ಮಡಿಕೇರಿ:
ರೆಸಾರ್ಟ್ ನಿರ್ಮಾಣಕ್ಕಾಗಿ ಕೆ.ನಿಡಗುಣಿ ಗ್ರಾಮದಲ್ಲಿ 800 ಮರಗಳ ಮಾರಣಹೋಮಕ್ಕೆ ಅನುಮತಿ ನೀಡಿದ್ದ ಮಡಿಕೇರಿ ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಲ್.ಮಂಜುನಾಥ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಶುಕ್ರವಾರ ಪ್ರಧಾನ ಅರಣ್ಯ ಸಂರಕ್ಷಣಾಧಿರಿಗಳು ಈ ಆದೇಶ ಹೊರಡಿಸಿದ್ದು, ವಿರಾಜಪೇಟೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಮರಿಯಾ ಕ್ರಿಸ್ತರಾಜು ಅವರಿಗೆ ಮಡಿಕೇರಿ ವಲಯದ ಹೆಚ್ಚಿನ ಹೊಣೆ ನೀಡಲಾಗಿದೆ.
ಆದೇಶ ಪ್ರತಿಯಲ್ಲಿ ಅಮಾನತಿಗೆ ನಿರ್ದಿಷ್ಟ ಕಾರಣ ತಿಳಿಸಿಲ್ಲ. ಆದರೆ, ಕೆ.ನಿಡುಗಣಿ ಗ್ರಾಮದಲ್ಲಿ 808 ಮರಗಳ ಹನನಕ್ಕೆ ಡಿಎಫ್ಒ ಮಂಜುನಾಥ ಅವರು ಆದೇಶ ನೀಡಿದ್ದರು. ಕರ್ತವ್ಯ ಲೋಪದ ಕಾರಣಕ್ಕೆ ಅಮಾನತು ಮಾಡಲಾಗಿದೆ ಎನ್ನಲಾಗಿದೆ.
800 ಮರಗಳನ್ನು ಕಡಿಯಲು ಅನುಮತಿ ನೀಡಿರುವ ಅರಣ್ಯ ಇಲಾಖೆ ವಿರುದ್ಧ ಪರಿಸರ ಪ್ರೇಮಿಗಳು ಮತ್ತು ಅಲ್ಲಿನ ಗ್ರಾಮಸ್ಥರು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಈ ವಿಷಯ ಬೆಳಕಿಗೆ ಬಂದ ಕೂಡಲೇ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಈ ಬಗ್ಗೆ ವಿವರವಾದ ವರದಿ ಸಲ್ಲಿಸುವಂತೆ ಅರಣ್ಯ ಇಲಾಖೆ ಸೂಚನೆ ನೀಡಿದ್ದರು. ಅದರನ್ವಯ ಈ ಪ್ರಕರಣದಲ್ಲಿ ಡಿಎಫ್ಒ ಕರ್ತವ್ಯ ಲೋಪ ಎಸಗಿರುವ ಬಗ್ಗೆ ತಿಳಿದುಬಂದಿದ್ದು, ಸೇವೆಯಿಂದ ಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ