ಬೆಂಗಳೂರು
ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ರೈಲ್ವೇ ಸಚಿವ ಸಿ.ಕೆ.ಜಾಫರ್ ಷರೀಫ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ನಗರದ ನಂದಿ ದುರ್ಗ ರಸ್ತೆಯ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಯಿತು.
ಇದಕ್ಕೂ ಮುನ್ನ ಅವರ ಮೃತದೇಹವನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಕಚೇರಿ ಹಾಗೂ ಹಜ್ ಭವನದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿತ್ತು. ಶುಕ್ರವಾರ ಮಸೀದಿಗೆ ಪ್ರಾರ್ಥನೆ ಸಲ್ಲಿಸಲು ಹೊರಟಿದ್ದಾಗ ಕುಸಿದುಬಿದ್ದಿದ್ದ ಷರೀಫ್, ಚಿಕಿತ್ಸೆ ಫಲಿಸದೆ ಫೋರ್ಟೀಸ್ ಆಸ್ಪತ್ರೆಯಲ್ಲಿ ಭಾನುವಾರ ಕೊನೆಯುಸಿರೆಳೆದಿದ್ದರು.
ಹಿರಿಯ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಗುಲಾಮ್ ನಬಿ ಆಜಾದ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವರಾದ ಆಂಜನೇಯ, ಎಸ್.ಆರ್.ಪಾಟೀಲ್, ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಮತ್ತಿತರರು ಅಗಲಿದ ನಾಯಕನಿಗೆ ಅಂತಿಮ ನಮನ ಸಲ್ಲಿಸಿದರು.
ಜಾಫರ್ ಷರೀಫ್ ಅವರಿಗೆ ಅಂತಿಮ ನಮನ ಸಲ್ಲಿಸಿದ ಖರ್ಗೆ, ಕಳೆದ ಐದು ದಶಕಗಳಿಂದ ರಾಜಕೀಯದಲ್ಲಿದ್ದು, ಮಾಜಿ ಪ್ರಧಾನಿ ಇಂದಿರಾಗಾಂಧಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಅವರೊಂದಿಗೆ ಆಪ್ತ ಒಡನಾಟ ಹೊಂದಿದ್ದ ಜಾಫರ್ ಷರೀಫ್ ನಿಧನದಿಂದ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದರು.
ಸಾರ್ವಜನಿಕ ದರ್ಶನದ ನಂತರ ಪಾರ್ಥೀವ ಶರೀರವನ್ನು ಮಿಲ್ಲರ್ಸ್ ರಸ್ತೆಯ ಜುಮ್ಮ ಮಸೀದಿಗೆ ಕೊಂಡೊಯ್ದು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ನಂತರ, ಮೃತದೇಹವನ್ನು ಕುದ್ರುಸ್- ಇ-ಜುಮ್ಮ ಮೈದಾನಕ್ಕೆ ಕೊಂಡೊಯ್ದು, ಅಲ್ಲಿಂದ ಖಬರ್ಸ್ಥಾನ್ಗೆ ಸಾಗಿಸಲಾಯಿತು.
ಜಾಫರ್ ಷರೀಫ್ ಅವರು ಅನುವಾದಿಸಿರುವ ದೇಶದ ಮೊದಲ ಶಿಕ್ಷಣ ಸಚಿವ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ‘ಇಂಡಿಯಾ ವಿನ್ಸ್ ಫ್ರೀಡಂ’ ಕೃತಿ ನ.28ರಂದು ಲೋಕಾರ್ಪಣೆಗೊಳ್ಳಬೇಕಿತ್ತು. ಇದಕ್ಕಾಗಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಆಹ್ವಾನಿಸಿದ್ದರು. ಆದರೆ, ಅಕಾಲ ಮೃತ್ಯವಿನಿಂದ ಅವರ ಈ ಆಸೆ ನೆರವೇರಲಿಲ್ಲ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
