ಬೆಂಗಳೂರು:

ಐಎಂಎ ಬಹುಕೋಟಿ ವಂಚನೆ ಹಗರಣದಲ್ಲಿ ಇಬ್ಬರು ಐಪಿಎಸ್ ಅಧಿಕಾರಿಗಳು ಸೇರಿ ಐವರು ಪೊಲೀಸ್ ಅಧಿಕಾರಿಗಳ ಮೇಲೆ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿದೆ.
ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್, ಅಜಯ್ ಹಿಲೋರಿ ಸೇರಿ ಅಂದಿನ ಕಮರ್ಷಿಯಲ್ ಠಾಣೆ ಇನ್ಸ್ಪೆಕ್ಟರ್ ಎಂ.ರಮೇಶ್, ಸಬ್ ಇನ್ಸ್ಪೆಕ್ಟರ್ ಗೌರಿಶಂಕರ್, ಸಿಐಡಿ ಡಿವೈಎಸ್ಪಿ ಶ್ರೀಧರ್ ಮೇಲೆ ಸೆಕ್ಷನ್ 120 ಬಿ ಅಡಿ ಬೆಂಗಳೂರು ಸಿಬಿಐ ಕಚೇರಿಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.
ಐಎಂಎ ಸಂಸ್ಥಾಪಕ ಮನ್ಸೂರ್ ಖಾನ್ ಗೆ ಈ ಅಧಿಕಾರಿಗಳು ನೆರವಾಗಿದ್ದರೆಂದು ಸಿಬಿಐ ಹೇಳಿದೆ.
ಈ ಹಿಂದೆ ಕರ್ನಾಟಕ ಪೊಲೀಸ್ ಇಲಾಖೆಯ ಹಿರಿಯ ಹುದ್ದೆಗಳಲ್ಲಿರುವ ಇಬ್ಬರು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲು ಸಿಬಿಐ ತಂಡ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದಿಂದ ಅನುಮತಿ ಕೇಳಿತ್ತು. ಇದೀಗ ಸರಕಾರ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಉನ್ನತ ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದೆ.
ಕೆಲವು ತಿಂಗಳ ಹಿಂದೆ ಹತ್ತಾರು ಸಾವಿರ ಜನರಿಗೆ ವಂಚನೆ ಮಾಡಿರುವ ಸಾವಿರಾರು ಕೋಟಿ ರೂಪಾಯಿ ಮೊತ್ತದ ‘ಐ ಮಾನಿಟರಿ ಅಡ್ವೈಸರಿ (ಐಎಂಎ) ಹಗರಣ ಬಯಲಾಗಿತ್ತು. ಈ ಹಿಂದೆ ಇದೇ ಕಂಪನಿಗೆ ಸಿಐಡಿ ಆರ್ಥಿಕ ಅಪರಾಧ ವಿಭಾಗ ಕ್ಲೀನ್ಚಿಟ್ ನೀಡಿತ್ತು. ಈ ಸಂಬಂಧ ಸಿಬಿಐ ತಂಡ ತನಿಖೆ ನಡೆಸುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








