ಬೆಂಗಳೂರು:
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕೋವಿಡ್ ಪಾಸಿಟಿವ್ ಬಂದಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರಕ್ಕಾಗಿ ತೆರಳಿದ್ದ ಅವರು ಇಂದು ಬೆಳಗ್ಗೆ ನಗರಕ್ಕೆ ಮರಳಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿದಾಗ ವರದಿಯಲ್ಲಿ ಪಾಸಿಟಿವ್ ಬಂದಿದೆ. ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೋವಿಡ್ ಪಾಸಿಟಿವ್ ವರದಿ ಬಂದಿರುವುದನ್ನು ಸ್ವತಃ ಕುಮಾರಸ್ವಾಮಿ ಅವರೇ ಟ್ವೀಟ್ ಮೂಲಕ ತಿಳಿಸಿದ್ದು, ಕಳೆದ ಕೆಲವು ದಿನಗಳಲ್ಲಿ ತಮ್ಮ ಸಂಪರ್ಕಕ್ಕೆ ಬಂದಿದ್ದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಲಹೆ ಮಾಡಿದ್ದಾರೆ.
ಬೆಡ್ ಇಲ್ಲ ಎಂದ ಮಣಿಪಾಲ್ ಆಸ್ಪತ್ರೆ
ಮಣಿಪಾಲ್ ಆಸ್ಪತ್ರೆ ಸೇರಬಯಸಿದ ಅವರಿಗೆ ಬೆಡ್ ಸಿಕ್ಕಿಲ್ಲ. ಕುಮಾರಸ್ವಾಮಿಯಂತಹ ಪ್ರಭಾವಿ ನಾಯಕರಿಗೇ ಈ ಸ್ಥಿತಿ ಬಂದಿರುವಾಗ ಸೋಂಕು ತಗಲಿರುವ ಸಾಮಾನ್ಯ ಜನ ಚಿಕಿತ್ಸೆಗಾಗಿ ಬೆಡ್ ಪಡೆಯಲು ಏನು ಮಾಡಬೇಕು?ಎಂಬ ಮಾತು ಕೇಳಿ ಬರತೊಡಗಿದೆ.
ಹೀಗಾಗಿ ವೈದ್ಯರ ಬಳಿ ಮಾತುಕತೆ ನಡೆಸಿ,ತಮ್ಮ ತೋಟದ ಮನೆಯಲ್ಲಿ ವಿಶ್ರಾಂತಿ ಪಡೆದು ಚಿಕಿತ್ಸೆ ಪಡೆಯುವುದಾಗಿ ಅವರು ಹೇಳಿದ್ದಾರಾದರೂ ವೈದ್ಯರು ಅದನ್ನೊಪ್ಪಿಲ್ಲ. ಈ ವಿಷಯದಲ್ಲಿ ರಿಸ್ಕ್ ಬೇಡ. ಹೀಗಾಗಿ ತಕ್ಷಣವೇ ಆಸ್ಪತ್ರೆಗೆ ಅಡ್ಮಿಟ್ ಆಗಿ ಎಂದವರು ಹೇಳಿದ್ದಾರೆ.
ಹೀಗಾಗಿ ಮಣಿಪಾಲ್ ಆಸ್ಪತ್ರೆ ಸೇರಲು ನಿರ್ಧರಿಸಿದ ಅವರು ಸಂಬಂಧಿಸಿದವರನ್ನು ಸಂಪರ್ಕಿಸಿದರೆ, ಬೆಡ್ ಇಲ್ಲ ಎಂಬ ಉತ್ತರ ಸಿಕ್ಕಿದೆ. ಈ ಮಧ್ಯೆ ವಿಷಯ ತಿಳಿದ ಕೂಡಲೇ ಆರೋಗ್ಯ ಸಚಿವ ಸುಧಾಕರ್ ಅವರು ಕುಮಾರಸ್ವಾಮಿ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಬೆಡ್ ದೊರಕಿಸಿಕೊಡಲು ಯತ್ನಿಸಿದ್ದಾರಾದರೂ ಅದು ಫಲ ಕೊಟ್ಟಿಲ್ಲ. ಹೀಗಾಗಿ ಕುಮಾರಸ್ವಾಮಿ ಅವರು ಮತ್ತೊಂದು ಖಾಸಗಿ ಆಸ್ಪತ್ರೆಗೆ ಫೋನು ಮಾಡಿದ್ದರ ಫಲವಾಗಿ ಬೆಡ್ ಸಿಕ್ಕಿದೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/09/Hd-kumaraswamy.jpg)