ಬೆಂಗಳೂರು :
ರಾಜ್ಯದ ಬಿಜೆಪಿ ಸರಕಾರವನ್ನು ಪತನಗೊಳಿಸುವ ಇಚ್ಛೆ ಇಲ್ಲ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಬೆಳಗಾವಿಯಲ್ಲಿ ಇಂದು ಮಾತನಾಡಿದ ಅವರು, ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಬೀಳಲೆಂದು ಬಯಸುವುದಿಲ್ಲ. ಮುಂದುವರಿಯಲಿ ಎಂದೇ ಆಶಿಸುತ್ತೇನೆ ಎಂದು ತಿಳಿಸಿದ್ದಾರೆ.
‘ಭ್ರಷ್ಟಾಚಾರವಿಲ್ಲದಂತೆ ಆಡಳಿತ ನಡೆಸುತ್ತೇನೆ ಎಂದಿದ್ದ ಯಡಿಯೂರಪ್ಪ ಅವರು ಈಗ ನಮ್ಮ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಸ್ವತಃ ಹೇಳಿದ್ದಾರೆ. ಹೀಗಾಗಿ ಸರ್ಕಾರದ ಬಗ್ಗೆ ಹೆಚ್ಚಾಗಿ ಮಾತನಾಡುವುದಿಲ್ಲ. ಖಜಾನೆಯ ಸ್ಥಿತಿಗತಿಯ ಕುರಿತು ಶ್ವೇತಪತ್ರ ಬಿಡುಗಡೆ ಮಾಡಿ ಎಂದೂ ಕೇಳುವುದಿಲ್ಲ. ಖಜಾನೆಯ ಸ್ಥಿತಿ ಏನಿತ್ತು, ಈಗ ಏನಾಗಿದೆ ಎನ್ನುವುದನ್ನು ಸದನದಲ್ಲಿ ಮಾತನಾಡಲು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹಾಗೂ ಎಚ್.ಡಿ. ಕುಮಾರಸ್ವಾಮಿ ಸಮರ್ಥರಿದ್ದಾರೆ. ಅವರೇ ಎಲ್ಲವನ್ನೂ ಬಹಿರಂಗಪಡಿಸುತ್ತಾರೆ’ ಎಂದರು.
ನಾವು ಸೋಲನ್ನು ಸವಾಲಾಗಿ ಸ್ವೀಕರಿಸಿ ಕೆಳಮಟ್ಟದಿಂದ ಪಕ್ಷ ಸಂಘಟಿಸುವ ಕೆಲಸವನ್ನು ಮಾಡುತ್ತೇವೆ. ರಾಜ್ಯದ ಅಭಿವೃದ್ಧಿಯಾಗಬೇಕೆಂದರೆ ಪ್ರಾದೇಶಿಕ ಪಕ್ಷದಿಂದ ಮಾತ್ರ ಸಾಧ್ಯ. ಇದಕ್ಕೆ ಆಂದ್ರಪ್ರದೇಶ, ತಮಿಳುನಾಡು, ಪಶ್ಚಿಮಬಂಗಾಳ ಮೊದಲಾದವು ಸಾಕ್ಷಿಯಾಗಿವೆ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
