ಮಂಗಳೂರು:
ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಾಲಿಕವಾಗಿ ನೀರಿದೆ, 15 ದಿನಗಳಲ್ಲಿ ಮಳೆ ಬರದಿದ್ದರೆ ಮಂಜುನಾಥ ಸ್ವಾಮಿಯ ಅಭಿಷೇಕಕ್ಕೂ ನೀರಿಲ್ಲ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ತಮ್ಮ ಕಳವಳವನ್ನು ಹೊರಹಾಕಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ನೀರಿನ ಸಮಸ್ಯೆಯಾಗಿದೆ. ಘಟ್ಟದ ಭಾಗದಲ್ಲಿ ಮಳೆಯಾಗದ ಕಾರಣ ನೇತ್ರಾವತಿಯಲ್ಲಿ ನೀರಿಲ್ಲ. ಅಲ್ಲದೆ ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಬರಲ್ಲ ಎಂದು ಸೂಚನೆ ಕೊಟ್ಟಿದೆ. ಹೀಗಾಗಿ ಕ್ಷೇತ್ರ ದರ್ಶನ ಮುಂದೂಡಿ ಎಂದು ವಿನಂತಿ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ನೇತ್ರಾವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಕಿಂಡಿ ಅಣೆಕಟ್ಟೆಯಲ್ಲಿ ಸ್ವಲ್ಪ ನೀರಿದೆ. ತೀರ್ಥದ ಗುಂಡಿಯಲ್ಲಿ ಅಲ್ಪ ಪ್ರಮಾಣದ ನೀರಿದೆ. ತೀರ್ಥದ ಗುಂಡಿಯಲ್ಲಿ ನಾಲ್ಕು ಅಡಿ ಕಡಿಮೆ ಆಗಿದೆ. ಪ್ರಸ್ತುತ ಸ್ವಾಮಿಯ ಅಭಿಷೇಕಕ್ಕೆ ನೀರಿನ ತೊಂದರೆ ಇಲ್ಲ. ಆದರೆ, ಮುಂದಿನ 15 ದಿನಗಳಲ್ಲಿ ಮಳೆ ಬರದಿದ್ದರೆ ಮಂಜುನಾಥ ಸ್ವಾಮಿಯ ಅಭಿಷೇಕಕ್ಕೂ ನೀರಿಲ್ಲದಂತಾಗಬಹುದು. ಈ ಹಿಂದೆಯೂ ಹೀಗೆ ಆಗಿತ್ತು. ಆದರೆ, ಇಷ್ಟು ತೀವ್ರ ಪ್ರಮಾಣದಲ್ಲಿ ಬರ ಕಾಡಿರಲಿಲ್ಲ ಎಂದು ಧರ್ಮಾಧಿಕಾರಿಗಳು ತಿಳಿಸಿದ್ದಾರೆ.
ನೇತ್ರಾವತಿ ನದಿಯ ಉಪನದಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿರುವ ಕಾರಣ ನದಿಯಲ್ಲಿ ನೀರು ಗಣನೀಯವಾಗಿ ಕಡಿಮೆಯಾಗಿದೆ. ಸರ್ಕಾರ ಮತ್ತು ಜಲತಜ್ಞರು ಈ ಬಗ್ಗೆ ಯೋಚನೆ ಮಾಡಬೇಕು. ಮುಂದಿನ 15-20 ವರ್ಷಗಳ ಭವಿಷ್ಯದ ಬಗ್ಗೆ ಯೋಚನೆ ಮಾಡಬೇಕು. ಪಶ್ಚಿಮ ಘಟ್ಟದಲ್ಲಿ ಕಾಡು ಉಳಿಸದೇ ಇರುವ ಕಾರಣ ಈ ಸಮಸ್ಯೆ ಎದುರಾಗಿದೆ ಎಂದು ವೀರೇಂದ್ರ ಹೆಗ್ಗಡೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/05/dharmasthala.gif)