ಧಾರವಾಡ :
ವಿದೇಶದಿಂದ ಧಾರವಾಡಕ್ಕೆ ಆಗಮಿಸಿದ್ದ ಓರ್ವ ವ್ಯಕ್ತಿ ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 21ಕ್ಕೆ ಏರಿಕೆ ಕಂಡಿದೆ. ಸೋಂಕು ದೃಢಪಟ್ಟಿರುವ ವ್ಯಕ್ತಿಯು ಧಾರವಾಡ ನಗರದ ಹೊಸಯಲ್ಲಾಪುರ ಪ್ರದೇಶಕ್ಕೆ ಸೇರಿದ 33 ವರ್ಷ ವಯಸ್ಸಿನ ಪುರುಷನಾಗಿದ್ದಾರೆ. ಆಸ್ಟ್ರೇಲಿಯಾ, ದುಬೈ,ಮಸ್ಕತ್ ಹಾಗೂ ಗೋವಾ ಮೂಲಕ ಈ ವ್ಯಕ್ತಿ ಮಾ.12ರಂದು ಧಾರವಾಡ ನಗರಕ್ಕೆ ಆಗಮಿಸಿದ್ದರು. ಶಂಕಿತನಲ್ಲಿ ಕೋವಿಡ್ 19 ರ ರೋಗಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ, ಮಾ.18 ರಂದು ಅವರು ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗಾಗಿ ದಾಖಲಾಗಿದ್ದರು.
ಕೊರೊನಾ ರೋಗ ಲಕ್ಷಣಗಳಿಗೆ ಅನುಗುಣವಾಗಿ ಅದೇ ದಿನ ಅವರ ಗಂಟಲು ಮತ್ತು ಮೂಗಿನ ದ್ರವದ ಮಾದರಿಯನ್ನು ತಪಾಸಣೆಗಾಗಿ ಶಿವಮೊಗ್ಗದ ವಿಡಿಆರ್ ಎಲ್ ಪ್ರಯೋಗಾಲಯಕ್ಕೆ ಕಳುಹಿಸಿ ಕೊಡಲಾಗಿತ್ತು. ಇದೀಗ ಪ್ರಯೋಗಾಲಯ ವರದಿ ಕೋವಿಡ್ 19 ಪಾಸಿಟಿವ್ ಎಂದು ಬಂದಿದೆ. ಈ ವ್ಯಕ್ತಿಗೆ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಈಗಾಗಲೇ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ಕಂಡು ಬಂದ ಸ್ಥಳದ ಸುತ್ತಮುತ್ತ ನಿಯಮಾನುಸಾರ ಸರ್ವೇ ಕಾರ್ಯ ಕೈಗೊಳ್ಳಲಾಗಿದೆ. ಈ ವ್ಯಕ್ತಿಯ ಸಂಪರ್ಕಕ್ಕೆ ಬಂದವರ ಮಾಹಿತಿ ( Contact Tracing ) ಸಂಗ್ರಹಿಸಲಾಗುತ್ತಿದೆ ಎಂದರು. ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಹೊಸಯಲ್ಲಾಪುರ ಪ್ರದೇಶವನ್ನು ಕಂಟೈನಮೆಂಟ್ ಎಂದು ಘೋಷಿಸಲಾಗಿದ್ದು, ಅಲ್ಲಿಂದ ಸುತ್ತಮುತ್ತಲಿನ 3 ಕಿಮೀ ವ್ಯಾಪ್ತಿಯಲ್ಲಿ ಸಾರ್ವಜನಿಕರ ಆಗಮನ ಮತ್ತು ನಿರ್ಗಮನವನ್ನು ನಿರ್ಬಂಧಿಸಲಾಗಿದೆ.
ಜಿಲ್ಲೆಯಾದ್ಯಂತ ಈಗಾಗಲೇ ಕೊರೊನಾ ವೈರಸ್ ನಿಯಂತ್ರಣಕ್ಕೆ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಜನತೆ ಭಯಕ್ಕೆ ಒಳಗಾಗಬಾರದು, ಸಾಮಾಜಿಕ ಅಂತರ ಹಾಗೂ ಶುಚಿತ್ವಕ್ಕೆ ಹೆಚ್ಚು ಒತ್ತು ನೀಡಬೇಕು. ಸಾರ್ವಜನಿಕರು ಸಾಧ್ಯವಾದಷ್ಟು ತಮ್ಮ ಮನೆಗಳಲ್ಲಿಯೇ ಇರುವುದರ ಮೂಲಕ ವೈರಾಣು ತಡೆಯಲು ತಮ್ಮ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ