ಬೆಂಗಳೂರು
ಆಡದಲೆ ಮಾಡುವವನು ರೂಢಿಯೊಳಗುತ್ತಮನು, ಆಡಿ ಮಾಡುವವನು ಮಧ್ಯಮನು, ತಾನಾಡಿಯೂ ಮಾಡದವನು ಅಧಮನು? ಎಂಬ ವಚನ ಬಿಜೆಪಿ ಸರ್ಕಾರಕ್ಕೆ ಹಾಗೂ ರಾಜ್ಯ ಬಜೆಟ್ ಗೆ ಹೆಚ್ಚು ಹೊಂದಾಣಿಕೆಯಾಗುತ್ತದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
2023-24ನೇ ಸಾಲಿನ ರಾಜ್ಯ ಬಜೆಟ್ ಗೆ ಪ್ರತಿಕ್ರಿಯೆ ನೀಡಿದ ಅವರು, ಮಕ್ಕಳು ಸಾಕುವ ಜವಾಬ್ದಾರಿ ಇಲ್ಲದೆ ಹೋದರೆ ಎಷ್ಟು ಮಕ್ಕಳಾದರೂ ಆಗಲಿ ಎಂದು ಸುಮ್ಮನಿರಬಹುದು, ಅದೇ ರೀತಿ ಅನುಷ್ಠಾನ ಮಾಡುವ ಜವಾಬ್ದಾರಿ ಇಲ್ಲದೆ ಹೋದರೆ ಎಷ್ಟು ಭರವಸೆಗಳನ್ನು ಬೇಕಾದರೂ ಕೊಡಬಹುದು ಎಂಬಂತಿದೆ ಈ ಬಜೆಟ್. ಇಲ್ಲಿ ಘೋಷಣೆ ಮಾಡಿರುವ ಯಾವ ಯೋಜನೆಯನ್ನು ಕೂಡ ಜಾರಿ ಮಾಡುವ ಬದ್ಧತೆ ಸರ್ಕಾರಕ್ಕಿಲ್ಲ. ಚುನಾಯಿತ ಸರ್ಕಾರಗಳು ಪಾರದರ್ಶಕವಾಗಿ ಮತ್ತು ಉತ್ತರದಾಯಿಯಾಗಿರಬೇಕು. ಮತದಾರರಿಂದ ಯಾವುದನ್ನೂ ಮುಚ್ಚಿಡಲು ಹೋಗಬಾರದು ಎಂದರು.
ಇದು ಬಿಜೆಪಿ ಸರ್ಕಾರದ ಚುನಾವಣಾ ಬಜೆಟ್. ಇನ್ನು 2 ತಿಂಗಳಲ್ಲಿ ಚುನಾವಣೆ ಇರುವುದರಿಂದ ಇದನ್ನು ಬಿಜೆಪಿ ಸರ್ಕಾರದ ನಿರ್ಗಮನದ ಬಜೆಟ್ ಎನ್ನಬಹುದು. ಕಳೆದ ಬಜೆಟ್ ನಲ್ಲಿ ಘೋಷಿಸಿದ್ದ 56 ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿಲ್ಲ. 2018ರಲ್ಲಿ ನೀಡಿದ್ದ 600 ಭರವಸೆಗಳಲ್ಲಿ 90% ಈಡೇರಿಸಿಲ್ಲ. ನಮ್ಮ ಸರ್ಕಾರದ ಕೊನೆಯ ಬಜೆಟ್ ನಲ್ಲಿ 5 ವರ್ಷದಲ್ಲಿ ನಮ್ಮ ಸರ್ಕಾರದ ಸಾಧನೆಗಳೇನು ಮತ್ತು ಮುಂದೆ ಅಧಿಕಾರಕ್ಕೆ ಬಂದಾಗ ಏನೇನು ಮಾಡುತ್ತೇವೆ ಎಂದು ಸ್ಪಷ್ಟವಾಗಿ ಹೇಳಿದ್ದೆವು, ಆದರೆ ಈ ಬಜೆಟ್ ಪುಸ್ತಕದಲ್ಲಿ ಬಿಜೆಪಿ ಸರ್ಕಾರದ ಸಾಧನೆಗಳ ಮಾಹಿತಿಯೇ ಇಲ್ಲ. ಕಳೆದ ಬಜೆಟ್ ನಲ್ಲಿ 206 ಹೊಸ ಕಾರ್ಯಕ್ರಮಗಳನ್ನು ಘೋಷಣೆ ಮಾಡಿದ್ದರು, ಅದರಲ್ಲಿ 56 ಕಾರ್ಯಕ್ರಮಗಳನ್ನು ಜಾರಿ ಮಾಡೇ ಇಲ್ಲ. ಹಾಗಾಗಿ ಬಜೆಟ್ ಗೆ ಸರ್ವಜ್ಞನ ವಚನ ಸೂಕ್ತ ಎಂದರು.
2 ಲಕ್ಷದ 2 ಸಾವಿರ ಕೋಟಿ ಬಜೆಟ್ ಗಾತ್ರ ಇದ್ದ ತಮ್ಮ ಸರ್ಕಾರದಲ್ಲಿ ಎಸ್,ಸಿ,ಪಿ/ಟಿ,ಎಸ್,ಪಿ ಯೋಜನೆಗೆ ನಾವು 30,000 ಕೋಟಿ ಹಣ ನೀಡಿದ್ದೆವು, ಆದರೆ ಈಗಿನ ಬಜೆಟ್ ಗಾತ್ರ 3 ಲಕ್ಷದ 9ಸಾವಿರ ಕೋಟಿ ಇದ್ದರೂ ಈ ಯೋಜನೆಗೆ ನೀಡಿರುವ ಅನುದಾನ 30,000 ಕೋಟಿ ದಾಟಿಲ್ಲ. ಹಿಂದಿನ ವರ್ಷ ಖರ್ಚಾಗಿರುವ ಹಣವನ್ನೂ ಹೇಳಿಲ್ಲ, ದಲಿತ ಸಮುದಾಯಕ್ಕೆ ಕನಿಷ್ಠ 50,000 ಕೋಟಿ ರೂ. ನೀಡಬೇಕಿತ್ತು. ಇದು ದಲಿತರಿಗೆ, ಪರಿಶಿಷ್ಟ ಜಾತಿ ಮತ್ತು ವರ್ಗದ ಜನರಿಗೆ ಮಾಡಿರುವ ದೊಡ್ಡ ದ್ರೋಹ ಎಂದು ಟೀಕಿಸಿದರು.
ಈ ವರ್ಷದ ಅಂತ್ಯಕ್ಕೆ 5,64,896 ಕೋಟಿ ರೂ. ಸಾಲ ಆಗುತ್ತದೆ ಎಂದು ಹೇಳಿದ್ದಾರೆ. ನಾವು ಅಧಿಕಾರದಿಂದ ಇಳಿದಾಗ ರಾಜ್ಯದ ಮೇಲೆ 2 ಲಕ್ಷದ 42 ಸಾವಿರ ಕೋಟಿ ರೂ. ಇತ್ತು, ಅಂದರೆ ಈಗ 3 ಲಕ್ಷದ 22 ಸಾವಿರ ಕೋಟಿ ಸಾಲ ಹೆಚ್ಚಾಗಿದೆ. 2018-19ರಲ್ಲಿ ಸಮ್ಮಿಶ್ರ ಸರ್ಕಾರ ಮಾಡಿದ್ದ ಸಾಲ 41,914 ಕೋಟಿ ರೂ. ಇದನ್ನು ಬಿಟ್ಟರೆ ಉಳಿದ ನಾಲ್ಕು ವರ್ಷದಲ್ಲಿ ಬಿಜೆಪಿ ಸರ್ಕಾರ 2,54,760 ಕೋಟಿ ರೂ. ಸಾಲ ಮಾಡಿದೆ. ಸ್ವಾತಂತ್ರ÷್ಯ ಬಂದ ನಂತರದಿAದ ನಮ್ಮ ಸರ್ಕಾರದ ಕೊನೆಯವರೆಗೆ ಇದ್ದ ಸಾಲ 2 ಲಕ್ಷದ 42 ಸಾವಿರ ಕೋಟಿ, ನಮ್ಮ 5 ವರ್ಷಗಳ ಆಡಳಿತದಲ್ಲಿ ಮಾಡಿದ್ದ ಒಟ್ಟು ಸಾಲ 1,16,512 ಕೋಟಿ ರೂ. ಸಾಲ ಎಲ್ಲಾ ಕಾಲದಲ್ಲೂ ಎಲ್ಲ ಸರ್ಕಾರಗಳು ಮಾಡುತ್ತವೆ, ಆದರೆ ಬರೀ ನಾಲ್ಕೇ ವರ್ಷದಲ್ಲಿ 3,22,000 ಕೋಟಿ ಸಾಲ ಮಾಡಿದ್ದಾರೆ ಎಂದರು.
ಸಾಲ ಹೆಚ್ಚಾಗಿರುವುದರಿಂದ ಕೇವಲ ಬಡ್ಡಿ ರೂಪದಲ್ಲಿ ನಾವು 34,000 ಕೋಟಿ ರೂ. ಹಣ ಪಾವತಿ ಮಾಡಬೇಕಾಗುತ್ತದೆ. ಈ ಸರ್ಕಾರ ರಾಜ್ಯದ ಜನರನ್ನು ಸಾಲಗಾರರನ್ನಾಗಿ ಮಾಡಿದೆ, ಕೊಟ್ಟ ಭರವಸೆಗಳನ್ನು ಕೂಡ ಈಡೇರಿಸಿಲ್ಲ, ಬಡ್ಡಿ ರೂಪದಲ್ಲಿ ಹೆಚ್ಚು ಪಾವತಿ ಮಾಡಬೇಕಾಗಿರುವುದರಿಂದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನವೂ ಕಡಿಮೆಯಾಗುತ್ತದೆ. ಮುಂದಿನ ವರ್ಷಕ್ಕೆ 77,750 ಕೋಟಿ ಸಾಲ ಮಾಡುವುದಾಗಿ ಸರ್ಕಾರ ಹೇಳಿದೆ. ಸಾಲದ ಪ್ರಮಾಣ 95% ಹೆಚ್ಚಾಗಿದೆ. ಹೀಗಾದಾಗ ಬಜೆಟ್ ಅಭಿವೃದ್ಧಿಪರವಾಗಿರಲು ಹೇಗೆ ಸಾಧ್ಯ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ಕರ್ನಾಟಕದಿಂದ ವಿವಿಧ ತೆರಿಗೆಗಳ ರೂಪದಲ್ಲಿ 4 ಲಕ್ಷದ 75 ಸಾವಿರ ಕೋಟಿ ರೂ. ಕೇಂದ್ರ ಸರ್ಕಾರಕ್ಕೆ ಹೋಗುತ್ತದೆ. ಕೇಂದ್ರ ತೆರಿಗೆಯಲ್ಲಿ ನಮ್ಮ ಪಾಲು 34,596 ಕೋಟಿ ರೂ. ಬರಲಿದೆ ಎಂದು ಅಂದಾಜು ಮಾಡಿದ್ದಾರೆ. ಮುಂದಿನ ವರ್ಷ 37,250 ಕೋಟಿ ರೂ. ಬರಲಿದೆ ಎಂದಿದ್ದಾರೆ. 37,000 ಕೋಟಿ ಕೇಂದ್ರ ಸರ್ಕಾರದ ಅನುದಾನಗಳು, ಬಜೆಟ್ ಅಂದಾಜಿಲ್ಲಿ ಈ ವರ್ಷದಲ್ಲಿ 17,281 ಕೋಟಿ ಇತ್ತು, ಪರಿಷ್ಕöÈತ ಅಂದಾಜಿನಲ್ಲಿ 12,391 ಕೋಟಿ ರೂ. ಗೆ ಇಳಿದಿತ್ತು. ಅಂದರೆ ಕೇಂದ್ರ ಸರ್ಕಾರದ ಆರ್ಥಿಕ ನೆರವು 5,000 ಕೋಟಿ ಕಡಿಮೆಯಾಗಿದೆ ಎಂದು ಸರ್ಕಾರವೇ ಅಂದಾಜು ಮಾಡಿದೆ. ಮುಂದಿನ ವರ್ಷ 13,005 ಕೋಟಿ ಕೇಂದ್ರದ ಸಹಾಯಧನ ಬರಲಿದೆ ಎಂದು ಹೇಳಿದ್ದಾರೆ. ಇವೆರಡು ಒಟ್ಟು ಸೇರಿಸಿದರೆ 50,257 ಕೋಟಿ ಆಗುತ್ತದೆ, ನಮ್ಮಿಂದ ವಸೂಲಾಗುವ ತೆರಿಗೆ 4 ಲಕ್ಷದ 75 ಸಾವಿರ ಕೋಟಿ. ಇದು ಕೇಂದ್ರ ಸರ್ಕಾರದಿಂದ ರಾಜ್ಯದ ಜನರಿಗೆ ಆಗಿರುವ ದೊಡ್ಡ ಅನ್ಯಾಯ ಎಂದರು.
ಇಂದು ಇಷ್ಟೊಂದು ಸಾಲ ಆಗಲು ಕೇಂದ್ರ ಸರ್ಕಾರದಿಂದ ಬರುತ್ತಿರುವ ಅನುದಾನ ಕಡಿಮೆಯಾ ಗುತ್ತಿರುವುದು ಕಾರಣ. ನಮ್ಮ ತೆರಿಗೆ ಪಾಲು, ಕೇಂದ್ರ ಪ್ರಾಯೋಜಿತ ಯೋಜನೆಗಳಲ್ಲಿ ಕೇಂದ್ರದ ಪಾಲು ಕಡಿಮೆಯಾದದ್ದು ಹಾಗೂ ಕೇಂದ್ರದಿAದ ಬರುವ ಆರ್ಥಿಕ ನೆರವಿನ ಪ್ರಮಾಣ ಇಳಿಕೆ ಯಾಗಿರುವುದರಿಂದ ಸುಮಾರು 80,000 ಕೋಟಿಯಷ್ಟು ಸಾಲ ಮಾಡಬೇಕಾಗಿದೆ. 2.40 ಲಕ್ಷ ಕೋಟಿ ನೇರ ತೆರಿಗೆ ರೂಪದಲ್ಲಿ, ಜಿಎಸ್ಟಿ ರೂಪದಲ್ಲಿ 1.30 ಲಕ್ಷ ಕೋಟಿ, ಸೆಸ್ ಗಳ ರೂಪದಲ್ಲಿ 30,000 ಕೋಟಿ, ಹೀಗೆ ಒಟ್ಟು 4 ಲಕ್ಷದ 72 ಸಾವಿರ ಕೋಟಿ ನಮ್ಮ ರಾಜ್ಯದಿಂದ ವಿವಿಧ ರೂಪದ ತೆರಿಗೆಯ ಮೂಲಕ ಹಣ ಸಂಗ್ರಹವಾಗುತ್ತಿದೆ. ಕೇಂದ್ರದಿAದ ರಾಜ್ಯಕ್ಕೆ ವಾಪಾಸು ಕಡಿಮೆ ಅನುದಾನ ಬಂದರೂ ಪ್ರತಿ ಮಾತಿಗೂ ಮೋದಿ ಅವರನ್ನು ಹಾಡಿ ಹೊಗಳಿದ್ದಾರೆ
ಮಜ್ಜಿಗೆ, ಮೊಸರು, ಅಕ್ಕಿ, ಗೋದಿ, ಮಂಡಕ್ಕಿ, ಪೆನ್ನು, ಪೆನ್ಸಿಲ್ ಮೇಲೆ ತೆರಿಗೆ ಹಾಕಿರುವುದರಿಂದ ತೆರಿಗೆ ಸಂಗ್ರಹ ಜಾಸ್ತಿಯಾಗಿದೆ. ಈ ಮೊದಲು ಇವುಗಳ ಮೇಲೆ ಶೂನ್ಯ ತೆರಿಗೆ ಇತ್ತು, ಇದನ್ನು 5 ರಿಂದ 18% ವರೆಗೆ ಏರಿಸಿದ್ದಾರೆ. ಜನರ ಮೇಲೆ ತೆರಿಗೆ ಹೆಚ್ಚು ಮಾಡಿರುವುದರಿಂದ ಸಂಗ್ರಹವಾದ ಹಣ ಕೇಂದ್ರ ಸರ್ಕಾರಕ್ಕೆ ಹೋಗುತ್ತದೆ, ಅದರಿಂದ ನಮಗೇನು ಲಾಭ?. ಸರ್ಕಾರದ ಕೆಟ್ಟ ಆರ್ಥಿಕ ನೀತಿಯಿಂದಾಗಿ ರಾಜ್ಯ ಸಾಲದ ಸುಳಿಗೆ ಸಿಲುಕಿದೆ, ಕಳೆದ ವರ್ಷ ಅಸಲು 14,000 ಕೋಟಿ ಸಂದಾಯ ಮಾಡಬೇಕಿತ್ತು, ಬಡ್ಡಿ ರೂಪದಲ್ಲಿ 34,000 ಕೋಟಿ ಕಟ್ಟಬೇಕಿರುವುದರಿಂದ ಸುಮಾರು ಅಸಲು, ಬಡ್ಡಿ ರೂಪದಲ್ಲಿ 48,000 ಕೋಟಿ ಸಾಲ ಮರುಪಾವತಿಗೆ ಹೋಗುತ್ತದೆ. ಸರ್ಕಾರ ರಾಜ್ಯವನ್ನು ದಿವಾಳಿ ಮಾಡಿದೆ ಎಂದು ನುಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2022/02/Siddaramaiah.jpg)