ಬೆಂಗಳೂರು:
ಡಾ.ಶಿವರಾಮ ಕಾರಂತ ಬಡಾವಣೆಯಲ್ಲಿ ನಿವೇಶನ ಹಂಚಿಕೆಗೆ ಅರ್ಜಿ ಆಹ್ವಾನಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಮುಂದಾಗಿದ್ದು, ಬನಶಂಕರಿ 6ನೇ ಹಂತದ ಬಡಾವಣೆಯಲ್ಲಿ 1500ಕ್ಕೂ ಹೆಚ್ಚು ನಿವೇಶನ ಮಾಲೀಕರಿಗೆ ಶಿವರಾಮ ಕಾರಂತ ಬಡಾವಣೆಯಲ್ಲಿ ಪರ್ಯಾಯ ನಿವೇಶನ ನೀಡಬೇಕು ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಸುರೇಶ್ ಕುಮಾರ್ ಒತ್ತಾಯಿಸಿದ್ದಾರೆ.
ಈ ಸಂಬಂಧ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿರುವ ಸುರೇಶ್ ಕುಮಾರ್ ಅವರು, ಡಾ.ಶಿವರಾಮ ಕಾರಂತ ಬಡಾವಣೆಯಲ್ಲಿ ನಿವೇಶನ ಹಂಚಿಕೆಗೆ ನಾಗರಿಕರಿಂದ ಅರ್ಜಿ ಆಹ್ವಾನಿಸಲು ಬಿಡಿಎ ಸಿದ್ಧತೆ ನಡೆಸಿರುವುದು ಮಾಧ್ಯಮಗಳ ಮೂಲಕ ಗಮನಕ್ಕೆ ಬಂದಿದ್ದು, ತುರಹಳ್ಳಿ ಅರಣ್ಯ ಪ್ರದೇಶವಾಗಿರುವ ಬನಶಂಕರಿ 6ನೇ ಹಂತದ ಬಡಾವಣೆಯಲ್ಲಿ ನಿವೇಶನ ಹಂಚಿಕೆ ವಿಚಾರವಾಗಿ ನಿಮ್ಮ ಗಮನ ಸೆಳೆಯುತ್ತಿದ್ದೇನೆ.
ಸುಮಾರು 20 ವರ್ಷಗಳ ಹಿಂದೆ 2003-2004ರಲ್ಲಿ ಅರಣ್ಯ ಪ್ರದೇಶದ ಬಫರ್ ವಲಯದಲ್ಲಿ 1,500ಕ್ಕೂ ಹೆಚ್ಚು ನಿವೇಶನ ಹಂಚಿಕೆ ಮಾಡಲಾಗಿದೆ. ಅರಣ್ಯ ಇಲಾಖೆ ಮತ್ತು ಬಿಡಿಎ ನಡುವಿನ ಹಗ್ಗಜಗ್ಗಾಟದಿಂದ ನಿವೇಶನ ಮಾಲೀಕರಿಗೆ ಇದುವರೆಗೂ ಮನೆ ನಿರ್ಮಿಸಿಕೊಳ್ಳಲು ಸಾಧ್ಯವಾಗಿಲ್ಲ ಮತ್ತು ಭೂಮಿಯ ಮಾಲೀಕತ್ವದ ಬಗ್ಗೆ ಚರ್ಚಿಸಲು ಹಾಗೂ ಒಪ್ಪಂದಕ್ಕೆ ಬರಲು ಸಾಧ್ಯವಾಗಲಿಲ್ಲ.’ ಎಂದು ಮಾಜಿ ಸಚಿವರು ತಿಳಿಸಿದ್ದಾರೆ.
ಅದೇ ರೀತಿ ಬನಶಂಕರಿ 6ನೇ ಹಂತ, ಅರ್ಕಾವತಿ ಲೇಔಟ್, ವಿಶ್ವೇಶ್ವರಯ್ಯ ಲೇಔಟ್, ಅಂಜನಾಪುರ ಬಿಡಿಎ ಬಡಾವಣೆಗಳಲ್ಲಿ 5 ಸಾವಿರಕ್ಕೂ ಹೆಚ್ಚು ನಿವೇಶನಗಳ ಮಾಲೀಕರು ತಮ್ಮ ಜಮೀನು ವಾಸ್ತವಿಕ ಸ್ವಾಧೀನದಲ್ಲಿ ಇಲ್ಲದ ಕಾರಣ ಮನೆ ನಿರ್ಮಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹಲವು ಪ್ರಕರಣಗಳಲ್ಲಿ ಭೂಸ್ವಾಧೀನಪಡಿಸಿಕೊಂಡಿರುವ ಜಮೀನು ಮಾಲೀಕರು ತಮ್ಮ ಜಮೀನಿಗೆ ಬದಲಾಗಿ ಬಿಡಿಎ ನೀಡುವ ಪರಿಹಾರಕ್ಕಾಗಿ ವರ್ಷಗಟ್ಟಲೆ ಕಾಯುತ್ತಿದ್ದಾರೆ.
ಈ ಬಡಾವಣೆಗಳಲ್ಲಿ ನಿವೇಶನ ಹಂಚಿಕೆ ಮಾಡಿರುವ ಬಿಡಿಎ, ನೋಂದಣಿ ಮಾಡಿಕೊಂಡಿರುವ ಅರ್ಜಿದಾರರ ಹಾಗೂ ಭೂಮಾಲೀಕರ ಕುಂದುಕೊರತೆಗಳು ಆದ್ಯತೆಯ ಮೇರೆಗೆ ಪರಿಗಣಿಸಿ, ಶಿವರಾಮ ಕಾರಂತ ಬಡಾವಣೆಯಲ್ಲಿ ನಿವೇಶನ ಹಂಚಿಕೆಗೆ ಅರ್ಜಿ ಆಹ್ವಾನಿಸುವ ಮುನ್ನ ಈ ಸಂತ್ರಸ್ತರಿಗೆ ಪರ್ಯಾಯ ನಿವೇಶನ ನೀಡಬೇಕು ಎಂದು ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.
