ಬೆಂಗಳೂರು
ಈಗಾಗಲೇ ಬರಪೀಡಿತವೆಂದು ಘೋಷಿಸಲಾಗಿರುವ 86 ತಾಲ್ಲೂಕುಗಳ ಜತೆಗೆ ಇನ್ನೂ 14 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ ಸೋಮವಾರ ಆದೇಶ ಹೊರಡಿಸಲಾಗಿದೆ.
ಇದರೊಂದಿಗೆ 2018-19ನೇ ಸಾಲಿನ ಮುಂಗಾರು ಹಂಗಾಮಿನ ಅವಧಿಗೆ ಸಂಬಂಧಿಸಿದಂತೆ ಘೋಷಿಸಲಾದ ಬರಪೀಡಿತ ತಾಲ್ಲೂಕುಗಳ ಸಂಖ್ಯೆ 100ಕ್ಕೇರಿದೆ. ಈ ಬಗ್ಗೆ ಮಾಹಿತಿ ನೀಡಿದ ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಅವರು, ಈಗ ಹೊಸದಾಗಿ ಆನೇಕಲ್, ದೇವನಹಳ್ಳಿ, ದೊಡ್ಡಬಳ್ಳಾಪುರ, ತುರುವೇಕೆರೆ, ಹೊಳಲ್ಕೆರೆ, ಹೊಸದುರ್ಗ, ದಾವಣಗೆರೆ, ಜಗಳೂರು, ಪಾಂಡವಪುರ, ಔರಾದ್, ಬಸವಕಲ್ಯಾಣ, ಅಥಣಿ, ಬೀಳಗಿ ಮತ್ತು ಮುಧೋಳ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳ ಪಟ್ಟಿಗೆ ಸೇರಿಸಲಾಗಿದೆ ಎಂದಿದ್ದಾರೆ.
ಕೇಂದ್ರ ಸರ್ಕಾರವು ಪ್ರಕಟಿಸಿರುವ 2016ರ ಬರ ಕೈಪಿಡಿ ಮತ್ತು ಪರಿಷ್ಕೃತ ಮಾರ್ಗಸೂಚಿಗಳಲ್ಲಿ ಕಡ್ಡಾಯಪಡಿಸಿರುವ ಅಂಶಗಳ ಪ್ರಕಾರ ಈ ತಾಲ್ಲೂಕುಗಳು ಕೂಡ ಬರಪೀಡಿತವಾಗಿವೆ ಎಂದು ದೇಶಪಾಂಡೆ ಹೇಳಿದ್ದಾರೆ.
ಈ ತಾಲ್ಲೂಕುಗಳಲ್ಲಿ ಭೂರಹಿತ ಕಾರ್ಮಿಕರು, ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ಒದಗಿಸುವುದು, ಕುಡಿಯುವ ನೀರು ಪೂರೈಕೆ, ಜಾನುವಾರುಗಳಿಗೆ ಮೇವು ಸರಬರಾಜು ಮುಂತಾದ ಬರ ಪರಿಹಾರ ಕಾರ್ಯಗಳನ್ನು ಎಸ್.ಡಿ.ಆರ್.ಎಫ್. / ಎನ್.ಡಿ.ಆರ್.ಎಫ್ ಮಾರ್ಗಸೂಚಿಯ ಪ್ರಕಾರ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಆಗಿರುವ ಬೆಳೆಹಾನಿ ಬಗ್ಗೆ ಕೂಡಲೇ ಜಂಟಿ ಸಮೀಕ್ಷೆ ನಡೆಸಿ, ಸರಕಾರಕ್ಕೆ ವರದಿ ಸಲ್ಲಿಸುವಂತೆ ಸಚಿವರು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
