ಅಡಿಕೆ ಮಾದರಿ ಶೇಂಗಾ ಬೆಳೆ ನಷ್ಟಕ್ಕೂ ವಿಶೇಷ ಪ್ಯಾಕೇಜ್ ಕೊಡಿ

ತುಮಕೂರು:


ಗೃಹ ಸಚಿವರಿಗೆ ಶಾಸಕರ ಒತ್ತಾಯ: ಪ್ರಸ್ತಾವನೆ ಸಲ್ಲಿಸಲು ಸಚಿವರ ಸೂಚನೆ

    ಜಿಲ್ಲೆಯಲ್ಲಿ ಶೇಂಗಾ ಬೆಳೆ ನಷ್ಟ ಹೊಂದಿದ ರೈತರಿಗೆ ಅಡಿಕೆ ಮಾದರಿಯಲ್ಲಿ ವಿಶೇಷ ಪ್ಯಾಕೇಜ್‍ನಡಿ ಪರಿಹಾರ ಒದಗಿಸಬೇಕೆಂದು ಶಾಸಕರು ಜಿಪಂ ಕೆಡಿಪಿ ಸಭೆಯಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ಒತ್ತಾಯಿಸಿದ ಹಿನ್ನೆಲೆಯಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಅರಗ ಜ್ಞಾನೇಂದ್ರ ಅವರು ಕೃಷಿ ಜಂಟಿ ನಿರ್ದೇಶಕಿ ರಾಜ ಸುಲೋಚನಾ ಅವರಿಗೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕರಾದ ಸಿ.ಎಂ.ರಾಜೇಶ್‍ಗೌಡ, ಕೆ.ಎ.ತಿಪ್ಪೇಸ್ವಾಮಿ, ಚಿದಾನಂದ ಎಂ.ಗೌಡ ಅವರುಗಳು ಜಿಲ್ಲೆಯಲ್ಲಿ ಶೇಂಗಾ ಸೇರಿದಂತೆ ಎಣ್ಣೆ ಕಾಳು ಬೆಳೆಯುವ ಶಿರಾ, ಪಾವಗಡ, ಕೊರಟಗೆರೆ, ಮಧುಗಿರಿ ತಾಲ್ಲೂಕುಗಳಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ರೈತ ಬಿತ್ತಿದ ಬೆಳೆ ಕೈಗೆ ಬರದೆ ಹೋಗಿದೆ.

ಈ ನಿಟ್ಟಿನಲ್ಲಿ ಶೇಂಗಾ ಬೆಳೆಗೆ ಸಂಬಂಧಿಸಿದಂತೆ ಹಿಂದಿನ 5 ವರ್ಷಗಳ ಅವಧಿಯ ಸಮಗ್ರ ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಿದಲ್ಲಿ ವಿಶೇಷ ಪ್ಯಾಕೇಜ್‍ನಡಿ ಪರಿಹಾರ ಕಲ್ಪಿಸುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.

ಕೃಷಿ ಜಂಟಿ ನಿರ್ದೇಶಕಿ ರಾಜ ಸುಲೋಚನಾ ಸಭೆಗೆ ಮಾಹಿತಿ ನೀಡಿ, ಜಿಲ್ಲೆಯಲ್ಲಿ ಸೆಪ್ಟೆಂಬರ್ ಮಾಹೆಯಲ್ಲಿ ನಿರೀಕ್ಷಿತ ಮಳೆ ಬಾರದ ಕಾರಣ ಶೇಂಗಾ ಬೆಳೆ ನಷ್ಟವಾಗಿದೆ ಎಂದು ಸಚಿವರ ಗಮನಕ್ಕೆ ತಂದರಲ್ಲದೆÀ ಮಂತ್ರಿ ಕಿಸಾನ್ ಯೋಜನೆಯಡಿ ಜನವರಿ ಅಂತ್ಯಕ್ಕೆ 301694 ರೈತರಿಗೆ 11841.58ಲಕ್ಷ ರೂ.ಗಳ ಮೊತ್ತವನ್ನು ರೈತರ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ನಂತರ ಮಾತನಾಡಿದ ಸಚಿವರು ಜಿಲ್ಲೆಯ ರೈತರ ಬದುಕು ಹಸನಾಗಬೇಕಾದರೆ ಕೃಷಿ, ತೋಟಗಾರಿಕೆ, ಪಶುಪಾಲನಾ ಇಲಾಖಾಧಿಕಾರಿಗಳು ರೈತರ ಮನೆ ಬಾಗಿಲಿಗೆ ಹೋಗಿ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವ ಕೆಲಸ ನಿರ್ವಹಿಸಬೇಕೆಂದು ತಿಳಿಸಿದರು.

ಹೆಚ್ಚುವರಿ ರಾಗಿ ಖರೀದಿಸಿ:

ಶಾಸಕ ಮಸಾಲೆ ಜಯರಾಂ ಮಾತನಾಡಿ ಸರ್ಕಾರವು ಬೆಂಬಲ ಬೆಲೆ ಯೋಜನೆಯಡಿ ಒಬ್ಬ ರೈತನಿಂದ ಗರಿಷ್ಠ 20 ಕ್ವಿಂಟಾಲ್ ರಾಗಿಯನ್ನು ಖರೀದಿಸುತ್ತಿದೆ.ಆದರೆ ರೈತರು ಹೆಚ್ಚುವರಿ ರಾಗಿ ತಂದು ಖರೀದಿ ಕೇಂದ್ರದ ಬಳಿ ಕಾಯುವಂತಾಗಿದೆ.

ಮೊದಲು ರೈತರ ರಾಗಿ ಖರೀದಿಸಿ ಎಂದು ಆಗ್ರಹಿಸಿದರು. ಪ್ರತಿಕ್ರಿಯಿಸಿದ ಸಚಿವರು ರಾಗಿಯನ್ನು ಸಾರ್ವಜನಿಕ ಪಡಿತರ ವಿತರಣಾ ಪದ್ಧತಿಯಡಿ ವಿತರಿಸಲು ಸಾಕಾಗುವಷ್ಟು ದಾಸ್ತಾನು ಮಾಡಲಾಗಿದ್ದು, 20 ಕ್ವಿಂಟಾಲ್‍ಗಿಂತ ಅಧಿಕ ರಾಗಿಯನ್ನು ಖರೀದಿಸಲು ಕೇಂದ್ರ ಸರ್ಕಾರದ ಅನುಮತಿ ಅಗತ್ಯವಿದೆ. ಈ ಕುರಿತು ಮುಂದಿನ ದಿನಗಳಲ್ಲಿ ಪರಿಶೀಲಿಸಲಾಗುವುದು ಎಂದು ತಿಳಿಸಿದರು.

ಕೃಷಿ ಇಲಾಖೆಯಲ್ಲಿ ರೈತರಿಗೆ ನೀಡಬೇಕಾದ ಸ್ಪ್ಲಿಂಕರ್ ಸೇರಿದಂತೆ ವಿವಿಧ ಉಪಕರಣಗಳನ್ನು ನೀಡಲು ವಿಳಂಬವಾಗಿದ್ದು, ಅರ್ಹ ರೈತರಿಗೆ ಮಾರ್ಚ್ 15ರೊಳಗಾಗಿ ಈ ಸೌಲಭ್ಯಗಳನ್ನು ಒದಗಿಸಬೇಕು ಎಂದರಲ್ಲದೆ, ರೈತ ಆತ್ಮಹತ್ಯೆ ಪ್ರಕರಣಗಳಲ್ಲಿ ಮೃತರ ಕುಟುಂಬಕ್ಕೆ ಪರಿಹಾರವನ್ನು ಕೂಡಲೇ ಒದಗಿಸಬೇಕು. ಪರಿಹಾರ ವಿತರಣೆಯಲ್ಲಿ ಯಾವುದೇ ಸಬೂಬು ಹೇಳುವಂತಿಲ್ಲ ಎಂದು ಅಧಿಕಾರಿಗಳಿಗೆ ಸಚಿವರು ನಿರ್ದೇಶಿಸಿದರು.

ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರಘು ಮಾತನಾಡಿ, ಅಡಿಕೆ ಬೆಳೆಗೆ ಹನಿ ನೀರಾವರಿ ಅಳವಡಿಸಲು ಸಹಾಯಧನ ಒದಗಿಸುವ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು.

ಈ ಹಿಂದೆ ಗೋರಖ್ ಸಿಂಗ್ ಆಯೋಗವು ತುಮಕೂರಿನಲ್ಲಿ ಅಡಿಕೆ ಬೆಳೆಯ ಉತ್ತೇಜನಕ್ಕೆ ಇಲಾಖೆಯಿಂದ ಸಹಾಯಧನ ಸೌಲಭ್ಯ ಕಲ್ಪಿಸದಂತೆ ನಿರ್ಬಂಧವಿದ್ದುದರಿಂದ ಸಹಾಯಧನ ಸೌಲಭ್ಯವನ್ನು ಜಿಲ್ಲೆಯ ರೈತರಿಗೆ ಕಲ್ಪಿಸಲು ಸಾಧ್ಯವಾಗಿಲ್ಲ ಎಂದು ಸಭೆಯ ಗಮನಕ್ಕೆ ತಂದರು.

ಪ್ರತಿ ತಾಲ್ಲೂಕು ಆಸ್ಪತ್ರೆಗಳ ಸಮೀಪ ಪ್ರಧಾನ ಮಂತ್ರಿ ಜನೌಷಧ ಕೇಂದ್ರಗಳನ್ನು ತೆರೆದು ಅಗ್ಗದ ದರದಲ್ಲಿ ಔಷಧಗಳು ಸಿಗುವಂತಾಗಬೇಕು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ: ವೀರಭದ್ರಯ್ಯ, ಡಿಎಚ್‍ಓ ಅವರಿಗೆ ಸಚಿವರಿಗೆ ಬಿ.ಸಿ.ನಾಗೇಶ್, ಆರಗಜ್ಞಾನೇಂದ್ರ ಸೂಚಿಸಿದರು.

ಜಿಲ್ಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಮೃತಪಟ್ಟ ವಾರಸುದಾರರಿಗೆ ಅಪರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಈವರೆಗೆ ಪರಿಹಾರ ಕೋರಿ 1047 ಅರ್ಜಿಗಳು ಸ್ವೀಕೃತಗೊಂಡಿದ್ದು, 857 ಮೃತರ ವಾರಸುದಾರರಿಗೆ ಪರಿಹಾರ ವಿತರಿಸಲಾಗಿದೆ.

ಉಳಿದ 190 ಪ್ರಕರಣಗಳಿಗೆ ಸಮರ್ಪಕ ಮಾಹಿತಿ ನೀಡದ ಕಾರಣ ಕಚೇರಿ ಹಂತದಲ್ಲಿ ಬಾಕಿ ಇವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.

ವಿದ್ಯುತ್ ಸಂಪರ್ಕ ಕೊಡದ ಬೆಸ್ಕಾಂ ಇಲಾಖೆಗೆ ತರಾಟೆ
ಸಭೆಯಲ್ಲಿ ಗುಬ್ಬಿ ತಾಲ್ಲೂಕು ಗದ್ದೆಹಳ್ಳಿ ಗ್ರಾಮದ ಮನೆಗಳಿಗೆ ಬೆಳಕು ಯೋಜನೆಯಡಿ ವಿದ್ಯುತ್ ಸಂಪರ್ಕಕ್ಕೆ ಸಂಬಂಧಿಸಿದಂತೆ ಬೆಸ್ಕಾಂನ ಅಧೀಕ್ಷಕ ಇಂಜಿನಿಯರ್ ಅವರನ್ನು ಸಚಿವ ಆರಗಜ್ಞಾನೇಂದ್ರ ತರಾಟೆಗೆ ತೆಗೆದುಕೊಂಡಾಗ ಲೋಕೇಶ್ ಅವರು ಉತ್ತರಿಸುತ್ತಾ,

ಸ್ಥಳೀಯ ಗ್ರಾಮ ಪಂಚಾಯತಿ ಸಮನ್ವಯದೊಂದಿಗೆ ಫಲಾನುಭವಿಗಳನ್ನು ಗುರುತಿಸಿ ಮಾರ್ಚ್ ಮಾಹೆಯ ಅಂತ್ಯದೊಳಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು.

ಕಳೆದ 5 ತಿಂಗಳ ಅವಧಿಯಲ್ಲಿ ಈಗಾಗಲೇ 4631 ಮನೆಗಳನ್ನು ಗುರುತಿಸಲಾಗಿದೆ. ಈ ಪೈಕಿ 2807 ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದು, 1824 ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾರ್ಯ ಬಾಕಿ ಇರುತ್ತವೆ ಎಂದು ಮಾಹಿತಿ ನೀಡಿದರು.

ತುರುವೇಕೆರೆ-ನೊಣವಿನಕೆರೆಗೆ ಹೇಮೆ ನಾಲೆ ಕಾಲುವೆ ದುರಸ್ಥಿಗೊಳಿಸಿದೆ ರೈತರಿಗೆ ಭತ್ತದ ಬೆಳೆಯಲು ಅವಕಾಶ ವಂಚಿತರಾಗಿಸಿದಕ್ಕೆ ಹೇಮಾವತಿ ನಾಲಾ ವಲಯದ ಅಧಿಕಾರಿಗಳ ವಿರುದ್ಧ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹರಿಹಾಯ್ದರು.

ನಂತರ ಮಾತನಾಡಿದ ಸಚಿವರು, ಮಾರ್ಚ್ ತಿಂಗಳ ಅಂತ್ಯದೊಳಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹಾತ್ವಾಕಾಂಕ್ಷಿ “ಬೆಳಕು” ಯೋಜನೆಯಡಿ ಎಲ್ಲಾ ವಸತಿಗಳಿಗೆ ವಿದ್ಯುತ್ ಸಂಪರ್ಕ ದೊರಕಿಸಿಕೊಡಬೇಕು. ಜಿಲ್ಲೆಯಲ್ಲಿ ಒಂದು ಮನೆಯೂ ವಿದ್ಯುತ್ ಸಂಪರ್ಕ ರಹಿತವಾಗಿರಬಾರದು.

ಬೆಳಕು ಯೋಜನೆಯಡಿ ವಿದ್ಯುತ್ ಸಂಪರ್ಕ ಒದಗಿಸದ ಮನೆಗಳ ಮಾಹಿತಿಯನ್ನು ಆಯಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಬೆಸ್ಕಾಂ ಇಲಾಖೆಗೆ ನೀಡಬೇಕು. ತಪ್ಪಿದಲ್ಲಿ ಸಂಬಂಧಿಸಿದ ಪಿಡಿಓಗಳನ್ನು ಅಮಾನತ್ತುಗೊಳಿಸಲಾಗುವುದು ಎಂದು ತಿಳಿಸಿದರು.

ಸಾಮೂಹಿಕ ಕೊಳವೆ ಬಾವಿಗೆ ಸಂಬಂಧಿಸಿದಂತೆ ಗಂಗಾ ಕಲ್ಯಾಣ ಯೋಜನೆಯಡಿ ಬಾಕಿ ಇರುವ ವಿದ್ಯುತ್ ಸಂಪರ್ಕ ನೀಡುವ ಕಾರ್ಯವನ್ನು ಮಾರ್ಚ್ ಅಂತ್ಯದೊಳಗೆ ಮುಗಿಸಬೇಕು.

ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಬಿಡುಗಡೆಯಾದ ಅನುದಾನ ರದ್ದಾಗಿ ಸರ್ಕಾರಕ್ಕೆ ವಾಪಸ್ಸಾಗದಂತೆ ಅಪೂರ್ಣ ಕಾಮಗಾರಿಗಳನ್ನು ಪೂರ್ಣಗೊಳಿಸಿ ನಿಗಧಿತ ಅವಧಿಯೊಳಗೆ ಖಜಾನೆಗೆ ಬಿಲ್ಲುಗಳನ್ನು ಸಲ್ಲಿಸಬೇಕು. ಅನುದಾನ ಸರ್ಕಾರಕ್ಕೆ ವಾಪಸ್ಸಾದರೆ ಅಂತಹ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರುಚಿಸಿದರು.

ಸಮಾಜ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ನಿಲಯ/ವಿದ್ಯಾರ್ಥಿ ನಿಲಯಗಳ ಕಟ್ಟಡಗಳನ್ನು ಪೂರ್ಣಗೊಳಿಸುವಂತೆ ನಿರ್ಮಿತಿ ಕೇಂದ್ರದ ಅಧಿಕಾರಿ ರಾಜಶೇಖರ್ ಅವರಿಗೆ ಸೂಚನೆ ನೀಡಿದರು.

ಸಭೆಯಲ್ಲಿ, ಸಂಸದ ಜಿ.ಎಸ್. ಬಸವರಾಜು, ಜಿಲ್ಲೆಯ ಶಾಸಕರಾದ ಮಸಾಲೆ ಜಯರಾಂ, ವೀರಭದ್ರಯ್ಯ, ಜಿ.ಬಿ.ಜ್ಯೋತಿಗಣೇಶ್, ತಿಪ್ಪೇಸ್ವಾಮಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತಿ ಆಡಳಿತಾಧಿಕಾರಿ ರಾಕೇಶ್ ಸಿಂಗ್,

ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಜಿಲ್ಲಾ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ: ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್ ವಾಡ್ ಹಾಗೂ ಜಿಲ್ಲೆಯ ಇನ್ನಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಆಸ್ಪತ್ರೆಗಳಲ್ಲಿ ದಂಧೆಯ ಕೇಂದ್ರಗಳಾಗುತ್ತಿವೆ ಅಸಮಾಧಾನ

ಆರೋಗ್ಯ ಇಲಾಖೆಯಡಿ ಬರುವ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಔಷಧಿ ಖರೀದಿ, ವಿತರಣೆಯಲ್ಲಿ ಪಾರದರ್ಶಕತೆ ಇಲ್ಲದಿರುವುದು, ತುರ್ತು ಸಂದರ್ಭದಲ್ಲಿ ಬಾಗಿಲು ತೆರೆಯದೇ ರೋಗಿಗಳು ತೊಂದರೆ ಅನುಭವಿಸುತ್ತಿದ್ದು ಆಸ್ಪತ್ರೆಗಳು ದಂಧೆಯ ಕೇಂದ್ರಗಳಾಗುತ್ತಿವೆ ಎಂದು ನೇರ ಗೃಹ ಸಚಿವರೇ ಅಸಮಾಧಾನ ವ್ಯಕ್ತಪಡಿಸಿದ್ದು,

ಶಿಶು-ತಾಯಿ ಮರಣ ಪ್ರಮಾಣ ಜಿಲ್ಲೆಯಲ್ಲಿ ಹೆಚ್ಚಾಗಿ ಕಂಡುಬಂದಿದ್ದು, ಸಾವಿನ ಪ್ರಮಾಣವನ್ನು ತಗ್ಗಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ನಾಗೇಂದ್ರಪ್ಪ ಅವರಿಗೆ ಸೂಚಿಸಿದರು. ಜಿಲ್ಲಾಸ್ಪತ್ರೆ ಅವ್ಯವಸ್ಥೆ ಬಗ್ಗೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಪ್ರಸ್ತಾಪಿಸಿ ಸರಿಪಡಿಸಲು ಆಗ್ರಹಿಸಿದರು.

ಈ ವೇಳೆ ಆಸ್ಪತ್ರೆ ಹೊರಗುತ್ತಿಗೆ ಹಗರಣದ ಬಗ್ಗೆ ಪ್ರಸ್ತಾಪಿಸಿದ ಸಚಿವರು ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರಿಗೆ ಕಾನೂನು ಬದ್ಧ ಸೌಲಭ್ಯ ವಂಚಿಸುವ ಗುತ್ತಿಗೆ ಏಜೆನ್ಸಿಯವರನ್ನು ಪ್ರಶ್ನಿಸಿದರೆ ಡಿಎಚ್‍ಓ ಅವರನ್ನೇ ಲೋಕಾಯುಕ್ತ ಟ್ರ್ಯಾಪ್ ಮಾಡಿಸಿ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸುವ ಮಟ್ಟಿಗೆ ಆರೋಗ್ಯ ಇಲಾಖೆಯಲ್ಲಿ ದುಷ್ಟರ ಲಾಭಿ ಇದೆ ಎಂದು ಗೃಹ ಸಚಿವರೇ ಸಭೆಗೆ ಬಹಿರಂಗಪಡಿಸಿದರು.

          ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap