ಶಿವಮೊಗ್ಗ:
ಬಿಜೆಪಿಯಲ್ಲಿ ಶಿಕಾರಿಪುರದ ಸೋಲಿಲ್ಲದ ಸರದಾರ ಎಂದೇ ಖ್ಯಾತರಾದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ 80ನೇ ವರ್ಷದ ಹುಟ್ಟುಹಬ್ಬ ಇಂದು. ಅವರ ಹುಟ್ಟುಹಬ್ಬದ ದಿನದಂದೆ ಏರ್ ಪೋರ್ಟ್ ಇಂದು ಲೋಕಾರ್ಪಣೆಗೊಳ್ಳುತ್ತಿದೆ.
ಸಂದರ್ಭಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಇಂದು ಬೆಳಗ್ಗೆ 11.30ಕ್ಕೆ ಮೋದಿ ಅವರು ಶಿವಮೊಗ್ಗ ನೂತನ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಶಿವಮೊಗ್ಗ ಟರ್ಮಿನಲ್ನ ವೀಕ್ಷಣೆ ಮಾಡಲಿದ್ದಾರೆ. ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಿಎಸ್ವೈ ಮನೆಯಿಂದ ನೇರವಾಗಿ ಶಿವಮೊಗ್ಗ ತಿಲಕ ನಗರದಲ್ಲಿರುವ ರಾಘವೇಂದ್ರ ಮಠಕ್ಕೆ ಭೇಟಿ ನೀಡಲಿದ್ದು ರಾಘವೇಂದ್ರ ಸ್ವಾಮಿಗೆ ಕುಟುಂಬ ಸಮೇತ ಪೂಜೆ ಸಲ್ಲಿಸಲಿದ್ದಾರೆ ಎಂದು ನಿನ್ನೆ ಸಂಸದ ಬಿವೈ ರಾಘವೇಂದ್ರ ತಿಳಿಸಿದ್ದಾರೆ.
ಶಿವಮೊಗ್ಗ ತಾಲೂಕಿನ ಸೋಗಾನೆ ಗ್ರಾಮದ ಬಳಿ ನೂತನ ಏರ್ಪೋರ್ಟ್ ನಿರ್ಮಾಣಗೊಂಡಿದೆ. 775 ಎಕರೆ ಭೂಮಿಯಲ್ಲಿ 384 ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣ ನಿರ್ಮಾಣಗೊಂಡಿದೆ. 2008ರಲ್ಲಿ ಹೊಸ ಏರ್ಪೋರ್ಟ್ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಈ ವರ್ಷ ಕಾಮಗಾರಿ ಪೂರ್ಣಗೊಂಡಿದೆ.
ಶಿವಮೊಗ್ಗ ನಗರದಿಂದ 15 ಕಿ.ಮೀ ದೂರದಲ್ಲಿರುವ ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಿರುವ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆ ಮಾಡಲಿರುವ ಹಿನ್ನೆಲೆಯಲ್ಲಿ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ, ವಿಮಾನಯಾನ ನಕ್ಷೆಯಲ್ಲಿ ಸ್ಥಾನ ಪಡೆಯಲು ಸಜ್ಜಾಗಿದೆ. ಮಧ್ಯಾಹ್ನ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಸುಮಾರು 2 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ.
ಶಿವಮೊಗ್ಗ-ಶಿಕಾರಿಪುರ ರೈಲು ಮಾರ್ಗ, ಕೋಚಿಂಗ್ ಡಿಪೋ, ಏಳು ಹೆದ್ದಾರಿ ಕಾಮಗಾರಿಗಳು, 1,204 ಜಲ ಜೀವನ್ ಮಿಷನ್ ಕಾಮಗಾರಿಗಳು ಮತ್ತು ಎಂಟು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿಗೆ ಮೋದಿ ಅವರು ಶಂಕುಸ್ಥಾಪನೆ ಮಾಡಲಿದ್ದು, ಇದು ಒಟ್ಟು 3,337.40 ಕೋಟಿ ರೂಪಾಯಿ ಯೋಜನೆಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2023/02/Untitled-1-43.jpg)