ಸಚಿವಕಾಂಕ್ಷಿಗಳಿಗೆ ಬಿಗ್ ಶಾಕ್ ನೀಡಿದ ಸಿಎಂ ಬಿಎಸ್‍ವೈ..!

ಬೆಂಗಳೂರು :

     ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಗ್ ಶಾಕ್ ನೀಡಿದ್ದು, ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ ಎಂದು ಹೇಳಿದ್ದಾರೆ.

     ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ದೆಹಲಿ ಭೇಟಿ ಇನ್ನೂ ನಿರ್ಧಾರವಾಗಿಲ್ಲ. ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಇಲ್ಲ ಎಂದು ಹೇಳುವ ಮೂಲಕ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಶಾಕ್ ಕೊಟ್ಟಿದ್ದಾರೆ.

     ಇದರಿಂದಾಗಿ ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದಕ್ಕೆ ಹೋಗಿದ್ದು, ಅಕ್ಟೋಬರ್ ತಿಂಗಳಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ವಿಸ್ತರಣೆ ಮಾಡುವ ತೀರ್ಮಾನಕ್ಕೆ ಬಂದಿದ್ದಾರೆ. ಅಧಿವೇಶನಕ್ಕೂ ಮೊದಲೇ ಸಚಿವರಾಗಿ ಕಲಾಪದಲ್ಲಿ ಪಾಲ್ಗೊಳ್ಳಲಿದ್ದೇವೆ ಎಂದು ಅಂದುಕೊಂಡಿದ್ದ ಸಚಿವ ಆಕಾಂಕ್ಷಿಗಳಿಗೆ ಮತ್ತೆ ನಿರಾಸೆಯಾಗಿದೆ.

     ಎಲ್ಲವೂ ನಿರೀಕ್ಷೆಯಂತೆ ನಡೆದಿದ್ದರೆ ಮುಂದಿನ ವಾರ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಯಾಗುವ ಸಂಭವವಿತ್ತು. ಇದಕ್ಕಾಗಿ ಸಿಎಂ ಬಿಎಸ್‍ವೈ ಅವರು ವರಿಷ್ಠರ ಬಳಿ ಚರ್ಚಿಸಲು ನವದೆಹಲಿಗೆ ಹೊರಡಲು ಸಿದ್ದತೆ ನಡೆಸಿದ್ದರು. ಆದರೆ ಇದೇ 21ರಿಂದ ಅಧಿವೇಶನ ಆರಂಭವಾಗಲಿದ್ದು, ಸೆಪ್ಟಂಬರ್ 17ರವರೆಗೆ ಸಂಪುಟ ವಿಸ್ತರಣೆ ನಡೆಯುವುದಿಲ್ಲ, ಮಹಾಲಯ ಅಮಾವಾಸ್ಯೆ ನಂತರ ಮಾತ್ರ ಸಂಪುಟ ವಿಸ್ತರಣೆಯಾಗಲಿದೆ ಎಂದು ಮೂಲಗಳು ತಿಳಿಸಿವೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ