ತುಮಕೂರು : ಸಾಂಕ್ರಾಮಿಕ ರೋಗಗಳ ಕಡಿವಾಣಕ್ಕೆ ಸಿಇಒ ಸೂಚನೆ

ತುಮಕೂರು : 

      ಸೊಳ್ಳೆಗಳಿಂದ ಹರಡಬಹುದಾದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ನಿರ್ದೇಶಿಸಿದರು.

     ಜಿಲ್ಲಾ ಪಂಚಾಯತ್ ವೀಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಬುಧವಾರ ನಡೆದ ಡೆಂಗ್ಯೂ ವಿರೋಧಿ ಮಾಸಾಚರಣೆ ಹಿನ್ನೆಲೆಯಲ್ಲಿ ಅಂತರ್ ಇಲಾಖಾ ಸಮನ್ವಯ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸೊಳ್ಳೆಗಳಿಂದ ಹರಡಬಹುದಾದ ಡೆಂಗ್ಯೂ, ಚಿಕೂನ್‍ಗುನ್ಯಾ, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳನ್ನು ನಿರ್ಮೂಲನೆ ಮಾಡಬೇಕೆಂದು ಸೂಚಿಸಿದರು.
ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ಎಲ್ಲಾ ಇಲಾಖೆಗಳು ಕೈಜೋಡಿಸಿ ಸ್ವಚ್ಚತೆ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಇಲಾಖೆಗಳು ಸಮನ್ವಯ ಸಾಧಿಸಿ ರೋಗಗಳ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ತಿಳಿಸಿದರು.

      ಸೊಳ್ಳೆಗಳ ಉತ್ಪತ್ತಿ ತಾಣಗಳನ್ನು ನಿರ್ಮೂಲನೆ ಮಾಡಬೇಕು. ಚರಂಡಿ, ತೆಂಗಿನ, ಎಳನೀರು ಚಿಪ್ಪು, ಟೈರ್, ಗಿಡಗಳ ಪಾಟ್, ನೀರಿನ ತೊಟ್ಟಿಗಳಲ್ಲಿ ಬಳಸದ ನೀರು ಸೇರಿದಂತೆ ಘನತ್ಯಾಜ್ಯ ವಸ್ತುಗಳಲ್ಲಿ ನೀರು ಸಂಗ್ರಹವಾಗದಂತೆ ನೈರ್ಮಲ್ಯ ಕಾಪಾಡುವಂತೆ ಅಧಿಕಾರಿಗಳು ಜಾಗೃತಿ ಮೂಡಿಸಬೇಕು. ಸಾಂಕ್ರಾಮಿಕ ರೋಗಗಳು ಉಲ್ಬಣಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.

      ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸೊಳ್ಳೆಗಳು ಉತ್ಪತ್ತಿಯಾಗದಂತೆ ಧೂಮೀಕರಣ ಮಾಡಬೇಕಲ್ಲದೆ, ಗ್ರಾಮಗಳಲ್ಲಿ ಚರಂಡಿ ಹಾಗೂ ಗುಂಡಿಗಳಲ್ಲಿ ನೀರು ನಿಲ್ಲದಂತೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿಗಳು ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಗ್ರಾಮಗಳಲ್ಲಿ ರೋಗಗಳು ಹರಡದಂತೆ ಎಚ್ಚರಿಕೆ ವಹಿಸಬೇಕು. ರೋಗಗಳು ಕಂಡುಬಂದಲ್ಲಿ ತಕ್ಷಣವೇ ರಕ್ತ ಪರೀಕ್ಷೆ ನಡೆಸಿ ಚಿಕಿತ್ಸೆ ನೀಡಲು ಕ್ರಮ ವಹಿಸುವಂತೆ ನಿರ್ದೇಶಿಸಿದರು.

      ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯಕ್ಕೆ ಮೊದಲ ಆದ್ಯತೆ ನೀಡಬೇಕು. ಅಂಗನವಾಡಿ, ಆಶಾ ಕಾರ್ಯಕರ್ತೆಯರ ಸೇವೆಯನ್ನು ಬಳಸಿಕೊಂಡು ಸಾಂಕ್ರಾಮಿಕ ರೋಗಗಳ ಬಗ್ಗೆ ಮನೆ ಮನೆಗೂ ಅರಿವು ಮೂಡಿಸಬೇಕು ಎಂದರು.
ಶಾಲೆಗಳು, ವಸತಿ ನಿಲಯಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಶೌಚಾಲಯ, ನೀರಿನ ತೊಟ್ಟಿಗಳನ್ನು ಶುಚಿಗೊಳಿಸಬೇಕು ಎಂದು ಸೂಚಿಸಿದರು. ಸಭೆ ನಂತರ ಡೆಂಗ್ಯೂ ನಿಯಂತ್ರಣ ಮಾಹಿತಿಯ ಕಿರು ಕರಪತ್ರ ಬಿಡುಗಡೆ ಮಾಡಲಾಯಿತು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸುರೇಶ್ ಬಾಬು, ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ಜಿಲ್ಲಾ ನಿಯಂತ್ರಣಾಧಿಕಾರಿ ಡಾ.ಪುರುಷೋತ್ತಮ್, ಡಿಡಿಪಿಐ ಸಿ.ನಂಜಯ್ಯ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ದಿವಾಕರ್ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇತರರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ