud) ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ ನಡೆಸಲಿದೆ. ಅವರು ನೀಡುವ ಶಿಫಾರಸಿನ ಅನ್ವಯ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮತಗಳ್ಳತನದ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ರಾಹುಲ್ ಗಾಂಧಿ ಸೂಚನೆ ನೀಡಿದ್ದು, ಬಿಬಿಎಂಪಿ ಚುನಾವಣೆ ಮುನ್ನ ಪಕ್ಷ ಇದನ್ನು ಪರಿಶೀಲಿಸುತ್ತದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಮೈಸೂರಿನ ವಿಮಾನ ನಿಲ್ದಾಣದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.

   ಪರಿಶೀಲನಾ ಕಾರ್ಯವನ್ನು ತ್ವರಿತವಾಗಿ ನಡೆಸಿ ವರದಿ ನೀಡಲು ಅಡ್ವೊಕೇಟ್ ಜನರಲ್ ಅವರಿಗೆ ಸೂಚನೆ ನೀಡಲಾಗುವುದು. ಮತದಾರರ ಪಟ್ಟಿಯ ಸಂಬಂಧ ಸಂಪೂರ್ಣ ಅಧಿಕಾರವಿರುವುದು ಚುನಾವಣಾ ಆಯೋಗಕ್ಕೆ ಎಂದರು. 

   ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವರು ಮುಖ್ಯಮಂತ್ರಿಗಳು ಬಾದಾಮಿ ಕ್ಷೇತ್ರದಲ್ಲಿ ಮೂರು ಸಾವಿರ ಮತಗಳನ್ನು ಖರೀದಿ ಮಾಡಿ ಗೆದ್ದದ್ದು ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಅವರು, ಇಬ್ರಾಹಿಂ ನಮ್ಮ ಪಕ್ಷದವರಲ್ಲ. ನಾನು ನಾಮನಿರ್ದೇಶನ ಸಲ್ಲಿಸಲು ಹಾಗೂ ಪ್ರಚಾರಕ್ಕಾಗಿ ಬಾದಾಮಿಗೆ ಹೋಗಿದ್ದೆ. ಅದು ಬಿಟ್ಟರೆ ನನಗೆ ಏನೂ ಗೊತ್ತಿಲ್ಲ. ನಾನು 1600 ಮತಗಳಿಂದ ಗೆದ್ದಿದ್ದು. ಈ ವಿಚಾರ ನನಗೆ ಹೊಸದು, ಈ ಬಗ್ಗೆ ನನಗೆ ಗೊತ್ತಿಲ್ಲ ಎಂದರು. 

   ಬಿಜೆಪಿಯವರು ಕಾಂಗ್ರೆಸ್ ಈಗ ಮತಗಳ ಸ್ಥಾನದ ಬಗ್ಗೆ ಪ್ರಸ್ತಾಪಿಸಿರುವುದು ಏಕೆ ಎಂದು ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಬಿಜೆಪಿಯವರು ತಪ್ಪು ಮಾಡಿ ಸುಳ್ಳು ಹೇಳುತ್ತಿದ್ದಾರೆ. ನಾವು ಕಳೆದ ಲೋಕಸಭಾ ಚುನಾವಣೆಯಲ್ಲಿ ಹದಿನಾರು ಸ್ಥಾನಗಳನ್ನು ಗೆಲ್ಲುವು ಎಂದು ಆಂತರಿಕ ಸಮೀಕ್ಷೆ ತಿಳಿಸಿತ್ತು. ಆದರೆ ನಾವು ಗೆದ್ದದ್ದು 9 ಸ್ಥಾನಗಳನ್ನು ಮಾತ್ರ. ರಾಹುಲ್ ಗಾಂಧಿ ಅವರು ಸಾಕ್ಷಿ ಸಮೇತ ವಿಚಾರಗಳನ್ನು ತಿಳಿಸಿದ್ದಾರೆ. ಈ ಎಲ್ಲವೂ ರಾಜ್ಯ ಮತ್ತು ಕೇಂದ್ರ ಚುನಾವಣಾ ಆಯೋಗದ ಬಳಿ ಲಭ್ಯವಿದೆ.ದಾಖಲಾತಿಗಳ ಬಗ್ಗೆಯೇ ಪ್ರಸ್ತಾಪ ಮಾಡಿದ್ದಾರೆ. ಒಂದೇ ಸಣ್ಣ ಕೊಠಡಿಯಲ್ಲಿ 80 ಜನ ವಾಸ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದರು. ನಾವು ಈ ಬಗ್ಗೆ ಅಧ್ಯಯನ ಮಾಡಿದ ನಂತರ ವಿಷಯ ತಿಳಿದಿದೆ ಎಂದರು. 

   ಚುನಾವಣಾ ಆಯೋಗದ ಬಗ್ಗೆ ಜನರಲ್ಲಿ ವಿಶ್ವಾಸವನ್ನು ಮೂಡಿಸಲು ಮತಗಳ್ಳತನದ ಬಗ್ಗೆ ನ್ಯಾಯಾಂಗ ಸ್ವಯಂ ಪ್ರೇರಿತವಾಗಿ ಮಧ್ಯಪ್ರವೇಶ ಮಾಡಬೇಕೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಚುನಾವಣೆಗಳಲ್ಲಿ, ಇವಿಎಂಗಳಲ್ಲಿ, ಮತದಾರರ ಪಟ್ಟಿಗಳಲ್ಲಿ, ಕೈವಾಡ ನಡೆಯುತ್ತಿದೆ ಎಂದು ನಾವು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇವೆ. ನನ್ನ ಪ್ರಕಾರ ರಾಹುಲ್ ಗಾಂಧಿಯವರು ಮಾಧ್ಯಮಗಳಲ್ಲಿ ಪ್ರದರ್ಶನ ಮಾಡಿದ್ದು ನಿಜ ಎಂದರು. 

   ಉಪ ಚುನಾವಣೆಯಲ್ಲಿ ಸತ್ತವರೆಲ್ಲಾ ಮತ ಹಾಕಿ ಗೆಲ್ಲಿಸಿದ್ದಾರೆ ಎಂದು ಹಿಂದೆ ಮುಖ್ಯಮಂತ್ರಿಗಳು ಮಾಡಿದ್ದ ಭಾಷಣ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಒಂದು ವೇಳೆ ಸತ್ತವರು ಮತ ಹಾಕಿದ್ದರೆ ಅದಕ್ಕೆ ಯಾರು ಜವಾಬ್ದಾರರು? ಚುನಾವಣಾ ಆಯೋಗ ಇದಕ್ಕೆ ನೇರ ಹೊಣೆ ಎಂದರು. 

  ಪೀಟರ್ ವೀಕ್ಷಕರಾಗಿದ್ದರು ಅದಕ್ಕೆ ಸಿದ್ದರಾಮಯ್ಯ ಗೆದ್ದರು ಎಂದು ಬಿಜೆಪಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಅವರಿಲ್ಲದೇ ಹೋಗಿದ್ದರೆ ನನ್ನನ್ನು ಸೋಲಿಸುತ್ತಿದ್ದರು ಎಂದರು.

Recent Articles

spot_img

Related Stories

Share via
Copy link