ಬೆಂಗಳೂರು:
ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ, ಮತ್ತೆ ಮತ್ತೆ ಲಾಕ್ ಡೌನ್ ಬಗ್ಗೆ ಪ್ರಸ್ತಾಪ ಮಾಡಬೇಡಿ ಎಂದು ಲಾಕ್ಡೌನ್ ಜಪ ಮಾಡುವ ಬಿಬಿಎಂಪಿ ಅಧಿಕಾರಿಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಖಡಕ್ ಸೂಚನೆ ನೀಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಅವರು, ಕೋವಿಡ್ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ. ಲಾಕ್ ಡೌನ್ ಮುಂದುವರೆಸುವ ಯಾವುದೇ ಯೋಜನೆ ಸರ್ಕಾರದ ಮುಂದೆ ಇಲ್ಲ ಸಿಎಂ ಬಿಎಸ್ವೈ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು ಲಾಕ್ ಡೌನ್ ಕುರಿತ ಸ್ಥಿತಿಗತಿ ಚರ್ಚೆ ವೇಳೆ ಬಹುತೇಕ ಸಚಿವರು ಲಾಕ್ ಡೌನ್ ವಿಸ್ತರಣೆ ಬಗ್ಗೆ ಒಲವು ವ್ಯಕ್ತಪಡಿಸಿದರು. ಒಂದು ವಾರದ ಲಾಕ್ಡೌನ್ ನಿಂದ ಕೊರೊನಾ ಹರಡುವಿಕೆ ನಿಯಂತ್ರಣ ಕಷ್ಟ,ಇನ್ನಷ್ಟು ದಿನಗಳ ಕಾಲ ವಿಸ್ತರಣೆ ಅಗತ್ಯ ವಿದೆ ಎಂದರು. ಇದಕ್ಕೆ ಮತ್ತೆ ಕೆಲ ಸಚಿವರು ದನಿಗೂಡಿಸಿದರು.
ಕೊರೊನಾ ಕೇಸ್ ಗಳ ಸಂಖ್ಯೆ ಲಾಕ್ ಡೌನ್ ನಂತರದ ದಿನಗಳಲ್ಲಿಯೂ ಹೆಚ್ಚಾಗುತ್ತಲೇ ಇದೆ. ಲಾಕ್ ಡೌನ್ ಮುಗಿಯುವ ವೇಳೆಗೆ ಸಂಖ್ಯೆಯಲ್ಲಿ ಕಡಿಮೆಯಾಗಬಹುದು. ಆಗ ಲಾಕ್ ಡೌನ್ ತೆರವುಗೊಳಿಸಿದರೆ ಮತ್ತೆ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗಲಿದೆ. ಹಾಗಾಗಿ ಲಾಕ್ ಡೌನ್ ಮತ್ತೊಂದು ವಾರ ವಿಸ್ತರಣೆ ಮಾಡಿದರೆ ಒಳಿತು ಎನ್ನುವ ಅಭಿಪ್ರಾಯವನ್ನು ವಲಯ ಉಸ್ತುವಾರಿ ಸಚಿವರು ವ್ಯಕ್ತಪಡಿಸಿದರು ಎನ್ನಲಾಗಿದೆ.
ಸಭೆಯಲ್ಲಿ ಬಹುತೇಕರಿಂದ ಲಾಕ್ ಡೌನ್ ವಿಸ್ತರಣೆ ಬಗ್ಗೆ ಪದೇ ಪದೆ ಕೇಳಿಬಂದ ಅಭಿಪ್ರಾಯಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸಿಎಂ ಯಡಿಯೂರಪ್ಪ,ಲಾಕ್ ಡೌನ್ ವಿಸ್ತರಣೆ ಬಗ್ಗೆ ಮಾತುಗಳು ಸಾಕು. ಈ ಬಗ್ಗೆ ಮುಂದೆ ನೋಡೋಣ, ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ. ಬೇರೆ ಮಾರ್ಗಗಳ ಬಗ್ಗೆ ಆಲೋಚನೆ ಮಾಡಿ ಎಂದು ಸೂಚನೆ ನೀಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/05/Yedd-1.gif)