ಬೆಂಗಳೂರು:
ಬೆಂಗಳೂರಿಗೆ ಸೋಮವಾರ ನಸುಕಿನ ಜಾವವೇ ಭಾರೀ ಮಳೆಯ ದರ್ಶನವಾಗಿದೆ. ಸತತವಾಗಿ ಸುರಿದ ಮಳೆಯಿಂದಾಗಿ ಮನೆಯಿಂದ ಹೊರಬರಲಾಗದ ಸ್ಥಿತಿ ನಿರ್ಮಾಣವಾಗಿದೆ.
ರಾಜಧಾನಿಯ ಹಲವು ರಸ್ತೆಗಳು ಜಲಾವೃತವಾಗಿದ್ದು, ಇನ್ನು ಕೆಲವು ರಸ್ತೆಗಳು ಕೆಸರುಮಯವಾಗಿ ವಾಹನ ಸವಾರರು, ಪಾದಚಾರಿಗಳು ಪರದಾಡುವಂತಾಯಿತು. ಬೆಳಗ್ಗೆ ಕಚೇರಿಗೆ ಹೋಗುವವರು, ಶಾಲೆ-ಕಾಲೇಜುಗಳಿಗೆ ಹೋಗುವವರಿಗೆ ತೊಂದರೆಯಾಗಿದೆ. ನೀರು ನಿಂತು ಅಂಡರ್ಪಾಸ್ಗಳು ಜಲಾವೃತಗೊಂಡಿವೆ. ಚಿಕ್ಕಪೇಟೆ ಮೆಟ್ರೋ ನಿಲ್ದಾಣ ಮುಂಭಾಗದ ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ.
ಹಲವು ಭಾಗಗಳಲ್ಲಿ ಮಧ್ಯರಾತ್ರಿಯೇ ಮಳೆ ಆರಂಭವಾಗಿದೆ. ಮೆಜೆಸ್ಟಿಕ್, ಓಕಳಿಪುರ, ರಾಜಾಜಿನಗರ, ಮಲ್ಲೇಶ್ವರಂ, ಯಶವಂತಪುರ, ಶಾಂತಿನಗರ, ಕೋರಮಂಗಲ, ವಿಧಾನಸೌಧ, ಶಿವಾಜಿನಗರ, ಕಾರ್ಪೊರೇಷನ್ ಸರ್ಕಲ್, ಟೌನ್ಹಾಲ್, ಕೆ.ಆರ್.ಮಾರ್ಕೆಟ್, ತ್ಯಾಗರಾಜನಗರ, ಜಯನಗರ, ಹನುಮಂತನಗರ, ಶ್ರೀನಗರ, ಮೈಸೂರು ರಸ್ತೆ, ನಾಯಂಡಹಳ್ಳಿ, ಮಾಗಡಿ ರಸ್ತೆ, ವಿಜಯನಗರ, ಕೆಂಗೇರಿ, ಶಿವಾನಂದ ಸರ್ಕಲ್, ಮೇಖ್ರಿ ಸರ್ಕಲ್, ಹೆಬ್ಬಾಳ, ಯಲಹಂಕ, ಕೆ.ಆರ್.ಪುರಂ ಸೇರಿದಂತೆ ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು ರಸ್ತೆಗಳು ಜಲಾವೃತಗೊಂಡಿವೆ.