ಬೆಂಗಳೂರು:
ಪೊಲೀಸ್ ಸಬ್ ಡಿವಿಷನ್ ಹಂಪಿಯಲ್ಲಿ ಪುನಃ ತೆರೆಯುವುದರ ಜೊತೆಗೆ, ಆನೆಗೊಂದಿಯಲ್ಲಿ ಪ್ರತ್ಯೇಕ ಪೊಲೀಸ್ ಠಾಣೆ ನಿರ್ಮಿಸಿ ಉತ್ತಮ ಭದ್ರತಾ ವ್ಯವಸ್ಥೆ ಕಲ್ಪಿಸಬೇಕೆಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಮನವಿ ಮಾಡಿದ್ದಾರೆ.ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಗಂಗಾವತಿ ತಾಲೂಕಿನ ಸಣಾಪುರದಲ್ಲಿ ಇಸ್ರೇಲಿ ಪ್ರವಾಸಿಗರೊಬ್ಬರು ಹಾಗೂ ಹೋಮ್ ಸ್ಟೇ ಮಾಲಕಿಯ ಮೇಲೆ ನಡೆದ ಹಲ್ಲೆ ಮತ್ತು ಅತ್ಯಾಚಾರ ಪ್ರಕರಣ ಅತ್ಯಂತ ಹೀನ ಕೃತ್ಯವಾಗಿದ್ದು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ನಾನು ಘಟನೆ ಕುರಿತು ವರದಿ ಪಡೆದು ತಕ್ಷಣವೇ ಆರೋಪಿಗಳನ್ನು ಬಂಧಿಸುವಂತೆ ಪೊಲೀಸರಿಗೆ ಸೂಚಿಸಿದ್ದೆನು ಅದರಂತೆ ಅಧಿಕಾರಿಗಳು ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದ ಸನ್ಮಾನ್ಯ ಶ್ರೀ ಯಡಿಯೂರಪ್ಪನವರ ಸರ್ಕಾರದಲ್ಲಿ ನಾನು ಅಖಂಡ ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಅವರ ಸಹಕಾರದೊಂದಿಗೆ ಹಂಪಿಯಲ್ಲಿ ಪೊಲೀಸ್ ಸಬ್ ಡಿವಿಷನ್ ವ್ಯವಸ್ಥೆಯನ್ನು ಕಲ್ಪಿಸಿ ಡಿಎಸ್ಪಿ ಮಟ್ಟದ ಅಧಿಕಾರಿಯನ್ನು ನೇಮಿಸಿ 32 ಪೊಲೀಸ್ ತಂಡಗಳನ್ನು ರಚಿಸಿ ಅವರಿಗೆ ದ್ವಿಚಕ್ರ ವಾಹನವನ್ನು ನೀಡುವ ಮೂಲಕ ಹಂಪಿ ಅಭಿವೃದ್ಧಿ ಪ್ರಾಧಿಕಾರದಲ್ಲಿ ಆನೆಗೊಂದಿ ಸಹ ಒಳಗೊಂಡಿರುವ ಕಾರಣ ಎರಡು ಐತಿಹಾಸಿಕ ಸ್ಥಳಗಳಿಗೆ ಆಗಮಿಸುವ ದೇಶ ವಿದೇಶದ ಪ್ರವಾಸಿಗರ ರಕ್ಷಣೆಗೆ ಹಗಲಿರುಳು ಗಸ್ತು ತಿರುಗುವ ಉತ್ತಮ ಪೊಲೀಸ್ ವ್ಯವಸ್ಥೆ ಕಲ್ಪಿಸಲಾಗಿತ್ತು.
ದುರಾದೃಷ್ಟಕರ ಸಂಗತಿ ಎಂದರೆ ನಂತರ ಬಂದ ಸರ್ಕಾರ ಆ ಪೊಲೀಸ್ ಸಬ್ ಡಿವಿಷನ್ ಅನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿ ಅದನ್ನು ಬೇರೆಡೆಗೆ ಸ್ಥಳಾಂತರಗೊಳಿಸಲಾಗಿದೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸುವುದರ ಬದಲು ಅತ್ಯಂತ ವಿನಮ್ರವಾಗಿ ವಿನಂತಿಸುತ್ತಾ, ಹಂಪಿ ಹಾಗೂ ಆನೆಗೊಂದಿಗೆ ಆಗಮಿಸುವ ದೇಶ-ವಿದೇಶಗಳ ಪ್ರವಾಸಿಗರ ರಕ್ಷಣೆಗಾಗಿ ಈ ಹಿಂದೆ ಕಲ್ಪಿಸಲಾಗಿದ್ದ ಪೊಲೀಸ್ ಸಬ್ ಡಿವಿಷನ್ ಹಂಪಿಯಲ್ಲಿ ಪುನಃ ತೆರೆಯುವುದರ ಜೊತೆಗೆ, ಆನೆಗೊಂದಿಯಲ್ಲಿ ಪ್ರತ್ಯೇಕ ಪೊಲೀಸ್ ಠಾಣೆ ನಿರ್ಮಿಸಿ ಉತ್ತಮ ಭದ್ರತಾ ವ್ಯವಸ್ಥೆ ಕಲ್ಪಿಸಬೇಕೆಂದು ಮನವಿ ಮಾಡುತ್ತೇನೆ.
ಭಾರತದಲ್ಲಿಯೇ ಅತಿ ಹೆಚ್ಚು ದೇಶ-ವಿದೇಶಗಳ ಪ್ರವಾಸಿಗರು ಆಗಮಿಸುವ ಪ್ರಸಿದ್ಧ ಪುಣ್ಯಕ್ಷೇತ್ರ ಹಾಗೂ ಪ್ರವಾಸಿ ತಾಣಗಳಾಗಿರುವ ಹಂಪಿ ಮತ್ತು ಆನೆಗೊಂದಿ ಭಾಗದ ಪ್ರತಿಯೊಬ್ಬರ ಸುರಕ್ಷತೆ ಕಾಪಾಡುವಲ್ಲಿ ಸರ್ಕಾರ ಬದ್ಧತೆ ತೋರಲಿ ಎಂಬುವುದು ನನ್ನ ಆಶಯವಾಗಿದೆ.ಈ ಘಟನೆಯ ನಂತರ 150 ವಿದೇಶಿ ಪ್ರವಾಸಿಗರು ಹೋಂ ಸ್ಟೇ, ರೆಸಾರ್ಟ್ಗಳಿಂದ ನಿರ್ಗಮಿಸಿ ತಮ್ಮ ತಮ್ಮ ದೇಶಗಳಿಗೆ ತೆರಳಿರುವುದು ಬಹಳ ನೋವಿನ ಸಂಗತಿ ಎಂದಿದ್ದಾರೆ.
