ಮಂಗಳೂರು:
ಡಿ.19ರಂದು ಪೌರತ್ವ ಕಾಯಿದೆ ವಿರೋಧಿ ಹೋರಾಟದ ಸಂದರ್ಭ ಗಲಭೆ ನಿಯಂತ್ರಿಸಲು ಪೊಲೀಸರು ನಡೆಸಿದ ಗೋಲಿಬಾರ್ ಗೆ ಸಂಬಂಧಿಸಿ ರಾಜ್ಯ ಸರಕಾರದ ಆದೇಶದಂತೆ ಸಿಐಡಿ ತನಿಖಾ ತಂಡ ಶುಕ್ರವಾರ ಅಧಿಕೃತವಾಗಿ ತನಿಖೆ ಆರಂಭಿಸಿದೆ.
ಸಿಐಡಿ ಎಸ್ಪಿ ರಾಹುಲ್ ಕುಮಾರ್ ಷಹಾಪುರ್ ವಾಡ್ ನೇತೃತ್ವದ ಆರು ಮಂದಿ ಅಧಿಕಾರಿಗಳ ತಂಡ ಮಂಗಳೂರಿನಲ್ಲಿ ಬೀಡು ಬಿಟ್ಟಿದ್ದು, ಪ್ರಕರಣದ ಇಂಚಿಂಚು ಮಾಹಿತಿಯನ್ನು ಪಡೆದುಕೊಂಡಿದ್ದಾರೆ.
ಗಲಭೆ ನಡೆದ ಮಂಗಳೂರಿನ ಸ್ಟೇಟ್ ಬ್ಯಾಂಕ್ ವೃತ್ತ, ಬಂದರು ಪ್ರದೇಶಗಳಿಗೆ ಭೇಟಿ ನೀಡಿದ ಅಧಿಕಾರಿಗಳ ತಂಡ ಮಹತ್ವದ ದಾಖಲೆಗಳನ್ನು ಸಂಗ್ರಹಿಸಿದೆ. ಆಯಾ ಪ್ರದೇಶದ ಸಿಸಿಟಿವಿ ಕ್ಯಾಮೆರಾ ವಿಡಿಯೋ, ಬಂದರು ಠಾಣಾ ಸಿಬ್ಬಂದಿ ಸೇರಿದಂತೆ ಸ್ಥಳೀಯರಿಂದ ಮಾಹಿತಿಯನ್ನು ಅಧಿಕಾರಿಗಳು ಕಲೆ ಹಾಕಿದ್ದಾರೆ.
ಡಿಸೆಂಬರ್ 19ರ ಸಂಜೆ ವೇಳೆ ಘಟನೆ ನಡೆದಿದ್ದು, ಅಂದು ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಹೇಳಿಕೆಗಳನ್ನೂ ದಾಖಲಿಸಿಕೊಂಡಿರುವ ಅಧಿಕಾರಿಗಳು ಮುಂದಿನ ಮೂರು ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸುವ ಸಾಧ್ಯತೆಗಳಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
