ಬೇಸಿಗೆ ರಜೆಯಲ್ಲಿ ನಲಿದ ಮಕ್ಕಳು ಮತ್ತೆ ಶಾಲೆಯತ್ತ ಮುಖ…!

ಶಾಲಾ ಪ್ರಾರಂಭೋತ್ಸವ: ಚಿಣ್ಣರಿಗೆ ಭವ್ಯ ಸ್ವಾಗತ ಕೋರಿದ ಶಿಕ್ಷಕರು

ತುಮಕೂರು:

    ಕಳೆದ ಒಂದೂವರೆ ತಿಂಗಳಿನಿಂದ ಬೇಸಿಗೆ ರಜೆಯಲ್ಲಿದ್ದ ಶಾಲೆಗಳು ಪುನರಾರಂಭಗೊಂಡಿದ್ದು, ಬೇಸಿಗೆರಜೆಯ ಖುಷಿಯಲ್ಲಿದ್ದ ಮಕ್ಕಳು ಶಾಲೆಗಳತ್ತ ಹೆಜ್ಜೆ ಹಾಕಿದರು.ಬೇಸಿಗೆ ರಜೆ ಬಳಿಕ ಆರಂಭವಾಗುತ್ತಿರುವ ಸರ್ಕಾರಿ ಶಾಲೆಗಳನ್ನು ವಿವಿಧ ಹೂವುಗಳಿಂದ ಅಲಂಕರಿಸಿ ಹಬ್ಬದ ರೀತಿಯಲ್ಲಿ ಶಾಲಾ ಪ್ರಾರಂಭೋತ್ಸವ ನಡೆಸಿ ವಿದ್ಯಾರ್ಥಿಗಳನ್ನು ಶಾಲೆಗಳಿಗೆ ಸ್ವಾಗತಿಸಲಾಯಿತು.

   ೨೦೨೫-೨೬ನೇ ಶೈಕ್ಷಣಿ ವರ್ಷದ ಮೊದಲ ದಿನವಾದ ಗುರುವಾರ ಶಾಲೆಗಳಲ್ಲಿ ಸಿಹಿಯೂಟ ಸಿದ್ದಪಡಿಸಿದ್ದು, ಮಧ್ಯಾಹ್ನದ ಬಿಸಿಯೂಟಕ್ಕೆ ವಿದ್ಯಾರ್ಥಿಗಳಿಗೆ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಸಿಹಿಯೂಟ ಬಡಿಸಲಾಯಿತು.ಕಳೆದ ಒಂದೂವರೆ ತಿಂಗಳಿನಿಂದ ರಜೆಯ ಖುಷಿಯಲ್ಲಿದ್ದ ವಿದ್ಯಾರ್ಥಿಗಳು ಗುರುವಾರ ಶಾಲಾ ಸಮವಸ್ತ್ರದೊಂದಿಗೆ ಹೆಗಲಿಗೆ ಶಾಲಾ ಬ್ಯಾಗ್ ಹಾಕಿಕೊಂಡು ಶಾಲೆಗಳತ್ತ ಹೆಜ್ಜೆ ಹಾಕುತ್ತಿದ್ದ ದೃಶ್ಯ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಕಂಡು ಬಂದಿತು.

   ಶಾಲೆ ಸ್ವಚ್ಚತೆ:

    ಕಳೆದ ಒಂದೂವರೆ ತಿಂಗಳಿನಿಂದ ರಜೆ ಇದ್ದ ಕಾರಣ ಶಾಲೆಗಳನ್ನು ಸ್ವಚ್ಛಗೊಳಿಸಿ ಬಾಳೆಕಂದು, ತಳಿರು ತೋರಣಗಳಿಂದ ಸಿಂಗರಿಸಿ ಹಬ್ಬದ ವಾತಾವರಣ ನಿರ್ಮಿಸಲಾಗಿತ್ತು. ಗುಲಾಭಿ ಹೂ ನೀಡಿ ಸ್ವಾಗತ: ಶಾಲೆಗಳು ಸರ್ವಾಲಂಕೃತಗೊಂಡಿರುವುದನ್ನು ಮಕ್ಕಳು ನೋಡಿ ಖುಷಿಯಿಂದಲೇ ಶಾಲಾ ಕೊಠಡಿಗಳಿಗೆ ತೆರಳಿದರು. ಕೆಲ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಮಕ್ಕಳಿಗೆ ಸಿಹಿ ಹಂಚಿ, ಗುಲಾಬಿ ಹೂ ನೀಡುವ ಮೂಲಕ ಶಾಲೆಗೆ ಬರಮಾಡಿಕೊಂಡಿದ್ದು ವಿಶೇಷವಾಗಿತ್ತು.

  ಅಕ್ಷರಾಭ್ಯಾಸ:

   ನಗರದ ಅಗ್ರಹಾರ, ಮರಳೂರು ದಿಣ್ಣೆ, ಎಂ.ಜಿ. ರಸ್ತೆ. ಆರ್ಯಬಾಲಿಕಾ ಶಾಲೆ, ಮೆಳೇಕೋಟೆ, ಗಂಗಸಂದ್ರ, ಸಿರಾ ಗೇಟ್‌ನ ಉತ್ತರ ಬಡಾವಣೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸೇರಿದಂತೆ ಜಿಲ್ಲೆಯ ೧೦ ತಾಲ್ಲೂಕುಗಳಲ್ಲೂ ಸರ್ಕಾರಿ ಶಾಲೆಗಳಲ್ಲಿ ಹಬ್ಬದ ವಾತಾವರಣದೊಂದಿಗೆ ಶಾಲೆಗಳನ್ನು ಪ್ರಾರಂಭಿಸಲಾಯಿತು. ಕೆಲ ಖಾಸಗಿ ಶಾಲೆಗಳಲ್ಲಿ ಮೊದಲ ದಿನ ಅಕ್ಷರಾಭ್ಯಾಸ ಕಾರ್ಯಕ್ರಮ ಹಮ್ಮಿಕೊಂಡು ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸುವ ಮೂಲಕ ಶಾಲೆಗಳನ್ನು ಆರಂಭಿಸಲಾಯಿತು.

    ಸುಸ್ಥಿತಿಯಲ್ಲಿರುವ ಕೊಠಡಿಯಲ್ಲಿ ಶಾಲೆಗಳನ್ನು ನಡೆಸುವ ಜತೆಗೆ ಯೋಗ್ಯವಲ್ಲದ ಕೊಠಡಿಗಳನ್ನು ತರಗತಿಗಳಿಗೆ ಬಳಸದೆ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಶಾಲಾ ಮುಖ್ಯ ಶಿಕ್ಷಕರುಗಳಿಗೆ ಇಲಾಖೆಯ ಅಧಿಕಾರಿಗಳು ನಿರ್ದೇಶನ ನೀಡಿದ್ದಾರೆ.ಈಗಾಗಲೇ ಇಲಾಖೆಯಿಂದ ವಿತರಿಸಲಾಗಿರುವ ಉಚಿತ ಪಠ್ಯಪುಸ್ತಕ, ಸಮವಸ್ತ್ರವನ್ನು ಬಳಕೆ ಮಾಡಿಕೊಳ್ಳುವಂತೆಯೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮನಮೋಹನ್ ಪೋಷಕರಿಗೆ ಮನವಿ ಮಾಡಿದ್ದಾರೆ.

Recent Articles

spot_img

Related Stories

Share via
Copy link