ಬೆಂಗಳೂರು:
ಮೈತ್ರಿ ಸರ್ಕಾರ ಬಹುಮತ ಕಳದುಕೊಂಡಿದ್ದು,ಬಹುಮತ ಸಾಬೀತುಪಡಿಸಿ ಇಲ್ಲವೇ ಕೂಡಲೇ ರಾಜೀನಾಮೆ ನೀಡಿ ಹೊರನಡೆಯಿರಿ ಎಂದು ಆಗ್ರಹಿಸಿ ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿದ ಹಿನ್ನಲೆಯಲ್ಲಿ ವಿಧಾನ ಪರಿಷತ್ ಕಲಾಪವನ್ನು ಸಂಜೆ 6.30 ಕ್ಕೆ ಮುಂದೂಡಿಕೆ ಮಾಡಲಾಯಿತು.
ವಿಧಾನ ಪರಿಷತ್ ನ ಬೆಳಗಿನ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಧರಣಿ ಮುಂದುವರೆಸಿದರು. ರಾಜ್ಯದಲ್ಲಿನ ಮೈತ್ರಿ ಸರ್ಕಾರ ಬಹುಮತ ಕಳದುಕೊಂಡಿದೆ, ಅಲ್ಪಮತಕ್ಕೆ ಕುಸಿದ ಸರ್ಕಾರ ಹೇಗೆ ಆಡಳಿತ ನಡೆಸಲು ಸಾಧ್ಯ ಎಂದು ಭಿತ್ತಿ ಪತ್ರಗಳನ್ನು ಪ್ರದರ್ಶಿಸಿದರು. ಅಲ್ಪ ಮತಕ್ಕೆ ಕುಸಿದ ಸರ್ಕಾರ ಯಾವ ಕಾರಣಕ್ಕೂ ಅಧಿಕಾರದಲ್ಲಿ ಮುಂದುವರೆಯಲು ಸಾಧ್ಯವಿಲ್ಲ ಕೂಡಲೇ ಸಿಎಂ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಧರಣಿ ನಡೆಸಿದರು.
ಈ ವೇಳೆ ಆಡಳಿತ ಪಕ್ಷದ ಸದಸ್ಯರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು,ಆಪರೇಷನ್ ಕಮಲದ ವಿರುದ್ಧ ಕಿಡಿಕಾರಿದರು. ಈ ವೇಳೆ ಆಡಳಿತ ಪಕ್ಷ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು, ಸದನದಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಯಿತು. ಸದನ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಕಲಾಪವನ್ನು ಸಂಜೆ 6.30 ಕ್ಕೆ ಮುಂದೂಡಿಕೆ ಮಾಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/07/mla-570x330.gif)