ಬೆಂಗಳೂರು
ಕಳೆದ ಎರಡು ವರ್ಷಗಳಲ್ಲಿ ಮಹಿಳೆಯರು ಮತ್ತು ಮಕ್ಕಳಲ್ಲಿ ಅಪೌಷ್ಟಿಕತೆ ಪ್ರಮಾಣ ಶೇಕಡ 50ರಷ್ಟು ಕಡಿಮೆಯಾಗಿದೆ ಎಂದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ಗಣಿ, ಭೂ ವಿಜ್ಞಾನ, ವಿಶೇಷ ಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಸಚಿವ ಹಾಲಪ್ಪ ಆಚಾರ್ ವಿಧಾನ ಪರಿಷತ್ಗಿಂದು ತಿಳಿಸಿದರು.
ಪ್ರಶ್ನೋತ್ತರ ಕಲಾಪದಲ್ಲಿ ಡಾ. ತಳವಾರ್ ಸಾಬಣ್ಣ ಅವರ ಪ್ರಸ್ತಾಪಗಳಿಗೆ ಉತ್ತರಿಸಿದ ಸಚಿವರು, ಮಕ್ಕಳು ಮತ್ತು ಮಹಿಳೆಯರಲ್ಲಿ ಅಪೌಷ್ಟಿತೆ ಹೋಗಲಾಡಿಸಲು ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದು, 2019-20ಕ್ಕೆ ಹೋಲಿಸಿದರೆ 2021-22ರಲ್ಲಿ ಅಪೌಷ್ಟಿಕತೆಯ ಪ್ರಮಾಣ ಅರ್ಧದಷ್ಟು ಕಡಿಮೆಯಾಗಿದೆ ಎಂದರು.
ಎರಡು ವರ್ಷಗಳ ಹಿಂದೆ ಎರಡು ಲಕ್ಷ ಮಕ್ಕಳು ಅಪೌಷ್ಟಿಕತೆ ಸಮಸ್ಯೆಗೆ ಸಿಲುಕಿದ್ದವು. ಸರ್ಕಾರದ ರಚನಾತ್ಮಕ ಕ್ರಮಗಳಿಂದಾಗಿ ಇದೀಗ ಈ ಪ್ರಮಾಣ ಅರ್ದದಷ್ಟು ತಗ್ಗಿದೆ. ಕೇಂದ್ರ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿದ್ದು, 6 ತಿಂಗಳಿಂದ 6 ವರ್ಷದ ಮಕ್ಕಳಿಗಾಗಿ ಇರುವ ಕಾರ್ಯಕ್ರಮಗಳನ್ನು ಸರ್ಕಾರ ಸಮರ್ಪಕವಾಗಿ ಬಳಸಿಕೊಳ್ಳುತ್ತಿದೆ. ಅಪೌಷ್ಟಿಕತೆ ಇರುವ ಪ್ರತಿಯೊಂದು ಮಗುವಿಗೆ 8 ರೂ, ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಗುವಿಗೆ 12 ರೂ ವೆಚ್ಚ ಮಾಡಲಾಗುತ್ತಿದೆ ಎಂದರು.
ಕೆಲವು ಮಹತ್ವಾಕಾಂಕ್ಷೆ ಜಿಲ್ಲೆಗಳ ಅಪೌಷ್ಟಿಕತೆ ಮಕ್ಕಳಿಗೆ ಸೀಮಿತವಾಗಿದ್ದ ಮೊಟ್ಟೆ ಮತ್ತು ಹಾಲು ನೀಡುವ ಕಾರ್ಯಕ್ರಮವನ್ನು ಇದೀಗ ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗಿದೆ. ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವ ಬಗ್ಗೆ ಮೇಲ್ವಿಚಾರಣಾ ಸಮಿತಿ ನಿಗಾವಹಿಸುತ್ತಿದೆ. ಬಾಲ ವಿಕಾಸ ಸಮಿತಿಯೂ ಕೂಡ ಸೂಕ್ತ ಕಣ್ಗಾವಲು ಹಾಕಿದೆ.
ಆರೋಗ್ಯ ಇಲಾಖೆಯಿಂದಲೂ ಸೂಕ್ತ ಸಲಹೆ ಮತ್ತು ಮಾರ್ಗದರ್ಶನ ಪಡೆದುಕೊಳ್ಳಲಾಗುತ್ತಿದೆ. ಈ ಎಲ್ಲಾ ಸಕಾರಾತ್ಮಕ ಕ್ರಮಗಳಿಂದಾಗಿ ಅಪೌಷ್ಟಿಕತೆ ಸಮಸ್ಯೆ ತಗ್ಗಿಸಲು ಸಾಧ್ಯವಾಗಿದೆ ಎಂದು ಸಚಿವ ಹಾಲಪ್ಪ ಆಚಾರ್ ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ