ತುಮಕೂರು :
ಕೊರೊನಾ 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರ ಹೊರಡಿಸಿರುವ ವಾರಾಂತ್ಯದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಹಾಗೂ ಜಿಲ್ಲೆಯಲ್ಲಿ ಇಂದೇ ಕೋವಿಡ್ ಕೇರ್ ಸೆಂಟರ್ಗಳು ಕಾರ್ಯಾರಂಭ ಮಾಡಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಮೂಲಕ ತಹಸೀಲ್ದಾರರು ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕಿನ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಪರೆನ್ಸ್ ಮೂಲಕ ಸಭೆ ನಡೆಸಿ ಅವರು ಸೂಚನೆಗಳನ್ನು ನೀಡಿದರು.
ವಾರಾಂತ್ಯದ ಕಪ್ರ್ಯೂ ಅವಧಿಯಲ್ಲಿ ಯಾವ್ಯಾವ ಚಟುವಟಿಕೆಗಳಿಗೆ ನಡೆಸಲು ಅವಕಾಶ ನೀಡಲಾಗಿದೆಯೋ ಅವುಗಳಿಗೆ ಅವಕಾಶ ಮಾಡಿಕೊಡಿ. ವಾರಾಂತ್ಯದ ಕಪ್ರ್ಯೂ ಮಾರ್ಗಸೂಚಿಗಳನ್ನು ಪೊಲೀಸ್ ಇಲಾಖೆಯ ಸಮನ್ವಯದೊಂದಿಗೆ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಕೊವೀಡ್ ಕೇರ್ ಸೆಂಟರ್ ಗಳಲ್ಲಿ ಸ್ವಚ್ಚತೆಯನ್ನು ಕಾಪಾಡಬೇಕು. ಪ್ರತಿನಿತ್ಯ ಕ್ಲಿನಿಂಗ್ ಮಾಡಬೇಕು ಎಂದರು.
ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿ ಆರಂಭಿಸುವ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಸೋಂಕಿತರನ್ನು ದಾಖಲು ಮಾಡಲು ಪ್ರಾರಂಭಿಸಬೇಕು. ಮಾರ್ಗಸೂಚಿನ್ವಯ ಸೋಂಕಿತರಿಗೆ ಉತ್ತಮ ಗುಣಮಟ್ಟದ ತಿಂಡಿ, ಊಟ ಹಾಗೂ ನೀರಿನ ವ್ಯವಸ್ಥೆ ಮಾಡಬೇಕು. ಕೋವಿಡ್ ಕೇರ್ ಸೆಂಟರ್ನಲ್ಲಿ ಪಿಪಿ ಕಿಟ್, ಎನ್ 95 ಮಾಸ್ಕ್, ತ್ರಿಬಲ್ ಲೇಯರ್ ಮಾಸ್ಕ್, ಸ್ಯಾನಿಟೈಸರ್ ಮತ್ತಿತರ ವ್ಯವಸ್ಥೆ ಕಲ್ಪಿಸಬೇಕು. ಅಲ್ಲಿ ಕರ್ತವ್ಯ ನಿರತ ವೈದ್ಯರು , ನರ್ಸಿಂಗ್ ಸಿಬ್ಬಂದಿಗಳು ದಿನದ 24 ಗಂಟೆಗಳ ಕಾಲ ಪಾಳಿಯಲ್ಲಿ ಕಾರ್ಯ ನಿರ್ವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.
ಕಳೆದ ಬಾರಿ ಕೋವಿಡ್ ಕೇರ್ ಸೆಂಟರ್ಗಳು ನಿರ್ವಹಣೆ ಮಾಡಿದಂತೆಯೇ ಈ ಬಾರಿಯು ನಿರ್ವಹಣೆ ಮಾಡಲು ವ್ಯವಸ್ಥೆ ಮಾಡಬೇಕು. ಅಗತ್ಯವಿರುವ ಆಕ್ಸಿಜನ್ ಅನ್ನು ಜಂಬೂ ಸಿಲಿಂಡರ್ಗಳಲ್ಲಿ ತುಂಬಿಸಿಕೊಳ್ಳಿ. ಯಾವುದೇ ಕಾರಣಕ್ಕೂ ಆಮ್ಲಜನಕದ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನಿಗಾವಹಿಸಬೇಕು. ರೆಮಿಡಿಸ್ವಿಯರ್ ಅಕ್ರಮವಾಗಿ ಮಾರಾಟವಾಗದಂತೆ ನಿಗಾ ಇಡಬೇಕು. ಸೋಂಕಿತರ ಕನಿಷ್ಠ 20 ಮಂದಿಯ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಬೇಕು ಎಂದು ಸೂಚಿಸಿದರು.
ಸರ್ಕಾರದ ಎಸ್ಒಪಿ ಯಂತೆ ಕೋವಿಡ್ ನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಹಸೀಲ್ದಾರ್ಗಳಿಗೆ ನಿರ್ದೇಶಿಸಿದರು. ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ಅಪರ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ, ಎಸಿ ಅಜಯ್ ಮತ್ತಿತರ ಅಧಿಕಾರಿಗಳು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ