ಮೈಸೂರು:
ಮೈಸೂರಿನ ಹೊರವಲಯದ ಮಂಡಕಳ್ಳಿಯಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕಟ್ಟಡ ಅಕಾಡೆಮಿಕ್ ಭವನದಲ್ಲಿ ಸ್ಥಾಪಿಸಿರುವ ನೂತನ ಕೋವಿಡ್ ಕೇರ್ ಸೆಂಟರ್ ಗೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ಅವರು ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಸುಮಾರು 55 ರೂಂ ಇದ್ದು, 600 ಬೆಡ್ ವರೆಗೆ ವ್ಯವಸ್ಥೆ ಮಾಡಬಹುದು. ಇಲ್ಲಿ ಎಲ್ಲಾ ಮೂಲ ಸೌಕರ್ಯ ಒದಗಿಸಲಾಗಿದೆ. ಒಂದೆರೆಡು ದಿನದಲ್ಲಿ ಸಂಪೂರ್ಣ ಸಿದ್ಧವಾಗಲಿದೆ. ಪ್ರತಿ ಕೊಠಡಿಗೆ ಟಿ.ವಿ. ಕೇಬಲ್ ಸಂಪರ್ಕ, ಇಂಟರ್ನೆಟ್ ಸಂಪರ್ಕ, ವೈಫೈ ವ್ಯವಸ್ಥೆ ಇದೆ ಎಂದರು.
ಸ್ನಾನದ ಕೊಠಡಿ, ಶೌಚಾಲಯ, ಬಟ್ಟೆ ಸ್ವಚ್ಚಗೊಳಿಸಲು ಬೇಕಾದ ವ್ಯವಸ್ಥೆ ಇದೆ. ಸ್ನಾನಕ್ಕೆ ಬಿಸಿ ನೀರಿನ ವ್ಯವಸ್ಥೆ ಇದೆ. ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಪ್ರತ್ಯೇಕ ವಿಭಾಗ, ಆಡಳಿತ ವಿಭಾಗವನ್ನು ಈ ಕೇಂದ್ರದಲ್ಲಿ ಪ್ರತ್ಯೇಕವಾಗಿ ವ್ಯವಸ್ಥೆ ಮಾಡಲಾಗಿದೆ ಎಂದರು.
ಮನರಂಜನೆಗಾಗಿ ಒಳಾಂಗಣ ಆಟಗಳ ಪರಿಕರಗಳನ್ನು ಒದಗಿಸಲಾಗುವುದು. ನಮಗೆ ಯಾವುದೇ ಬೆಡ್ ಕೊರತೆ ಇಲ್ಲ. 100 ಜನರಿಗೆ ಇಬ್ಬರು ಸ್ಟಾಫ್ ನರ್ಸ್, ಒಬ್ಬರು ವೈದ್ಯರು ಕೆಲಸ ಮಾಡುವರು ಎಂದರು.
ಮೈಸೂರಿನಲ್ಲಿ ನರಸಿಂಹರಾಜ ಕ್ಷೇತ್ರದಲ್ಲಿ ಕೊರೊನಾ ಪಾಸಿಟಿವ್ ಹೆಚ್ಚಾಗಿ ಕಾಣುತ್ತಿದೆ.
ನರಸಿಂಹರಾಜ ಕ್ಷೇತ್ರದ ಕೆಲವು ಜನರು ಪರೀಕ್ಷೆಗೆ ಸಹಕಾರ ನೀಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಆ ಕ್ಷೇತ್ರದ ಕೆಲವು ಪ್ರದೇಶಗಳನ್ನು ಲಾಕ್ ಡೌನ್ ಮಾಡುವ ಬಗ್ಗೆ ಆಲೋಚಿಸಲಾಗುತ್ತಿದೆ. ಈ ಭಾಗದಲ್ಲಿ ಸೋಕಿತರು ಹಾಗೂ ಸಾವಿನ ಸಂಖ್ಯೆ ಜಾಸ್ತಿಯಾಗಿದೆ. ಇಲ್ಲಿನ ಜನರು ಪರೀಕ್ಷೆ ಮಾಡಿಸಿಕೊಳ್ಳಲು ಬರುತ್ತಿಲ್ಲ. ಅಲ್ಲಿನ ಶಾಸಕರು ಇತರ ಮುಖಂಡರೊಂದಿಗೆ ಮಾತನಾಡಿ ಲಾಕ್ ಡೌನ್ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಶಾಸಕ ಎಲ್. ನಾಗೇಂದ್ರ, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಶ್ಯಂತ್, ಜಿಲ್ಲಾ ಪಂಚಾಯತಿ ಸಿ.ಇ.ಒ. ಪ್ರಶಾಂತ್ ಕುಮಾರ್ ಮಿಶ್ರಾ, ಉಪಸ್ಥಿತರಿದ್ದರು.