ಬೆಂಗಳೂರು:
ಸರ್ಕಾರಿ, ಅನುದಾನಿತ, ಖಾಸಗಿ ಪಿಯು ಕಾಲೇಜುಗಳಲ್ಲಿ ಇನ್ನು ಮುಂದೆ ವಿದ್ಯಾರ್ಥಿಗಳು ಮೊಬೈಲ್ ಮತ್ತು ಲ್ಯಾಪ್ಟಾಪ್ ಬಳಸುವಂತಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಮಂಡಳಿ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಸೂಚನೆ ಮೇರೆಗೆ ಪ್ರಥಮ ಪಿಯುಸಿ ಹಾಗೂ ದ್ವೀತಿಯ ಪಿಯುಸಿ ವಿದ್ಯಾರ್ಥಿಗಳಿಗೆ ಮೊಬೈಲ್ ಮತ್ತು ಲ್ಯಾಪ್ಟಾಪ್ ನಿಷೇಧದ ಆದೇಶ ಜಾರಿಗೆ ತರುವಂತೆ ಎಲ್ಲ ಉಪ ನಿರ್ದೇಶಕರಿಗೆ ಮಂಡಳಿ ಸುತ್ತೋಲೆ ಹೊರಡಿಸಿದೆ.
ಪದವಿಪೂರ್ವ ಶಿಕ್ಷಣ ಇಲಾಖೆ ವ್ಯಾಪ್ತಿಯ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕಾಲೇಜಿನ ಸಮಯದಲ್ಲಿ ಮೊಬೈಲ್, ಲ್ಯಾಪ್ಟಾಪ್ ಇಟ್ಟುಕೊಳ್ಳುವುದನ್ನು ಶೈಕ್ಷಣಿಕ ಹಿತದೃಷ್ಟಿಯಿಂದ ಸಂಪೂರ್ಣವಾಗಿ ನಿಷೇಧಿಸುವ ಆದೇಶವನ್ನು ಹೊರಡಿಸಿದೆ. ಹಾಗಾಗಿ ಎಲ್ಲ ಪದವಿ ಪೂರ್ವ ಕಾಲೇಜುಗಳಲ್ಲಿ ಕಡ್ಡಾಯವಾಗಿ ಅಳವಡಿಸಿಕೊಳ್ಳುವಂತೆ ಹೇಳಲಾಗಿದೆ.
ಅಸಮಾಧಾನ
ವಾಣಿಜ್ಯ ಶಾಸ್ತ್ರ, ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಅವಶ್ಯಕವಾಗಿದೆ. ಆದರೆ, ಅವರಿಗೂ ಲ್ಯಾಪ್ಟಾಪ್ ನಿಷೇಧ ಮಾಡಲಾಗಿದೆ. ಮೊಬೈಲ್ ನಿಷೇಧ ಓಕೆ,ಆದರೆ, ಲ್ಯಾಪ್ಟಾಪ್ ನಿಷೇಧ ಏಕೆ ಎಂದು ಪಿಯು ಮಂಡಳಿಯ ಹೊಸ ಆದೇಶದ ವಿರುದ್ಧ ವಿದ್ಯಾರ್ಥಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ