ಮಹೇಶ್ ರನ್ನು ಪಕ್ಷದಿಂದ ಉಚ್ಚಾಟಿಸಿದ ಮಾಯಾವತಿ!!

ಬೆಂಗಳೂರು:

       ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ನೀಡದೆ ವಿಶ್ವಾಸಮತ ಯಾಚನೆಗೆ ಹಾಜರಾಗದೆ ಪಕ್ಷದ ಆದೇಶವನ್ನು ಉಲ್ಲಂಘಿಸಿದ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರನ್ನು ಪಕ್ಷದಿಂದಲೇ ಉಚ್ಚಾಟಿಸಿ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಆದೇಶ ಹೊರಡಿಸಿದ್ದಾರೆ.

       ಈ ಬಗ್ಗೆ ಹಿಂದಿಯಲ್ಲಿ ಟ್ವೀಟ್ ಮಾಡಿರುವ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ, ರಾಜ್ಯದಲ್ಲಿ ಕರ್ನಾಟಕದ ಕುಮಾರಸ್ವಾಮಿ ಸರ್ಕಾರವನ್ನು ಬೆಂಬಲಿಸಿ ಮತ ಚಲಾಯಿಸುವಂತೆ ಪಕ್ಷದ ಹೈಕಮಾಂಡ್‌ನ ಸೂಚನೆಗಳನ್ನು ಉಲ್ಲಂಘಿಸಿ, ಬಿಎಸ್‌ಪಿ ಶಾಸಕ ಎನ್.ಮಹೇಶ್ ಇಂದಿನ ವಿಶ್ವಾಸ ಮತದಾನಕ್ಕೆ ಗೈರುಹಾಜರಾಗಿದ್ದಾರೆ. ಇದನ್ನು ಗಂಭಿರವಾಗಿ ಪರಿಗಣಿಸಿರುವ ಪಕ್ಷವು ಶಾಸಕ ಎನ್.ಮಹೇಶ್ ಅವರನ್ನು ಪಕ್ಷದಿಂದ ಉಚ್ಛಾಟಿಸಿ, ಈ ಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ನೀಡಲಾಗಿದೆ” ಎಂದಿದ್ದಾರೆ.

     ಜುಲೈ 21ರಂದು ಟ್ವೀಟ್ ಮಾಡಿದ್ದ ಮಾಯಾವತಿ ಅವರು, ವಿಶ್ವಾಸ ಮತಯಾಚನೆ ವೇಳೆ ಮೈತ್ರಿ ಸರ್ಕಾರದ ಪರವಾಗಿ ಮತ ಹಾಕಿ ಎಂದು ಎನ್.ಮಹೇಶ್ ಅವರಿಗೆ ನಿರ್ದೇಶನ ನೀಡಿದ್ದರು. ಮಾಯಾವತಿ ಅವರ ಟ್ವೀಟ್‍ಗೂ ಮುನ್ನ ಮಾಧ್ಯಮಗಳ ಜೊತೆಗೆ ಮಾತನಾಡಿದ್ದ ಶಾಸಕ ಎನ್.ಮಹೇಶ್ ಅವರು, ಮೈತ್ರಿ ಸರ್ಕಾರವು ಸೋಮವಾರ ವಿಶ್ವಾಸ ಮತಯಾಚಿಸುತ್ತಿದೆ. ಈ ಕುರಿತು ಚರ್ಚೆಗಳೆಲ್ಲ ಮುಗಿದ ನಂತರದಲ್ಲಿ ಸ್ಪೀಕರ್ ರಮೇಶ್ ಕುಮಾರ್ ಅವರು ಮತ ವಿಭಜನೆಗೆ ಹಾಕಿದಾಗ ನಾನು ಕಲಾಪಕ್ಕೆ ಗೈರು ಹಾಜರಾಗುತ್ತೇನೆ ಎಂದು ತಿಳಿಸಿದ್ದರು.

      ರಾಜ್ಯದಲ್ಲಿ ಜೆಡಿಎಸ್ ಪಕ್ಷದೊಂದಿಗಿನ ಮೈತ್ರಿಯೊಂದಿಗೆ ಬಿಎಸ್ಪಿ ಅಭ್ಯರ್ಥಿಯಾಗಿ ಕೊಳ್ಳೇಗಾಲ ಕ್ಷೇತ್ರದಿಂದ ವಿಧಾನಸಭೆ  ಚುನಾವಣೆಯಲ್ಲಿ ಸ್ಪರ್ಧಿಸಿ ಸಿಎಂ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸರ್ಕಾರದಲ್ಲಿ ಸಚಿವ ಸ್ಥಾನವನ್ನೂ ಪಡೆದಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ