ಬೆಂಗಳೂರು
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಾರಿಗೆ ನೌಕರರು ಮತ್ತೆ ಬೀದಿಗೆ ಇಳಿಯಲಿದ್ದಾರೆ. ಸರ್ಕಾರಿ ನೌಕರರ ಸರಿಸಮಾನ ವೇತನ ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ನೌಕರರು ಪ್ರತಿಭಟಿಸಲು ತೀರ್ಮಾನಿಸಿದ್ದಾರೆ.
ಮುಂದಿನ ತಿಂಗಳ ಮಾರ್ಚ್ 4ರಂದು ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲು ತೀರ್ಮಾನಿಸಿದ್ದಾರೆ. ಈ ಹಿಂದಿನ ಸಾರಿಗೆ ನೌಕರರ ಹಿಂದಿನ ಮುಷ್ಕರಗಳಲ್ಲಿ ಸಿಬ್ಬಂದಿ ಮೇಲೆ ದಾಖಲಾದ ಪ್ರಕರಣ ಹಿಂಪಡೆಯಬೇಕು. ನಮಗೂ ಸರಿಸಮಾನ ವೇತನ, ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿರುವ ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ವತಿಯಿಂದ ಈ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕ ಮಾಹಿತಿ ನೀಡಿದೆ.
ಕಳೆದ 2020ರ ಡಿಸೆಂಬರ್ ಹಾಗೂ ನಂತರ ವರ್ಷದ 2021ರ ಏಪ್ರಿಲ್ ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿ ಕಾರ್ಮಿಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅವರ ವಿರುದ್ಧ ಕೈಗೊಂಡ ಎಲ್ಲಾ ಶಿಸ್ತಿನ ಕ್ರಮಗಳನ್ನು ಹಾಗೂ ದಾಖಲಾದ 60ಕ್ಕೂ ಹೆಚ್ಚು ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಬಿ.ಎಸ್.ಸುರೇಶ್ ಮಾಹಿತಿ ನೀಡಿದರು.
ಇನ್ನೂ ಪೂರ್ವದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸ್ಥಳಕ್ಕೆ ನಿಯೋಜಿಸಬೇಕು. 2020ರ ಜ.1ರಿಂದ ಅನ್ವಯವಾಗುವಂತೆ ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿಗೆ ಒಂದೇ ಕಂತಿನಲ್ಲಿ ವೇತನದ ಹಿಂಬಾಕಿ ಪಾವತಿಸಬೇಕು. ಅಲ್ಲದೇ 2020ರಿಂದ ನಿವೃತ್ತಿಯಾದ ನೌಕರರಿಗೆ ವೇತನ ವಿಮರ್ಶೆ ಮಾಡಿ ಬಾಕಿ, ಹಿಂಬಾಕಿ ಮೊತ್ತವನ್ನು ತ್ವರಿತವಾಗಿ ಪಾವತಿ ಮಾಡಬೇಕು ಎಂದು ತಿಳಿಸಿದರು.
ಉಚಿತ ಆರೋಗ್ಯ ಭಾಗ್ಯ ಯೋಜನೆ ಜಾರಿಗೊಳಿಸಬೇಕು. ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿರುವಂತೆ ಸಮಾನ ವೇತನ ಮತ್ತು ಸೌಲ ಸೌಭ್ಯವನ್ನು ಸಾರಿಗೆ ನೌಕರರಿಗೂ ಸರ್ಕಾರ ವಿಸ್ತರಣೆ ಮಾಡಬೇಕು. ದಿ ಕಾರ್ಮಿಕರ ಸಂಸ್ಥೆಗೆ ಕೂಡಲೇ ಚುನಾವಣೆ ನಡೆಸಿ, ಮಾನ್ಯತೆ ಪ್ರಶ್ನೆ ಇತ್ಯರ್ಥಗೊಳಿಸಬೇಕು ಎಂದು ಅವರು ಸರ್ಕಾರಕ್ಕೆ ಮನವಿ ಮಾಡಿದರು.
ಈ ಎಲ್ಲ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರಕ್ಕೆ ಒತ್ತಡ ತರಲು ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅವರು ವಿವರಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ
![](https://prajapragathi.com/wp-content/uploads/2023/11/ksrtc.gif)