ಚಾಮರಾಜನಗರ:
ಮಾಜಿ ಶಾಸಕ ಹಾಗು ಹಾಲಿ ಬಿಜೆಪಿ ಮುಖಂಡ ಸಿ. ಗುರುಸ್ವಾಮಿ (68) ಕೋವಿಡ್ ಸೋಂಕಿನಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿಂದು ಮೃತಪಟ್ಟಿದ್ದಾರೆ.
ಆಗಸ್ಟ್ 5 ರಂದು ಕೋವಿಡ್ ದೃಢಪಟ್ಟ ಹಿನ್ನೆಲೆ ಅವರು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಿಸದೆ ಬುಧವಾರ ಬೆಳಗ್ಗೆ 7 ಗಂಟೆ ವೇಳೆಯಲ್ಲಿ ಮೃತಪಟ್ಟಿದ್ದಾರೆ.
ವಕೀಲರಾಗಿದ್ದ ಸಿ. ಗುರುಸ್ವಾಮಿಯವರು ಜನತಾ ಪಕ್ಷ, ಜನತಾದಳದಿಂದ ರಾಜಕೀಯ ಪ್ರವೇಶಿಸಿದ್ದು ಮೈಸೂರು ಜಿಲ್ಲಾ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಗುರುಸ್ವಾಮಿ 1999ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಚಾಮರಾಜನಗರ ಕ್ಷೇತ್ರದಿಂದ ಜಯಗಳಿಸಿದ್ದರು. 1999-2004 ಎರಡು ಅವಧಿಯಲ್ಲಿ ಶಾಸಕರಾಗಿದ್ದ ಗುರುಸ್ವಾಮಿ ಬಳಿಕ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರಿದ್ದರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕೆಲ ಸಮಯ ಸೇವೆ ಸಲ್ಲಿಸಿದ್ದ ಅವರು ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿ ಜಿಲ್ಲೆಯ ಪ್ರಭಾವಿ ಬಿಜೆಪಿ ಮುಖಂಡರಾಗಿ ಗುರುತಿಸಿಕೊಂಡಿದ್ದರು,
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ, ವಕೀಲೆ ನಾಗಶ್ರೀ ಪ್ರತಾಪ್ ಸೇರಿದಂತೆ ಇಬ್ಬರು ಪುತ್ರಿಯರು, ಪತ್ನಿ ಶೀಲಾ ಅವರನ್ನು ಗುರುಸ್ವಾಮಿ ಅಗಲಿದ್ದಾರೆ.
