ಮಡಿಕೇರಿ:
ಭಾರೀ ಮಳೆಯಿಂದ ಭಾರೀ ಪ್ರಮಾಣದ ಗುಡ್ಡ ಕುಸಿದು ತಲಕಾವೇರಿ ಕ್ಷೇತ್ರದ ಪ್ರಧಾನ ಅಚ೯ಕರ ಕುಟುಂಬ ನಾಪತ್ತೆಯಾಗಿದೆ.
ಕೊಡಗು ಜಿಲ್ಲೆಯ ಭಾಗಮಂಡಲ ವ್ಯಾಪ್ತಿಯ ತಲಕಾವೇರಿಯಲ್ಲಿ ನಿನ್ನೆ ತಡರಾತ್ರಿ ಸುರಿದ ಭಾರೀ ಗಾಳಿಮಳೆಗೆ ಬ್ರಹ್ಮಗಿರಿ ಬೆಟ್ಟದ ಒಂದು ಭಾಗ ಕುಸಿದು ತಲಕಾವೇರಿಯ ದೇವಸ್ಥಾನದ ಅರ್ಚಕರುಗಳ ಎರಡು ಮನೆಗಳ ಮೇಲೆ ಬಿದ್ದಿದೆ.
ಎರಡು ಮನೆಗಳ ಪೈಕಿ ಒಬ್ಬರು ಅರ್ಚಕರು ಹೊಸ ಮನೆ ನಿರ್ಮಿಸಿಕೊಂಡು ಕುಟುಂಬದೊಂದಿಗೆ ಭಾಗಮಂಡಲದಲ್ಲಿ ನೆಲೆಸಿರುತ್ತಾರೆ. ತಲಕಾವೇರಿಯ ಮನೆ ಖಾಲಿ ಇರುತ್ತದೆ. ಇನ್ನೊಬ್ಬ ಅರ್ಚಕರು ತಲಕಾವೇರಿಯ ಮನೆಯಲ್ಲಿಯೇ ಕುಟುಂಬದೊಂದಿಗೆ ವಾಸವಿರುತ್ತಾರೆ. ಅವರ ಮನೆಯಲ್ಲಿದ್ದ ನಾಲ್ವರು ಇದೀಗ ಕಣ್ಮರೆಯಾಗಿದ್ದಾರೆ ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.
ತಲಕಾವೇರಿ ದೇವಳದ ಪ್ರಧಾನ ಅರ್ಚಕ ಟಿ.ಎಸ್.ನಾರಾಯಣ ಆಚಾರ್, ಅವರ ಪತ್ನಿ ಆನಂದತೀರ್ಥ ಮತ್ತು ಇನ್ನಿಬ್ಬರು ಅರ್ಚಕರು ನಾಪತ್ತೆಯಾಗಿದ್ದು, ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಭಾಗಮಂಡಲ – ತಲಕಾವೇರಿ ರಸ್ತೆಯಲ್ಲಿ ಅಲ್ಲಲ್ಲಿ ಭೂಕುಸಿತ ಉಂಟಾಗಿರುವುದರಿಂದ ರಕ್ಷಣಾ ತಂಡ ಸ್ಥಳಕ್ಕೆ ತೆರಳುವಲ್ಲಿ ತೊಡಕಾಗಿ ಪರಿಣಮಿಸಿದೆ. ಅದಲ್ಲದೇ ದಟ್ಟವಾಗಿ ಆವರಿಸಿರುವ ಮಂಜು, ಮಳೆ ಕೂಡಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಘಟನಾ ಸ್ಥಳಕ್ಕೆ ರಕ್ಷಣಾ ಕಾರ್ಯಾಚರಣೆಗಾಗಿ ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ತಂಡ ಧಾವಿಸುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/08/Talakaveri-rain-house.jpg)